ಜೋಡೆತ್ತುಗಳಾದ ಸಿದ್ದು, ಡಿಕೆಶಿ ಈಗ ಪರಸ್ಪರ ಕಾಲೆಳೆಯುತ್ತಿದ್ದಾರೆ: ಆರ್‌.ಅಶೋಕ್‌

By Kannadaprabha NewsFirst Published Dec 1, 2023, 2:39 PM IST
Highlights

ರಾಜ್ಯ ಕಾಂಗ್ರೆಸ್‌ನಲ್ಲಿ ಜೋಡೆತ್ತು ಎಂದು ಬಿಂಬಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇದೀಗ ಎತ್ತು ಏರಿಗೆಳೆದರೆ ಕೋಣ ನೀರಿಗೆಳೆದಂತೆ ಎಂಬ ರೀತಿ ಪರಸ್ಪರ ಕಾಲೆಳೆಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಶಿಕಾರಿಪುರ (ಡಿ.01): ರಾಜ್ಯ ಕಾಂಗ್ರೆಸ್‌ನಲ್ಲಿ ಜೋಡೆತ್ತು ಎಂದು ಬಿಂಬಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇದೀಗ ಎತ್ತು ಏರಿಗೆಳೆದರೆ ಕೋಣ ನೀರಿಗೆಳೆದಂತೆ ಎಂಬ ರೀತಿ ಪರಸ್ಪರ ಕಾಲೆಳೆಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಶಿಕಾರಿಪುರದಲ್ಲಿ ಗುರುವಾರ ವಿಜಯೇಂದ್ರ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಶಾಸಕ ಬಿ.ಆರ್‌.ಪಾಟೀಲ್‌ರಂಥ ಹಿರಿಯ ಶಾಸಕರನ್ನು ಕಡೆಗಣಿಸಿದ ಸಚಿವರಿಗೆ ದುರಹಂಕಾರಿ ಎಂದು ತೆಗಳಿರುವುದು ಸರ್ಕಾರದ ವಸ್ತುಸ್ಥಿತಿಗೆ ಸಾಕ್ಷಿ. 

ಇದೀಗ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಉಚಿತ ಸೈಕಲ್‌, ಭಾಗ್ಯಲಕ್ಷ್ಮಿ, ಶಾಲಾ-ಕಾಲೇಜು ಸ್ಥಾಪನೆ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಇತಿಹಾಸದ ಪುಟದಲ್ಲಿ ಶಾಶ್ವತ ಸ್ಥಾನಗಳಿಸಿದ್ದಾರೆ ಎಂದು ತಿಳಿಸಿದರು. ವಿಜಯೇಂದ್ರ ಯುವ ಮೋರ್ಚಾ ಕಾರ್ಯದರ್ಶಿ, ಅಧ್ಯಕ್ಷ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಇದೀಗ ಅರ್ಹತೆ ಮೇರೆಗೆ ಅಧ್ಯಕ್ಷರಾಗಿದ್ದು, ಕೆಲವರಿಗೆ ಹೊಟ್ಟೆ ಉರಿ ತಾಳಲಾಗುತ್ತಿಲ್ಲ. ವಿಜಯೇಂದ್ರ ಆಯ್ಕೆಯಿಂದ ರಾಜ್ಯಾದ್ಯಂತ ಪಕ್ಷಕ್ಕೆ ಹೊಸ ಚೇತನ, ಸ್ಫೂರ್ತಿ ದೊರೆತಿದೆ. ಜೋಡೆತ್ತಿನ ರೀತಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದಾಗಿ ತಿಳಿಸಿದರು.

Latest Videos

ಎಲ್ಲ 28 ಕ್ಷೇತ್ರ ಗೆಲ್ಲೋವರೆಗೆ ಮನೆಗೆ ತೆರಳದಂತೆ ಬಿಎಸ್‌ವೈ ಸೂಚನೆ: ಬಿ.ವೈ.ವಿಜಯೇಂದ್ರ

ಸವಳಂಗಕ್ಕೆ ವಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಬೆಳಗ್ಗೆ ಸವಳಂಗಕ್ಕೆ ಆಗಮಿಸಿ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿ ಶಿಕಾರಿಪುರಕ್ಕೆತೆರಳಿದ ನಂತರ ವಿಪಕ್ಷ ನಾಯಕ ಆರ್‌. ಅಶೋಕ್‌ ಸವಳಂಗಕ್ಕೆ ಅಗಮಿಸಿದರು. ಈ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾರ್ಯಕರ್ತರೊಂದಿಗೆ ಅಶೋಕ್ ಅವರ ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು. ಆರ್‌.ಅಶೋಕ್‌ ಶಿಕಾರಿಪುರದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದ್ದರಿಂದ ಸವಳಂಗದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಶಿಕಾರಿಪುರಕ್ಕೆ ಪ್ರಯಾಣಿಸಿದರು.

ಶ್ವೇತಪತ್ರಕ್ಕೆ ಬೆಳಗಾವಿ ಕಲಾಪದಲ್ಲಿ ಪಟ್ಟು: ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂದು ಸರ್ಕಾರ ಹೇಳಿದೆ. ಅದು ನಿಜವೇ ಆಗಿದ್ದರೆ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಗ್ಯಾರಂಟಿ ಯೋಜನೆಗಳ ಅರ್ಧಂಬರ್ಧ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಲಾಗುತ್ತಿದೆ. ಇದು ಸಂವೇದನಾರಹಿತ ಎಡಬಿಡಂಗಿ ಸರ್ಕಾರ. ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಹಲವು ಜಿಲ್ಲೆಗಳಲ್ಲಿ ಬರಗಾಲದ ಅಧ್ಯಯನ ಮಾಡುವ ವೇಳೆ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.

ಬಿಬಿಎಂಪಿ ನೌಕರರಿಗೆ ಬಯೋಮೆಟ್ರಿಕ್‌ ಆತಂಕ: ಷರತ್ತಿನಲ್ಲಿ ಏನಿದೆ?

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು. ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಠ ಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಎಲ್ಲದಕ್ಕೂ ಲಂಚ ಕೊಡಬೇಕು. ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂಬುದಾಗಿ ರೈತರು ದೂರು ನೀಡುತ್ತಿದ್ದಾರೆ ಎಂದರು.

click me!