
ಬೆಂಗಳೂರು (ಏ.12): ಸ್ವಿಗ್ಗಿ, ಝೊಮೆಟೋ, ಅಮೆಜಾನ್ ಸೇರಿ ಪ್ಲಾಟ್ಫಾರ್ಮ್, ಇ-ಕಾಮರ್ಸ್ ಆಧಾರಿತ ಗಿಗ್ ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಚಿಸಿರುವ ‘ಕರ್ನಾಟಕ ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ(ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ-2025 ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿಸಿದೆ. ಅಸಂಘಟಿತ ವಲಯದ ಈ ಕಾರ್ಮಿಕರಿಗೆ ಮೊದಲ ಬಾರಿಗೆ ಅಪಘಾತ ವಿಮೆ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈಗ ಇನ್ನೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಚಿಸಿರುವ ಕರಡು ವಿಧೇಯಕವನ್ನು ಮುಖ್ಯಮಂತ್ರಿಯವರ ನೇತೃತ್ವದ ಇತ್ತೀಚಿನ ಸಭೆಯಲ್ಲಿ ಕೆಲ ಪರಿಷ್ಕರಣೆಗಳೊಂದಿಗೆ ಸಚಿವ ಸಂಪುಟದ ಮುಂದೆ ತರಲಾಗಿತ್ತು. ಈ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಮೂಲಕ ಕಾನೂನಾಗಿ ಜಾರಿಗೊಳಿಸಲು ಕ್ಯಾಬಿನೆಟ್ ಸಮ್ಮತಿಸಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಸುಮಾರು 2.30 ಲಕ್ಷದಷ್ಟಿದೆ ಎಂದು ನೀತಿ ಆಯೋಗದ ವರದಿ ಹೇಳಿದೆ. ಅಸಂಘಟಿತ ವಲಯ ವ್ಯಾಪ್ತಿಯ ಈ ಕಾರ್ಮಿಕರು ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರಕು ಸೇವೆಗಳನ್ನು ನಿಗದಿತ ಸಮಯಕ್ಕೆ ವಾಹನಗಳಲ್ಲಿ ಸೂಚಿಸಿದ ಸ್ಥಳಕ್ಕೆ ತಲುಪಿಸುವ ಸಂದರ್ಭಗಳಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂಥ ಅವಘಡಗಳು ಸಂಭವಿಸಿದಾಗ ಅಪಘಾತ ಪರಿಹಾರ, ನೈಸರ್ಗಿಕ ಮರಣ ಪರಿಹಾರ, ಅಂತ್ಯಸಂಸ್ಕಾರ ವೆಚ್ಚ, ವಿವಾಹ ಭತ್ಯೆ, ಹೆರಿಗೆ ಭತ್ಯೆ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ, ಭವಿಷ್ಯ ನಿಧಿ, ವಸತಿ ಸೌಲಭ್ಯ, ಕೌಶಲ್ಯಾಭಿವೃದ್ಧಿ ಹಾಗೂ ವೃದ್ಧಾಪ್ಯ ನೆರವು ಇತ್ಯಾದಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲು ಅಗ್ರಿಗೇಟರ್, ಪ್ಲಾಟ್ಫಾರ್ಮ್ಗಳ ಆದಾಯದಲ್ಲಿ ಕನಿಷ್ಠ ಶೇ.1ರಿಂದ ಗರಿಷ್ಠ 2ರಷ್ಟು ಕಲ್ಯಾಣ ಶುಲ್ಕ ವಿಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
‘ನೈಸ್’ ಭವಿಷ್ಯ ನಿರ್ಧಾರಕ್ಕೆ ಸಂಪುಟ ಉಪಸಮಿತಿ ರಚನೆ: ರಸ್ತೆ ನಿರ್ಮಾಣ ಮುಂದುವರಿಸಬೇಕೆ? ಅಧ್ಯಯನ
ನಿಧಿ ನಿರ್ವಹಣೆಗೆ ಕಲ್ಯಾಣ ಮಂಡಳಿ: ಗಿಗ್ ಕಾರ್ಮಿಕರ ಸೇವೆ ಬಳಸಿಕೊಂಡು ಲಾಭ ಮಾಡುತ್ತಿರುವ ಅಗ್ರಿಗೇಟರ್ಗಳು ಸಾಮಾಜಿಕ ಜವಾಬ್ದಾರಿ ಹೊರಬೇಕಾಗುತ್ತದೆ. ಇದಕ್ಕಾಗಿ ಅವುಗಳು ಕಾರ್ಮಿಕರಿಗೆ ಪಾವತಿಸುವ ಪ್ರತಿ ವಹಿವಾಟಿನ ಮೇಲೆ ಕನಿಷ್ಠ ಶೇ.1ರಿಂದ ಗರಿಷ್ಠ ಶೇ.2ರಷ್ಟು ಸುಂಕ ವಿಧಿಸಿ ನಿಧಿ ಸಂಗ್ರಹಿಸಲಾಗುವುದು. ನಿಧಿ ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಅಥವಾ ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ’ ರಚಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.