
ಸಂಪುಟ ಮೈನರ್ ಸರ್ಜರಿ: ನಾಳೆ ಸಿಎಂ ದೆಹಲಿಗೆ 1 ಮಹಿಳಾ ಸ್ಥಾನ, 2 ಸಚಿವ ಸ್ಥಾನ ಬದಲು ಚರ್ಚೆಗೆ ಸಿಎಂ ದಿಲ್ಲಿಗೆ
ಬೆಂಗಳೂರು (ಆ.26): ಸಚಿವ ಸಂಪುಟದಲ್ಲಿ ಕೆಲ ಬದಲಾವಣೆ ಹಾಗೂ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಗುರುವಾರ) ದೆಹಲಿಗೆ ತೆರಳಲಿದ್ದಾರೆ.
ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಹುದ್ದೆ ಜತೆಗೆ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದವರಿಗೆ ಹೇಗೆ ಅವಕಾಶ ನೀಡಬೇಕು. ಅದಕ್ಕಾಗಿ ಯಾವ ರೀತಿಯ ಬದಲಾವಣೆಗಳನ್ನು ಮಾಡಬೇಕು ಎಂಬ ಬಗ್ಗೆ ವರಿಷ್ಠರ ಅಭಿಪ್ರಾಯ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು ಮಹಿಳೆಗೆ ನೀಡಬೇಕಾದ ಒಂದು ಸ್ಥಾನ ಮಾತ್ರ ಖಾಲಿಯಿದೆ. ಇದರ ನಡುವೆ ಎಂ.ಕೃಷ್ಣಪ್ಪ ಅವರು ಸಚಿವ ಸ್ಥಾನಕ್ಕಾಗಿ ಹಠ ಹಿಡಿದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವರಾಜ ಶಿವಣ್ಣನವರ್ ಅವರಿಗೆ ಕುರುಬ ಕೋಟಾ ಅಡಿ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.
ಹೀಗಾಗಿ ಎಂ.ಕೃಷ್ಣಪ್ಪ ಹಾಗೂ ಬಸವರಾಜ ಶಿವಣ್ಣನವರ್ ಅವರ ವಿಚಾರದಲ್ಲಿ ಯಾವ ರೀತಿಯ ನಡೆ ಅನುಸರಿಸಬೇಕು ಎಂಬ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೋರಲಿದ್ದಾರೆ.
ಈ ಇಬ್ಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕಾದ ಅನಿವಾರ್ಯ ಎದುರಾದರೆ ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಬೇಕಾಗುತ್ತದೆ. ಮೂಲಗಳ ಪ್ರಕಾರ ಬಾಲಕೃಷ್ಣ ಹಾಗೂ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು ಎಂ.ಕೃಷ್ಣಪ್ಪ ಹಾಗೂ ಬಸವರಾಜ್ ಅವರಿಗೆ ಅವಕಾಶ ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಖಾಲಿ ಇರುವ ಮಹಿಳಾ ಕೋಟಾದ ಸಚಿವ ಸ್ಥಾನಕ್ಕೆ ಹಲವರು ಪೈಪೋಟಿ ನಡೆಸಿದ್ದು, ಲಕ್ಷ್ಮೀಹೆಬ್ಬಾಳ್ಕರ್ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.
ದೆಹಲಿ ಭೇಟಿ ವೇಳೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆಯೂ ಮುಖ್ಯಮಂತ್ರಿ ಅವರು ಪ್ರಾಥಮಿಕ ಚರ್ಚೆ ನಡೆಸಲಿದ್ದಾರೆ. ಇನ್ನು ಎರಡು ವರ್ಷ ಅವಧಿಯೂ ಸಹ ಬಾಕಿ ಇಲ್ಲ. ಹೀಗಾಗಿ ಹಾಲಿ ಅಧ್ಯಕ್ಷರಿಂದ ರಾಜೀನಾಮೆ ಪಡೆದು ಆಕಾಂಕ್ಷಿಗಳಿಗೆ ಅವಕಾಶ ನೀಡುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.