ಸಿಎಂ ಹುದ್ದೆ: ಡಿಕೆಶಿ ಪರ ಒಕ್ಕಲಿಗರು, ಸಿದ್ದು ಪರ ಕುರುಬರ ಲಾಬಿ

Published : May 15, 2023, 07:45 AM IST
ಸಿಎಂ ಹುದ್ದೆ: ಡಿಕೆಶಿ ಪರ ಒಕ್ಕಲಿಗರು, ಸಿದ್ದು ಪರ ಕುರುಬರ ಲಾಬಿ

ಸಾರಾಂಶ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ತೀವ್ರಗೊಂಡಿರುವ ನಡುವೆಯೇ ಇಬ್ಬರೂ ನಾಯಕರ ಪರ ಆಯಾ ಸಮುದಾಯಗಳ ನಡುವೆ ಜಾತಿ ರಾಜಕಾರಣ ಶುರುವಾಗಿದೆ. 

ಬೆಂಗಳೂರು (ಮೇ.15): ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ತೀವ್ರಗೊಂಡಿರುವ ನಡುವೆಯೇ ಇಬ್ಬರೂ ನಾಯಕರ ಪರ ಆಯಾ ಸಮುದಾಯಗಳ ನಡುವೆ ಜಾತಿ ರಾಜಕಾರಣ ಶುರುವಾಗಿದೆ. ಸಿದ್ದರಾಮಯ್ಯ ಪರ ಕುರುಬರು, ಡಿ.ಕೆ.ಶಿವಕುಮಾರ್‌ ಅವರ ಪರ ಒಕ್ಕಲಿಗರು ಸಭೆ ನಡೆಸಿ ಬ್ಯಾಟ್‌ ಬೀಸಿದ್ದಾರೆ.

ಭಾನುವಾರ ವಿಜಯನಗರದ ಶಾಖಾ ಮಠದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ವಿವಿಧ ಒಕ್ಕಲಿಗ ಮಠಾಧೀಶರು, ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್‌ ಅವರ ಪಾತ್ರ ದೊಡ್ಡದಿದ್ದು, ಹಾಗಾಗಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಲು ಹಾಗೂ ಹೈಕಮಾಂಡ್‌ ಮೇಲೆ ಒತ್ತಡ ತರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರು ಕೂಡ ಹಾಜರಿದ್ದರು.

ಸಿಎಂ ಹುದ್ದೆ: ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ವಾದವೇನು?

ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಸಂಪ್ರದಾಯ: ‘ಡಿ.ಕೆ. ಶಿವಕುಮಾರ್‌ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುತ್ತಾರೆ. ಆದ್ದರಿಂದ ಡಿ.ಕೆ.ಶಿವಕುಮಾರ್‌ ಅವರನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಭಾವಿಸಿದ್ದೇನೆ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಅವರು, ‘ಎಲ್ಲ ಮಾನದಂಡಗಳಿಂದಲೂ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿರುವುದರಿಂದ ಅವರು ಕೂಡ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎನ್ನುವುದು ನಮ್ಮ ಆಶಯ ಕೂಡ ಆಗಿದೆ’ ಎಂದು ಹೇಳಿದರು. ನಂಜಾವಧೂತ ಸ್ವಾಮೀಜಿ ಮಾತನಾಡಿ, ‘ನನ್ನ ಕೈಗೂ ಪೆನ್ನು(ಅಧಿಕಾರ) ಕೊಟ್ಟು ನೋಡಿ’ ಎಂದು ಸಮುದಾಯದ ಹಲವು ಸಭೆಗಳಲ್ಲಿ ಶಿವಕುಮಾರ್‌ ಮನವಿ ಮಾಡಿಕೊಂಡಿದ್ದಾರೆ. ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದಂತೆ ಶಿವಕುಮಾರ್‌ ಅವರಿಗೂ ಸಮುದಾಯ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಸಿದ್ದು ಪರ ಕುರುಬ ಸಂಘದ ಸಭೆ: ಮತ್ತೊಂದೆಡೆ ಬೆಂಗಳೂರಿನ ಕುರುಬರ ಸಂಘದಲ್ಲಿ ಭಾನುವಾರ ಕುರುಬ ಜನಾಂಗದ ಹಲವು ಮುಖಂಡರು ಸಭೆ ನಡೆಸಿದ್ದು ಸಿದ್ದರಾಮಯ್ಯ ಅವರನ್ನೇ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್‌ ವರಿಷ್ಠರು ಮತ್ತು ಹೈಕಮಾಂಡ್‌ ನಾಯಕರ ಮೇಲೆ ಒತ್ತಡ ತರಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ, ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್‌ ವೆಂಕಟೇಶ್‌ ಮೂರ್ತಿ, ನಾಗರಾಜ್‌ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್‌ ಬೀಸಿದ್ದಾರೆ. 

ಸಿದ್ದು VS ಡಿಕೆಶಿ: ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್‌ ಅಂಗಳಕ್ಕೆ

ಕಾಂಗ್ರೆಸ್‌ನಲ್ಲಿ ಕುರುಬ ಸಮುದಾಯದ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಗೆದ್ದಿರುವ 135 ಶಾಸಕರಲ್ಲಿ ಸುಮಾರು ನೂರು ಮಂದಿ ಶಾಸಕರು ಸಿದ್ದರಾಮಯ್ಯ ಅವರ ವರ್ಚಸ್ಸು, ಬೆಂಬಲದಿಂದ ಗೆಲುವು ಸಾಧಿಸಿದ್ದಾರೆ. ಅವರ ಈ ಹಿಂದಿನ ಐದು ವರ್ಷದ ಆಡಳಿತದಲ್ಲಿ ನೀಡಿದ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ ಸೇರಿದಂತೆ ಹಲವು ಜನಪರ ಯೋಜನೆಗಳ ಮೂಲಕ ಜನಮನ ಗೆದಿದ್ದಾರೆ. ಹಾಗಾಗಿ ಅವರನ್ನೇ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