
ಬೆಂಗಳೂರು(ಸೆ. 04): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಒಡೆತನದ ಸಿದ್ದಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಗೆ ಉಚಿತವಾಗಿ 19 ಎಕರೆ ನೀಡಲಾಗಿದೆ' ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೊಯಾ ಆಪಾದಿಸಿದ್ದಾರೆ. ಈ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆವತಿಯಿಂದ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
'ಕಲಬುರಗಿಯಲ್ಲಿ ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಯನ್ನು ಸಿದ್ದಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿದೆ. ಟ್ರಸ್ಟ್ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು ಪುತ್ರರು ಇದ್ದಾರೆ. ಸಂಸ್ಥೆಯ ಕಾರ್ಯದರ್ಶಿಯಾಗಿ ಸಂಸದ ರಾಧಾಕೃಷ್ಣ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.
ಕೀಳು ಮಟ್ಟದ ಭಾಷೆಗೆ ನಾನು ಕುಗ್ಗಲ್ಲ: ಮಲ್ಲಿಕಾರ್ಜುನ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು
ಸಿದ್ದಾರ್ಥ ವಿಹಾರ ಟ್ರಸ್ಟ್ಗೆ ಬೆಂಗಳೂರಿನ ಬಳಿಯ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ಜಮೀನು ನೀಡಲಾಗಿದೆ. ಅಲ್ಲದೇ, ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಗೆ 19 ಎಕರೆ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ' ಎಂದು ದೂರಿದ್ದಾರೆ.
'2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಾಲಿ ಸಂಸ್ಥೆಗೆ 16 ಎಕರೆ ಜಮೀನನ್ನು ನೀಡಿತ್ತು. 30 ವರ್ಷಗಳ ಗುತ್ತಿಗೆಗೆ ನೀಡಲಾಗಿದ್ದು, ಒಂದೆರಡು ವರ್ಷಗಳ ಬಳಿಕ ಮತ್ತೊಮ್ಮೆ 3 ಎಕರೆಯನ್ನು ಹೆಚ್ಚುವರಿ ಜಮೀನನ್ನು ನೀಡಲಾಯಿತು. ಉಚಿತವಾಗಿ ಇಷ್ಟೊಂದು ಭೂಮಿಯನ್ನು ನೀಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಖರ್ಗೆ ಕುಟುಂಬವು ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತ ಮಾಡಿರುವುದು ಕಂಡುಬಂದಿದೆ' ಎಂದು ಆಪಾದಿಸಿದ್ದಾರೆ.
ಖರ್ಗೆ ಕುಟುಂಬವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಗೌತಮ ಬುದ್ದ ಅವರ ತತ್ವಗಳಲ್ಲಿ ನಂಬಿಕೆ ಹೊಂದಿದ್ದರೆ, ಖುದ್ದಾಗಿ ತನಿಖೆಗೊಳಗಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಖರ್ಗೆ ಅವರ ಒತ್ತಡಕ್ಕೆ ಮಣಿದಿದೆಯೇ ಅಥವಾ ಅವರನ್ನು ಮೆಚ್ಚಿಸಲು ಪ್ರಯತ್ನಿಸಿದ್ದಾರೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ಈಹಿನ್ನೆಲೆಯಲ್ಲಿ ಉಚಿತವಾಗಿ ಜಮೀನು ನೀಡಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಲೆಹರ್ಸಿಂಗ್ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.