
ಹುಬ್ಬಳ್ಳಿ (ಮಾ.04): ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಆಡಳಿತದಲ್ಲಿ ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಕರ್ನಾಟಕ ಪ್ರಮುಖ ಸ್ಥಾನವಾಗಿ ಮಾರ್ಪಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ದೇಶದಲ್ಲಿ ಶೇ. 90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಅವರು ಮನವಿ ಮಾಡಿದರು. ಮೊದಲು ಮುಖ್ಯಮಂತ್ರಿಗಳು ಇದನ್ನು ನಿಲ್ಲಿಸಿ. ಈ ಎರಡೂ ಘಟನೆ ರಾಜ್ಯದಲ್ಲಿ ಆಡಳಿತ ಮತ್ತು ಆಂತರಿಕ ಭದ್ರತೆ ವೈಫಲ್ಯಕ್ಕೆ ನಿದರ್ಶನ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟ ಎರಡೂ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಎನ್ಐಎ ತನಿಖೆಗೆ ವಹಿಸಬೇಕು ಎಂದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್.ಎಸ್.ಎಲ್. ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಪರಿಣಾಮ ರಾಜ್ಯದ ಸಾಮಾನ್ಯ ಜನರ ಬದುಕು ಅಸುರಕ್ಷಿತವಾಗಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.
ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಇಂತವರಿಗೆ ಬೆಂಬಲ ನೀಡಬೇಕೆ?: ಕಾಂಗ್ರೆಸ್ ವೋಟ್ ಬ್ಯಾಂಕ್ಗಾಗಿ ದೇಶವನ್ನು ಅಭದ್ರ ಮಾಡುತ್ತಿದೆ. ಇಂತಹ ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ? ಎಂದು ಪ್ರಶ್ನಿಸಿದ ಜೋಶಿ, ಇದು ಅತ್ಯಂತ ಅಯೋಗ್ಯ ಸರ್ಕಾರ. ಈ ರೀತಿಯ ಚಿಲ್ಲರೆ, ತುಷ್ಟೀಕರಣದ ರಾಜಕೀಯ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.