
ಬೆಂಗಳೂರು (ಜೂ.20): ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲು ಪ್ರಮಾಣ ಹೆಚ್ಚಳ ಸಂವಿಧಾನಕ್ಕೆ ಅಪಚಾರ ಎಂದು ಹರಿಹಾಯ್ದಿರುವ ಪ್ರತಿಪಕ್ಷ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ತುಷ್ಟೀಕರಣದ ಕ್ರಮ ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಗುಡುಗಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಗುರುವಾರ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದರು.
ಅಶೋಕ್ ಮಾತನಾಡಿ, ಸಂವಿಧಾನದ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತದೆ. ಈ ಸಂವಿಧಾನ ವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ ಮೀಸಲಾತಿ ಹೆಚ್ಚಳವನ್ನು ಹಿಂಪಡೆಯುವವರೆಗೂ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ಪ್ರಹ್ಲಾದ್ ಜೋಶಿ ಮಾತನಾಡಿ, ಯಾವುದರಲ್ಲೂ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಎಲ್ಲದರಲ್ಲೂ ಮುಸ್ಲಿಂರಿಗೆ ಮೀಸಲಾತಿ ನೀಡುತ್ತಿರುವುದರಿಂದ ಸಾಮಾನ್ಯ ವರ್ಗದ ಬಡವರಿಗೆ, ಎಸ್ಸಿ-ಎಸ್ಟಿ ಮತ್ತು ಒಬಿಸಿಗಳಿಗೆ ಬಹು ಅನ್ಯಾಯವಾಗುತ್ತದೆ. ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇತರ ಸಮುದಾಯದವರಿಗೆ ದ್ರೋಹ ಬಗೆಯುತ್ತಿದೆ. ಇದನ್ನು ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಸ್ಪಷ್ಟಪಡಿಸಿದರು.ಸುನೀಲ್ಕುಮಾರ್ ಮಾತನಾಡಿ, ಇದೊಂದು ಅತ್ಯಂತ ಕಳವಳಕಾರಿ ಸಂಗತಿ. ಮುಸಲ್ಮಾನರಿಗೆ ಆದ್ಯತೆಯ ನಿರ್ಧಾರ ತೆಗೆದುಕೊಂಡಿದ್ದು, ಉಳಿದ ಸಮುದಾಯಗಳು ಲೆಕ್ಕಕ್ಕೆ ಇಲ್ಲ ಎನ್ನುವ ಮಟ್ಟಿಗೆ ಈ ಸರ್ಕಾರದ ವರ್ತನೆ ಕಂಡುಬರುತ್ತಿದೆ. ಈ ನಡೆಯಿಂದ ಬೇರೆ ಬೇರೆ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರವಿಕುಮಾರ್ ಮಾತನಾಡಿ, ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ಸರ್ಕಾರ. ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು.ಅತೃಪ್ತರ ಮನವೊಲಿಕೆ ಪ್ರಯತ್ನ ಬಿಜೆಪಿಯಲ್ಲಿ ಅಧಿಕೃತವಾಗಿ ಶುರುರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ ನಿವಾರಿಸುವ ಹಾಗೂ ಮನವೊಲಿಸುವ ಪ್ರಯತ್ನ ಅಧಿಕೃತವಾಗಿ ಆರಂಭವಾಗಿದ್ದು, ಅತೃಪ್ತರ ಬಣಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಹಾಗೂ ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿದರು.
ಇತ್ತೀಚೆಗಷ್ಟೇ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದಿರುವುದರಿಂದ ಹಲವು ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಅಸಮಾಧಾನ ತಲೆದೋರಿದೆ. ಜತೆಗೆ ಶೀಘ್ರದಲ್ಲೇ ಜಿಲ್ಲಾ ಪದಾಧಿಕಾರಿಗಳನ್ನು ನೇಮಿಸಬೇಕಾಗಿದೆ. ಹೀಗಾಗಿ, ಜಿಲ್ಲಾ ಮಟ್ಟದಲ್ಲಿ ಒಂದು ಸಮರ್ಥ ತಂಡ ರಚಿಸುವ ಉದ್ದೇಶದಿಂದ ಅಡೆತಡೆಗಳನ್ನು ನಿವಾರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.ಗುರುವಾರ ಸಿದ್ದೇಶ್ವರ್ ಮತ್ತು ಹರೀಶ್ ಅವರನ್ನು ಪಕ್ಷದ ಕಚೇರಿಗೆ ಆಹ್ವಾನಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವರೂ ಆಗಿರುವ ಶಾಸಕರಾದ ಸಿ.ಟಿ.ರವಿ, ವಿ.ಸುನೀಲ್ಕುಮಾರ್ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಚರ್ಚಿಸಿದರು.
