ಸಚಿವ ಅಶ್ವತ್ಥನಾರಾಯಣ ಪರ ಸಿಎಂ, ಸಚಿವರ ಬ್ಯಾಟಿಂಗ್‌

By Kannadaprabha NewsFirst Published May 6, 2022, 4:15 AM IST
Highlights

- ಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್‌ನಿಂದ ಅಶ್ವತ್‌ ವಿರುದ್ಧ ಆರೋಪ

- ಅಶ್ವತ್ಥನಾರಾಯಣ ಬೆಂಬಲಕ್ಕೆ ಬೊಮ್ಮಾಯಿ, ಅಶೋಕ್‌, ಎಸ್‌ಟಿಎಸ್‌, ಮುನಿರತ್ನ

- ಯಾವುದೇ ದಾಖಲೆಗಳಿಲ್ಲದೆ ಸಚಿವರ ಮೇಲೆ ಆರೋಪ ಮಾಡುತ್ತಿದೆ ಕಾಂಗ್ರೆಸ್

ಬೆಂಗಳೂರು (ಮೇ.6): ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ (PSI Recruitment Scam) ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್‌ (Congress) ಆಪಾದನೆಗೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ (C N Ashwath Narayan) ಬೆಂಬಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai ) ಸೇರಿದಂತೆ ಹಲವು ಸಚಿವರು ನಿಂತಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವರಾದ ಆರ್‌.ಅಶೋಕ್‌ (R.Ashok), ಎಸ್‌.ಟಿ.ಸೋಮಶೇಖರ್‌ (ST SomShekar), ಮುನಿರತ್ನ (Muni Ratnta) ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

Latest Videos

ತಮ್ಮ ಪಕ್ಷದವರ ಬಣ್ಣ ಬಯಲಾಗಲಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ ಹಿಟ್‌ ಆ್ಯಂಡ್‌ ರನ್‌ ಮಾಡುತ್ತಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬರುವ ದೂರುಗಳನ್ನು ಪರಿಗಣಿಸಲಾಗುತ್ತದೆ. ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುವುದು. ಅದರ ತನಿಖೆಯನ್ನೂ ಮಾಡಿಸುತ್ತೇವೆ. ಅಕ್ರಮದಲ್ಲಿ ಸಹಕಾರ, ಭಾಗಿಯಾರುವುದು ಕಂಡು ಬಂದರೆ ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ. ಪ್ರಕರಣದ ತನಿಖೆ ವಿಚಾರದಲ್ಲಿ ಮುಕ್ತವಾಗಿದ್ದೇವೆ. ನಿಷ್ಪಕ್ಷಪಾತವಾಗಿ, ನಿಷ್ಠುರವಾಗಿ ತನಿಖೆಯಾಗಬೇಕು ಎಂದು ಸೂಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಹಲವು ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಲಬುರಗಿಯ ದಿವ್ಯಾ ಹಾಗರಗಿ ಮಾತ್ರವಲ್ಲ, ಇನ್ನೂ ಹಲವರಿದ್ದಾರೆ. ಎಲ್ಲರನ್ನೂ ಬಂಧಿಸುತ್ತೇವೆ. ಸಚಿವ ಅಶ್ವತ್ಥನಾರಾಯಣ ಬಗ್ಗೆ ಕಾಂಗ್ರೆಸ್‌ನವರು ಆಧಾರ ರಹಿತವಾದ ಆರೋಪ ಮಾಡುತ್ತಿದ್ದಾರೆ. ಜವಾಬ್ದಾರಿಯುತ ಪ್ರತಿ ಪಕ್ಷದವರು ಬೇರೆಯವರ ಮೇಲೆ ಆರೋಪ ಮಾಡುವಾಗ ಸಾಕ್ಷಿ ಇರಬೇಕು ಎನ್ನುವುದು ಇವರಿಗೆ ತಿಳಿದಿಲ್ಲ ಎಂದರು.

ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಸಾಕಷ್ಟುಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು. ಹಲವು ಬಾರಿ ಪಿಎಸ್‌ಐ, ಪಿಯುಸಿ ಎಲ್ಲಾ ಪ್ರಶ್ನೆ ಪತ್ರಿಕೆ ಹೊರಗೆ ಬಂದಿದ್ದವು. ಆಗ ಅವರು ಏನೂ ಕ್ರಮ ಕೈಗೊಂಡಿರಲಿಲ್ಲ. ಈಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. ಬಂಧಿತರಲ್ಲಿ ಕೆಲವರು ಅವರ ಪಕ್ಷದವರು ಇದ್ದಾರೆ. ಅವರ ಮೂಲಕ ಕಾಂಗ್ರೆಸ್ಸಿಗರ ಬಣ್ಣ ಬಯಲಾಗಲಿದೆ ಎಂದು ಈ ರೀತಿ ಆರೋಪ ಮಾಡುತ್ತಿದ್ದಾರೆ. ಜನ ಇದನ್ನೆಲ್ಲಾ ಒಪ್ಪುವುದಿಲ್ಲ. ಅವರ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹೀಗಾಗಿ ಅವರ ಮಾತಿಗೆ ಕಿಂಚಿತ್ತು ಬೆಲೆ ಇಲ್ಲ ಎಂದು ಮುಖ್ಯಮಂತ್ರಿಗಳು ವಾಗ್ದಾಳಿ ನಡೆಸಿದರು.

