
ವಿಜಯಪುರ(ಜ.19): ಬೂತ್ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಚಾಲನೆಗೆ ಜ.21ರಂದು ವಿಜಯಪುರ ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಲಿದ್ದು, ಬಿಜೆಪಿ ಪಕ್ಷದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ ಪಡೆಯಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಾಗಠಾಣದ ವಾರ್ಡ್ ನಂ.10 ರಲ್ಲಿ ಫಲಾನುಭವಿಗಳ ಕಾರ್ಯಕ್ರಮ ನಡೆಯಲಿದೆ. ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಡಾ.ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ, ಮಾಜಿ ವಿಪ ಸದಸ್ಯ ಸಿದ್ದರಾಜು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಿಂದಗಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಇಂಡಿ, ನಾಗಠಾಣ, ದೇವರಹಿಪ್ಪರಗಿ ಮತ್ತು ಸಿಂದಗಿ ಕ್ಷೇತ್ರಗಳಿಂದ ಸರಿಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಎಲ್ಲ ಹಳ್ಳಿಗಳಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ವಿಜಯ ಸಂಕಲ್ಪ ಅಭಿಯಾನದ ಸಂಚಾಲಕ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ರಾಜ್ಯದಲ್ಲಿ ಎರಡು ಹಂತದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈಗಾಗಲೇ ಬೂತ್ ಮಟ್ಟದ ವಿಜಯ ಅಭಿಯಾನ ಹಮ್ಮಿಕೊಳ್ಳಾಗಿದೆ. ಎರಡನೇ ಹಂತದಲ್ಲಿ ಬೂತ್ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಒಂಬತ್ತು ಮಂಡಲಗಳಲ್ಲಿ ಪೂರ್ವಭಾವಿ ಅಭಿಯಾನ ನಡೆಸಲಾಗಿದೆ ಎಂದರು.
ವಿಮಾನದ ಡೋರ್ ತೆರೆದಿದೆ ಎಂದಿದ್ದೇ ತಪ್ಪಾಯ್ತಾ?: ತೇಜಸ್ವಿ ಸೂರ್ಯರನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ
ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಬೂತ್ಗಳಿದ್ದು, ಎಲ್ಲ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಕರಪತ್ರ, ಸ್ಟಿಕ್ಕರ್ ಹಂಚಲಾಗುವುದು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸಲಾಗುವುದು. ಮಿಸ್ಕಾಲ್ ಮೂಲಕ ಹೊಸ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಜ.29 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಇದ್ದು, ಎಲ್ಲ ಬೂತ್ಗಳಲ್ಲಿ ಸಾರ್ವಜನಿಕರಿಗೆ ಈ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ನ್ಯಾಯ ಬೇಕು ಮೋದಿ, 12 ಪ್ರಶ್ನೆಗಳನ್ನು ಪ್ರಧಾನಿ ಮುಂದಿಟ್ಟ ಸಿದ್ದರಾಮಯ್ಯ
ಗೋಷ್ಠಿಯಲ್ಲಿ ಶಿವರುದ್ರ ಬಾಗಲಕೋಟ, ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಅಶೋಕ ಅಲ್ಲಾಪುರ, ವಿವೇಕಾನಂದ ಡಬ್ಬಿ, ಕೃಷ್ಣಾ ಗುನ್ನಾಳಕರ, ವಿಜಯ ಜೋಶಿ ಸೇರಿದಂತೆ ಮುಂತಾದವರು ಇದ್ದರು.
ವಿಜಯ ಸಂಕಲ್ಪ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಪೂರ್ಣ ಪ್ರಮಾಣದ ತಯಾರಿ ದೃಷ್ಟಿಯಿಂದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಈಗ ಅಭಿಯಾನ ಪೂರಕವಾಗಲಿದೆ ಅಂತ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.