
ಮೈಸೂರು, (ಡಿ.07): ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ (GT Devegowda) ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಒಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V Srinivas Prasad) ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ (Mysuru) ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಜಿ. ಟಿ. ದೇವೇಗೌಡ ಒಂದಾಗಿರುವುದು ಒಂದು ರೀತಿಯ ನಗೆಪಾಟಲಿಗೀಡಾಗಿದೆ. ಇದೇ ಜಿ. ಟಿ. ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪರ್ವ ಮಾಡಿದ್ದರು. ಜನತಾ ಪರಿವಾರ ಕಟ್ಟುತ್ತೇವೆ ಎಂದು ಓಡಾಡಿದ್ದರು ಎಂದರು.
Karnataka Politics: ಸಿದ್ದು ಸಿಎಂ ಆಗಲೆಂದು ಪೂಜೆ, ಜಿಟಿ ದೇವೇಗೌಡ್ರ ಬಾಗಿಲು ಬಂದ್ ಮಾಡಿದ ಎಚ್ಡಿಕೆ
ಇದೇ ಸಿದ್ದರಾಮಯ್ಯ ರಾತ್ರೋರಾತ್ರಿ ಊರು ಬಿಟ್ಟು ಬದಾಮಿಗೆ ಹೋಗಿ ನಿಂತರು. ಈ ವೇಳೆ 35 ಸಾವಿರ ಮತಗಳಿಂದ ಸೋತು ಸಿದ್ದರಾಮಯ್ಯಗೆ ಬುದ್ದಿ ಬಂದಿಲ್ಲ. ಸಿಎಂ ಆಗಿ ನೀವೇ ಹೆದರಿಕೊಂಡು ಓಡಿಹೋದ್ರೆ ಹೇಗೆ?. ವೀರಾವೇಷದ ಮಾತಗಳನ್ನು ಆಡಿದಿರಿ. ಆದರೆ ಹೆದರಿ ಬಾದಾಮಿಗೆ ಹೋದಿರಿ ಎಂದು ಲೇವಡಿ ಮಾಡಿದರು.
ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿ ಇದೀಗ ನಾನೇ ಸಿಎಂ ಎನ್ನುತ್ತಿದ್ದಾರೆ. ಏನೋ ಚುನಾವಣೆಯಲ್ಲಿ ಗೆದ್ದು ಬಂದಿದ್ದೀರಾ?. ಮೊದಲು ಅದನ್ನು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ ಎಂದರು.
ಇನ್ನು ಇದೇ ವೇಳೆ ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ಕುರಿತ ಮಾತನಾಡಿ, ಮೈಸೂರು ಹಾಗೂ ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ 2021ರ ಮತದಾನಕ್ಕೆ ಮೂರು ದಿನ ಮಾತ್ರ ಬಾಕಿ ಇದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ಎಲ್ಲಿಯೂ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್, ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ವಿಶ್ವಾಸ ವ್ಯಕ್ತಪಡಿಸಿದರು.
ಜಿಟಿಡಿ ವಿರುದ್ಧ ಎಚ್ಡಿಕೆ ಆಕ್ರೋಶ
ಸಿದ್ದರಾಮಯ್ಯ ರಾಜಕೀಯ ಒಳಿತಿಗಾಗಿ ಪೂಜೆ ಮಾಡಿದ್ದರಿಂದ ಕುಮಾರಸ್ವಾಮಿ, ಜಿಟಿಡಿ ಮೇಲೆ ಕೆಂಡಾಮಂಡಲರಾಗಿದ್ದು, ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ..
ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚಿಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡರು, ನಾನು ಮತ್ತು ಪುತ್ರ ನಿಖಿಲ್ ಸಾಕಷ್ಟು ಪ್ರಯತ್ನಿಸಿದೆವು. ಯಾರದ್ದೋ ಕಲ್ಯಾಣಕ್ಕಾಗಿ, ಯಾರನ್ನೋ ಮುಖ್ಯಮಂತ್ರಿ (ಸಿದ್ದರಾಮಯ್ಯ) ಮಾಡಲು ಜಿಟಿಡಿ ದೇಗುಲದಲ್ಲಿ ಕಲ್ಯಾಣೋತ್ಸವ ಮಾಡಿಸಿದ್ದಾರೆ. ಆದರೆ ನಾನು ಬಡವರ, ರೈತರ ಕಲ್ಯಾಣಕ್ಕಾಗಿ ಹೋರಾಡುತ್ತೇನೆ ಎಂದು ಟಾಂಗ್ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.