ಕಂದಾಯ ಸಚಿವ ಅಶೋಕ್‌ ಮಾತನಾಡಿ, ಪಿಎಸ್‌ಐ ನೇಮಕಾತಿ ಅಕ್ರಮ ಹಗರಣ ಸಂಬಂಧ ಕಾಂಗ್ರೆಸ್‌ ಮುಖಂಡರು ಸಂತೆ ಭಾಷಣ ಬಿಟ್ಟು ದಾಖಲೆ ಕೊಡಲಿ. ಈ ಹಗರಣ ಬೆಳಕಿಗೆ ತಂದ ಗೃಹ ಸಚಿವರನ್ನು ಕಾಂಗ್ರೆಸ್‌ ಅಭಿನಂದಿಸಬೇಕಿತ್ತು. ಅವರ ತಟ್ಟೆಯಲ್ಲಿ ಕತ್ತೆ ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಹೇಳುವುದು ಬೇಡ. ಈ ಹಿಂದೆ ಬಿಟ್‌ ಕಾಯಿನ್‌ ವಿಷಯದಲ್ಲಿ ಕಾಂಗ್ರೆಸ್‌ ಮುಖಂಡರು ಇದೇ ರೀತಿ ಆರೋಪ ಮಾಡಿದರು ಕೊನೆಗೆ ಅವರು ಝಿರೋ ಆದರು ಎಂದರು.

ಎಸ್‌ಐ ಅಕ್ರಮದಲ್ಲಿ ಸಚಿವ ಅಶ್ವತ್ಥ್ ಸಂಬಂಧಿಕರು ಭಾಗಿ ಎಂದ ಸಿದ್ಧರಾಮಯ್ಯ

ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಮಾತನಾಡಿ, ರಾಮನಗರ ಒಕ್ಕಲಿಗರ ಜಿಲ್ಲೆ ಎಂಬ ಕಾರಣಕ್ಕೆ ನಾಯಕತ್ವಕ್ಕೆ ಪೈಪೋಟಿ ನಡೆಯುತ್ತಿದೆ. ಅಲ್ಲಿನ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿರುವ ಕಾರಣ ಸಚಿವ ಡಾ.ಅಶ್ವತ್ಥನಾರಾಯಣ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಗಲಾಟೆ ಮಾಡಿದ್ದಾರೆ. ಅಶ್ವತ್ಥನಾರಾಯಣ ಅವರು ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರು ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಸಚಿವ ಡಾ.ಅಶ್ವತ್ಥನಾರಾಯಣ ಅವರ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.

ಖರ್ಗೆ ರೀತಿ ಬಿಜೆಪಿಗರಿಗೂ ನೋಟಿಸ್‌ ನೀಡಿ ಎಂದ ಡಿಕೆಶಿ!

ಜ.3ರಂದೇ ಡಿಕೆಶಿ ಮುಹೂರ್ತ: ಮುನಿರತ್ನ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಜನವರಿ 3ರಂದು ರಾಮನಗರದಲ್ಲೇ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಏನಾದರೂ ಮಾಡಲು ಮುಹೂರ್ತ ಇರಿಸಿದ್ದರು ಎಂದು ಸಚಿವ ಮುನಿರತ್ನ ಹೇಳಿದರು. ಶಿವಕುಮಾರ್‌ ಅವರು ಯಾವುದೇ ದಾಖಲೆಗಳು ಇಲ್ಲದೆ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಜನವರಿ 3ರಂದು ರಾಮನಗರದಲ್ಲಿ ನಡೆದ ಕಾರ್ಯಕ್ರಮವೊಂದರಿಂದ ಆರಂಭವಾಗಿದೆ. ಅಂದು ರಾಮನಗರ ವೇದಿಕೆಯಲ್ಲಿ ಸಚಿವ ಅಶ್ವತ್ಥನಾರಾಯಣ ಅವರು ನಮ್ಮ ಪಕ್ಷದ ಬಗ್ಗೆ ಏರು ದನಿಯಲ್ಲಿ ಮಾತನಾಡಿದ್ದರು. ಹಾಗೆ ಮಾತನಾಡಿದ್ದೇ ತಪ್ಪಾಗಿದೆ. ಅಶ್ವತ್ಥನಾರಾಯಣ ಅವರು ಅಂದು ಸುಮ್ಮನೆ ಕೈಕಟ್ಟಿಕೊಂಡು ಬಂದಿದ್ದರೆ ಎಲ್ಲವೂ ಸರಿಯಾಗುತ್ತಿತ್ತು. ಅಂದೇ ನಾವು ಸಚಿವ ಅಶ್ವತ್ಥನಾರಾಯಣ ಅವರಿಗೆ ಏನಾದರೂ ಮಾಡುತ್ತಾರೆ ಎಂದು ಭಾವಿಸಿದ್ದೆವು. ಇದೀಗ ಅದು ಪ್ರಾರಂಭವಾಗಿದೆ ಎಂದರು.

click me!