ಸಚಿವ ನಾಗೇಂದ್ರಗಾಗಿ ತೀವ್ರ ಕದನ: ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆಯ ರಣತಂತ್ರ?

Published : Aug 24, 2026, 06:27 AM IST
Nagendra

ಸಾರಾಂಶ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯು, ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವ ಗುರಿ ಹೊಂದಿದೆ.

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೋಮವಾರ ಬೆಳಗ್ಗೆ ಪ್ರತಿಪಕ್ಷ ಬಿಜೆಪಿಯಿಂದ ಪ್ರತಿಭಟನೆ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ

ಭಾನುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನವನದಿಂದ ಪ್ರತಿಭಟನೆ ಆರಂಭಿಸಿ ವಿಧಾನಸೌಧಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು, ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹಗಲು- ರಾತ್ರಿ ಪ್ರತಿಭಟನೆ ನಡೆಯುತ್ತಿದೆ. ಇದನ್ನು ಇಲ್ಲಿಗೇ ಬಿಡುವ ಮಾತಿಲ್ಲ. ದಲಿತರ ಹಣ ಲೂಟಿ ಮಾಡಿದ್ದನ್ನು ರಾಜ್ಯದ ಜನರೂ ಖಂಡಿಸಿ ಪ್ರತಿಭಟಿಸುತ್ತಿದ್ದಾರೆ. ಅವರೂ ನಾಗೇಂದ್ರ ವಿರುದ್ಧ ಧ್ವನಿಯೆತ್ತಿದ್ದಾರೆ. ಇದರಿಂದ ಇಡೀ ಸರ್ಕಾರವೇ ಇಕ್ಕಟ್ಟಿಗೆ ಸಿಲುಕಿದೆ ಎಂದರು.

ವಾಲ್ಮೀಕಿ ನಿಗಮದ 187 ಕೋಟಿ ರು. ಲೂಟಿ ಮಾಡಿ ಕರ್ನಾಟಕ ಮತ್ತು ತೆಲಂಗಾಣದ ಚುಣಾವಣೆಗೆ ಬಳಸಿದ್ದಕ್ಕೆ ದಾಖಲೆ ನೀಡಿದ್ದೇನೆ. ನಾವು ಹಗರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹೆದರಿರುವ ಆಡಳಿತ ಪಕ್ಷ ನಮ್ಮ ವಿರುದ್ಧವೇ ಪ್ರತಿಭಟನೆ ಮಾಡಲು ಬೀದಿಗಿಳಿದಿದೆ. ಸತ್ಯ ಮುಚ್ಚಿಡಲು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಿಮ್ಮ ನಿಷ್ಠೆ ಯಾರ ಪರ?- ಅಶೋಕ್‌

ಕಾಂಗ್ರೆಸ್‌ ನಾಯಕರೇ, ನಿಮ್ಮ ನಿಷ್ಠೆ ಯಾರ ಪರ? ಪರಿಶಿಷ್ಟರ ಹಿತಾಸಕ್ತಿ ಪರವೊ ಅಥವಾ ಸಂವಿಧಾನದ ಆಶಯದ ಪರವೊ ಅಥವಾ ಜನರ ಪರವೊ ಅಥವಾ ನಾಗೇಂದ್ರ ಪರವೊ ಎಂಬುದನ್ನು ತಿಳಿಸಲಿ ಎಂದು ಇದೇ ವೇಳೆ ಅಶೋಕ್‌ ಆಗ್ರಹಿಸಿದರು. ಗಣಿಗಾರಿಕೆ ಸೇರಿ 35ಕ್ಕೂ ಹೆಚ್ಚು ಲೂಟಿ ಮತ್ತು ಕಳ್ಳತನ ಪ್ರಕರಣದಲ್ಲಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಆದರೆ ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಸಚಿವ ಸಂಪುಟ ಹೇಗೆ ಇರಬೇಕು ಎಂದು ಹೇಳಿದೆ. ಸಚಿವ ಸ್ಥಾನ ಕೇವಲ ಅಧಿಕಾರ ಅಲ್ಲ. ಸಾಂವಿಧಾನಿಕ ನೈತಿಕತೆ, ಸಾಂವಿಧಾನಿಕ ವಿಶ್ವಾಸ ಇರಬೇಕು. ಆದರೆ ಯಾವ ಲಕ್ಷಣವೂ ನಾಗೇಂದ್ರ ಅವರಿಗೆ ಇಲ್ಲ ಎಂದು ಪ್ರತಿಪಾದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಂದೇ ಮಾತರಂ ವಿವಾದ: ಕೊಪ್ಪಳದಲ್ಲಿ ಬಿಜೆಪಿ ಆರ್‌ಎಸ್‌ಎಸ್ ವಿರುದ್ಧ ಸಚಿವ ತಂಗಡಗಿ ವಾಗ್ದಾಳಿ!
'ಬೆಂಗಳೂರಿಗೆ 'ಗಾರ್ಡನ್ ಸಿಟಿ' ಹೆಸರು ಸುಮ್ನೆ ಬಂದಿಲ್ಲ..' ಪಾರ್ಕ್‌ನ 5% ಜಾಗ ಇತರೆ ಉದ್ದೇಶಗಳಿಗೆ ಬಳಕೆಗೆ ಸಂಸದ ಗರಂ