ಸಿದ್ದೇಶ್ವರ್ ಹಾಗೂ ಹರೀಶ್ ಅವರು ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯೊಂದಿಗೆ ಪಕ್ಷದಿಂದ ಉಚ್ಚಾಟಿತವಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದರು. ಯತ್ನಾಳ್ ಉಚ್ಚಾಟನೆ ಬಳಿಕ ತುಸು ಮೆತ್ತಗಾಗಿರುವ ಉಭಯ ಮುಖಂಡರು ಇದೀಗ ಮಾತುಕತೆ ಹಂತಕ್ಕೆ ಬಂದು ನಿಂತಿದ್ದಾರೆ.ಈ ಮಾತುಕತೆ ವೇಳೆ ದಾವಣಗೆರೆ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ತಾವು ಹೇಳಿದವರನ್ನು ನೇಮಿಸಬೇಕು. ಜತೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರೂ ಕಾರಣಕರ್ತರಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೇಡಿಕೆಗಳನ್ನು ಆಲಿಸಿದ ರಾಜ್ಯ ನಾಯಕರು ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದ ಬಳಿಕ ಬದಲಾವಣೆ ಮಾಡುವುದು ಸರಿಯಲ್ಲ. ಇತರ ಪದಾಧಿಕಾರಿಗಳ ನೇಮಕದಲ್ಲಿ ನಿಮ್ಮ ಅಭಿಪ್ರಾಯ ಪರಿಗಣಿಸಲಾಗುವುದು ಎಂಬ ಮಾತು ಹೇಳಿದ್ದಾರೆ. ಜತೆಗೆ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳುವುದು ಕೂಡ ಕಷ್ಟ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂಬರ್ಥದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.ಮುಂದಿನ ದಿನಗಳಲ್ಲಿ ಇನ್ನುಳಿದ ಜಿಲ್ಲೆಗಳ ಅಸಮಾಧಾನಿತ ಮುಖಂಡರನ್ನು ಕರೆದು ಮಾತುಕತೆ ಮೂಲಕ ಬಗೆಹರಿಸುವ ಪ್ರಯತ್ನ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.ತುರ್ತು ಪರಿಸ್ಥಿತಿ ವಿರೋಧಿಸಿ 22ರಿಂದ 30ರವೆರೆಗೆ ಬಿಜೆಪಿಯಿಂದ ಅಭಿಯಾನತುರ್ತು ಪರಿಸ್ಥಿತಿ ವಿರುದ್ಧ ಇದೇ ಜೂ.22ರಿಂದ 30ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.
ಅಭಿಯಾನದ ಅಂಗವಾಗಿ ಜೂ.24ರಂದು ಸಂಜೆ ಬೆಂಗಳೂರಿನ ಪುರಭವನದಲ್ಲಿ ಸಮಾರಂಭವೊಂದನ್ನು ಆಯೋಜಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಿರಿಯ ಅಂಕಣಕಾರ ಎಸ್.ಗುರುಮೂರ್ತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಅಭಿಯಾನದ ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜೂ.25ಕ್ಕೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿದೆ. 21 ತಿಂಗಳ ಕಾಲ ಅತ್ಯಂತ ಕರಾಳವಾಗಿ ಮಾನವ ಹಕ್ಕುಗಳ ದಮನ ಮಾಡಲಾಯಿತು. ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಸ್ವಾರ್ಥಕ್ಕಾಗಿ, ಅಕ್ರಮಗಳನ್ನು ಮುಚ್ಚಿ ಹಾಕಲು, ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ ಇದಾಗಿತ್ತು. ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಪರವಾಗಿ ಧ್ವನಿ ಎತ್ತಿದ ಎಲ್ಲ ವಿಪಕ್ಷ ನಾಯಕರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿತ್ತು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.