ಬಿಜೆಪಿ ಕೈಗೆ ಮತ್ತೆ ಹಿಂದು ಅಸ್ತ್ರ: ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ತಲೆಬೇನೆ

By Govindaraj SFirst Published Nov 9, 2022, 6:53 AM IST
Highlights

ಹಿಂದು ಎಂಬ ಪದ ಅಶ್ಲೀಲವಾದದ್ದು ಎನ್ನುವ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಆಡಳಿತಾರೂಢ ಬಿಜೆಪಿಗೆ ಪ್ರಬಲ ‘ಹಿಂದು ಅಸ್ತ್ರ’ ನೀಡಿದಂತಾಗಿದೆ. 

ಬೆಂಗಳೂರು (ನ.09): ಹಿಂದು ಎಂಬ ಪದ ಅಶ್ಲೀಲವಾದದ್ದು ಎನ್ನುವ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಆಡಳಿತಾರೂಢ ಬಿಜೆಪಿಗೆ ಪ್ರಬಲ ‘ಹಿಂದು ಅಸ್ತ್ರ’ ನೀಡಿದಂತಾಗಿದೆ. ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ನಿಧಾನವಾಗಿ ಕಾವು ಏರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ಕಾರ್ಯಾಧ್ಯಕ್ಷರ ಈ ಹೇಳಿಕೆ ಬಿಜೆಪಿ ಪಾಳೆಯದಲ್ಲಿ ತೀವ್ರ ಆಕ್ರೋಶ ಮೂಡಿಸಿದ್ದು, ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ಹಲವು ಸಚಿವರು ಹಾಗೂ ಮುಖಂಡರು ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದಾರೆ.

ಹಿಂದುತ್ವ ಟೀಕಿಸುವವರು ಸೂರ್ಯನಿಗೆ ಉಗಿದ ಹಾಗೆ: ಮುತಾಲಿಕ್‌

ಇದೇ ವೇಳೆ ರಾಜ್ಯ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲೂ ಜಾರಕಿಹೊಳಿ ಅವರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ರಾಜ್ಯ ಬಿಜೆಪಿಯು #ಹಿಂದೂವಿರೋಧಿಕಾಂಗ್ರೆಸ್‌ ಹಾಗೂ #CongressInsultsHindu ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್‌ ಅಭಿಯಾನ ಆರಂಭಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ಕುಮಾರ್‌ ಅವರು ‘ನಾನು ಸ್ವಾಭಿಮಾನಿ ಹಿಂದು’ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸಿದ್ದಾರೆ. ಅದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗಿದೆ.

ಕಳೆದ ಹಲವು ದಿನಗಳಿಂದ ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಆಪಾದನೆಗಳನ್ನು ಮಾಡುತ್ತಿದ್ದರು. ಅದಕ್ಕೆ ಸಂಬಂಧಿಸಿದಂತೆ ಪೇ ಸಿಎಂ ಅಭಿಯಾನವನ್ನೂ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಹಿಂದಿನ ಕಾಂಗ್ರೆಸ್‌ ಸರ್ಕಾರದ ಹಗರಣಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡುತ್ತಿದ್ದರು. ಈ ನಡುವೆ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರ ಹಿಂದು ಪದದ ಕುರಿತ ಹೇಳಿಕೆ ಬಿಜೆಪಿ ನಾಯಕರಿಗೆ ಸಕಾಲದಲ್ಲಿ ಪ್ರಬಲ ಅಸ್ತ್ರ ಒದಗಿಸಿದಂತಾಗಿದೆ. ಈ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌ ಮೇಲೆ ಮುಗಿಬಿದ್ದಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಈಗ ಇದನ್ನು ಎದುರಿಸುವುದು ದುಸ್ತರವಾದಂತಾಗಿದೆ.

ಇಂದು ಪ್ರತಿಭಟನೆ- ಕಟೀಲ್‌: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಹಿಂದು ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಅನಾವರಣಗೊಳಿಸಿದ್ದಾರೆ. ಇದನ್ನು ಖಂಡಿಸಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ 38 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. ಪಕ್ಷದ ಸಂಸದರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

Hindu word Row: ಜಾರಕಿಹೊಳಿಯವರನ್ನ ಪಕ್ಷದಿಂದ ಉಚ್ಛಾಟಿಸಲಿ ಎಂದ ಎಂಪಿ ರೇಣುಕಾಚಾರ್ಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನೀಡಿರುವ ಹಿಂದು ಎಂಬ ಪದ ಅಶ್ಲೀಲ ಹೇಳಿಕೆಯನ್ನು ಖಂಡಿಸಿ ಬಿಜೆಪಿಯು ಗುರುವಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಿದೆ.
-ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಜ್ಯಾಧ್ಯಕ್ಷ

click me!