ಅತೃಪ್ತರ ಮನವೊಲಿಕೆ ಪ್ರಯತ್ನ ಬಿಜೆಪಿಯಲ್ಲಿ ಅಧಿಕೃತವಾಗಿ ಶುರು: ಸಿದ್ದೇಶ್ವರ್‌, ಹರೀಶ್‌ ಜತೆ ಮಾತುಕತೆ

Kannadaprabha News   | Kannada Prabha
Published : Jun 20, 2025, 06:41 AM IST
bjp flag

ಸಾರಾಂಶ

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ ನಿವಾರಿಸುವ ಹಾಗೂ ಮನವೊಲಿಸುವ ಪ್ರಯತ್ನ ಅಧಿಕೃತವಾಗಿ ಆರಂಭವಾಗಿದ್ದು, ಅತೃಪ್ತರ ಬಣಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಹಾಗೂ ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿದರು.

ಬೆಂಗಳೂರು (ಜೂ.20): ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ ನಿವಾರಿಸುವ ಹಾಗೂ ಮನವೊಲಿಸುವ ಪ್ರಯತ್ನ ಅಧಿಕೃತವಾಗಿ ಆರಂಭವಾಗಿದ್ದು, ಅತೃಪ್ತರ ಬಣಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಹಾಗೂ ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿದರು. ಇತ್ತೀಚೆಗಷ್ಟೇ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದಿರುವುದರಿಂದ ಹಲವು ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಅಸಮಾಧಾನ ತಲೆದೋರಿದೆ. ಜತೆಗೆ ಶೀಘ್ರದಲ್ಲೇ ಜಿಲ್ಲಾ ಪದಾಧಿಕಾರಿಗಳನ್ನು ನೇಮಿಸಬೇಕಾಗಿದೆ.

ಹೀಗಾಗಿ, ಜಿಲ್ಲಾ ಮಟ್ಟದಲ್ಲಿ ಒಂದು ಸಮರ್ಥ ತಂಡ ರಚಿಸುವ ಉದ್ದೇಶದಿಂದ ಅಡೆತಡೆಗಳನ್ನು ನಿವಾರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಗುರುವಾರ ಸಿದ್ದೇಶ್ವರ್ ಮತ್ತು ಹರೀಶ್ ಅವರನ್ನು ಪಕ್ಷದ ಕಚೇರಿಗೆ ಆಹ್ವಾನಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವರೂ ಆಗಿರುವ ಶಾಸಕರಾದ ಸಿ.ಟಿ.ರವಿ, ವಿ.ಸುನೀಲ್‌ಕುಮಾರ್‌ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ಅವರು ಚರ್ಚಿಸಿದರು.

ಸಿದ್ದೇಶ್ವರ್ ಹಾಗೂ ಹರೀಶ್ ಅವರು ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯೊಂದಿಗೆ ಪಕ್ಷದಿಂದ ಉಚ್ಚಾಟಿತವಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದರು. ಯತ್ನಾಳ್‌ ಉಚ್ಚಾಟನೆ ಬಳಿಕ ತುಸು ಮೆತ್ತಗಾಗಿರುವ ಉಭಯ ಮುಖಂಡರು ಇದೀಗ ಮಾತುಕತೆ ಹಂತಕ್ಕೆ ಬಂದು ನಿಂತಿದ್ದಾರೆ.

ಈ ಮಾತುಕತೆ ವೇಳೆ ದಾವಣಗೆರೆ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ತಾವು ಹೇಳಿದವರನ್ನು ನೇಮಿಸಬೇಕು. ಜತೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರೂ ಕಾರಣಕರ್ತರಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೇಡಿಕೆಗಳನ್ನು ಆಲಿಸಿದ ರಾಜ್ಯ ನಾಯಕರು ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿದ ಬಳಿಕ ಬದಲಾವಣೆ ಮಾಡುವುದು ಸರಿಯಲ್ಲ. ಇತರ ಪದಾಧಿಕಾರಿಗಳ ನೇಮಕದಲ್ಲಿ ನಿಮ್ಮ ಅಭಿಪ್ರಾಯ ಪರಿಗಣಿಸಲಾಗುವುದು ಎಂಬ ಮಾತು ಹೇಳಿದ್ದಾರೆ. ಜತೆಗೆ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳುವುದು ಕೂಡ ಕಷ್ಟ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂಬರ್ಥದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಇನ್ನುಳಿದ ಜಿಲ್ಲೆಗಳ ಅಸಮಾಧಾನಿತ ಮುಖಂಡರನ್ನು ಕರೆದು ಮಾತುಕತೆ ಮೂಲಕ ಬಗೆಹರಿಸುವ ಪ್ರಯತ್ನ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ
ಅಧಿಕಾರ ಶಾಶ್ವತವಲ್ಲ: ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?