
ಬೆಂಗಳೂರು(ಮಾ.30): ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಸಿದರೂ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ನಮ್ಮ ಮೂಲಗಳ ಪ್ರಕಾರ ನ.27ರಂದು ವಿಧಾನಸಭೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದೆ. ನಾಳೆಯೇ ಚುನಾವಣೆ ನಡೆದರೂ ನಾವು ಸಿದ್ಧವಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅವಧಿಪೂರ್ವ ಚುನಾವಣೆ ಬಗ್ಗೆ ಮಾಹಿತಿ ಬಂದಿದೆ. ಅವರು ಯಾವಾಗ ಬೇಕಾದರೂ ಚುನಾವಣೆ ಮಾಡಲಿ, ಈ ತಿಂಗಳು ಮಾಡಲಿ ಅಥವಾ ನಾಳೆಯೇ ಮಾಡಲಿ. ನವೆಂಬರ್ 27ಕ್ಕೆ ಚುನಾವಣೆ ದಿನಾಂಕ ಪ್ರಕಟಿಸಲಿ. ಎಲ್ಲದಕ್ಕೂ ಕಾಂಗ್ರೆಸ್ ಪಕ್ಷ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಸ್ಪಷ್ಟಪಡಿಸಿದರು.
ನಿಜವಾಗ್ಲೂ ಡಿಕೆಶಿ, ಸಿದ್ದು ಮಧ್ಯೆ ಭಿನ್ನಾಭಿಪ್ರಾಯ ಇದ್ಯಾ?: ಜಾರಕಿಹೊಳಿ ಹೇಳಿದ್ದಿಷ್ಟು
ನ.27 ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, ‘ನಿಮಗೆ ಮಾಹಿತಿ ನೀಡಲು ಮೂಲಗಳು ಇರುವಂತೆ ನಮಗೂ ಇದ್ದಾರೆ. ನಮಗೂ ಮಾಹಿತಿ ಬರುತ್ತದೆ. ಇದು ನಮ್ಮ ಮೂಲಗಳ ಮಾಹಿತಿ’ ಎಂದು ಹೇಳಿದರು. ತನ್ಮೂಲಕ ಅವಧಿಪೂರ್ವ ಚುನಾವಣೆಯ ಮುನ್ಸೂಚನೆ ನೀಡಿದರು.
ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡಲಾಗುವುದು. ಜತೆಗೆ ಸ್ಥಳೀಯವಾಗಿ ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ನಲ್ಲಿ ಯಾವುದೇ ಬಣಗಳಿಲ್ಲ. ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು. ವಿಧಾನಸಭೆ ಚುನಾವಣೆಯನ್ನೂ ಸಾಮೂಹಿಕ ನಾಯಕತ್ವದಲ್ಲೇ ಎದುರಿಸುತ್ತೇವೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದ್ದು, ಎಲ್ಲಾ ಮುಂಚೂಣಿ ಘಟಕಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಡರ್ ಪಾರ್ಟಿ ಮಾಡಲೂ ಆದ್ಯತೆ ನೀಡಲಾಗುತ್ತಿದೆ ಎಂದರು.
ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ
ಏಪ್ರಿಲ್ 2ನೇ ವಾರ ಬಿಜೆಪಿ ರಾಜ್ಯ ಪ್ರವಾಸ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ನಾಯಕರು ಬರುವ ಏಪ್ರಿಲ್ ಎರಡನೇ ವಾರದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.ಬಹುತೇಕ ಏ.12ರಿಂದ ನಾಲ್ಕು ದಿನಗಳ ಕಾಲ ರಾಜ್ಯ ನಾಯಕರು ಪ್ರವಾಸ ಕೈಗೊಳ್ಳಲಿದ್ದು, ಬಳಿಕ 16 ಮತ್ತು 17ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಮೂರು ಅಥವಾ ನಾಲ್ಕು ತಂಡಗಳನ್ನಾಗಿ ರಚಿಸಿ ಪ್ರವಾಸ ಕೈಗೊಳ್ಳುವ ಸಂಭವವಿದ್ದು, ಪ್ರವಾಸದ ರೂಪುರೇಷೆ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ.
ಜನರ ವಿಶ್ವಾಸ ಗಳಿಸಲು ಬಿಜೆಪಿ ಯಶಸ್ವಿ
ದೇಶದಲ್ಲಿ ಬಿಜೆಪಿ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದ್ದು, ಮುಂದಿನ ದಿನಗಳು ಬಿಜೆಪಿಯದ್ದಾಗಿದೆ ಎಂದು ರೋಣ ಮತಕ್ಷೇತ್ರದ ಡಂಬಳ ಮಂಡಳ ಅಧ್ಯಕ್ಷ ರವಿ ಕರಿಗಾರ ಹೇಳಿದರು.ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗೆ ಬಿಜೆಪಿ ಅಧಿಕಾರದಲ್ಲಿರಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತವನ್ನು ಒಪ್ಪಿ ವಿವಿಧ ರಾಷ್ಟ್ರಗಳು ನಮ್ಮ ದೇಶದ ಸ್ನೇಹ ಬಯಸುತ್ತಿವೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದೆ. ಈ ಫಲಿತಾಂಶ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.