
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯ ಚಟುವಟಿಕೆಗಳು ಗರಿಗೆದರಿವೆ. ಈ ಸಂಬಂಧ ಇಂದು ದೆಹಲಿಯಲ್ಲಿ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದ್ದು, ರಾಜ್ಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಇಂದು ಮೊದಲ ಹಂತದ ಸಭೆ ನಡೆಯುವ ಸಾಧ್ಯತೆಯಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತಲುಪಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈಗಾಗಲೇ ರಾಜ್ಯ ನಾಯಕರೊಂದಿಗೆ ಮೊದಲ ಹಂತದ ಸಭೆ ನಡೆಸಿ ಸಂಭಾವ್ಯ ಪಟ್ಟಿ ಸಿದ್ಧಪಡಿಸುವಂತೆ ರಾಹುಲ್ ಗಾಂಧಿ ಅವರು ಸೂಚನೆ ನೀಡಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡಲು ರಾಹುಲ್ ಗಾಂಧಿ ಕೆಲವು ಕಠಿಣ ಮಾನದಂಡಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟದಲ್ಲಿ 55 ವರ್ಷದೊಳಗಿನ ಶಾಸಕರಿಗೆ ಹೆಚ್ಚಿನ ಸ್ಥಾನ ನೀಡಬೇಕು. ಸಂಪುಟದ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎನ್ನುವುದು ಹೈಕಮಾಂಡ್ ಲೆಕ್ಕಾಚಾರ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಿರಿಯ ಸಚಿವರ ಬಗ್ಗೆ ಸಮಗ್ರ ವರದಿ ಪಡೆಯಲು ಸೂಚಿಸಲಾಗಿದೆ. ಸಿದ್ದರಾಮಯ್ಯ , ಡಿಕೆಶಿಕುಮಾರ್ ಬಳಿ ಚರ್ಚೆ ನಡೆಸಿ ವರದಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಸಚಿವರಾಗಿದ್ದಾಗ ಅವರು ತಮ್ಮ ಇಲಾಖೆಗಳಲ್ಲಿ ಎಷ್ಟು ಕೆಲಸ ಮಾಡಿದ್ದಾರೆ? ಎಷ್ಟು ಬಾರಿ ಕೆಡಿಪಿ (KDP) ಸಭೆಗಳನ್ನು ನಡೆಸಿದ್ದಾರೆ? ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಎಷ್ಟು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದಾರೆ? ಎಂಬ ಅಂಶಗಳ ಆಧಾರದ ಮೇಲೆ ಸಚಿವರ ಪಟ್ಟಿ ಸಿದ್ಧವಾಗಲಿದೆ.
ಸಚಿವರ ಇಲಾಖಾ ಪ್ರಗತಿ ಮತ್ತು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದ ಸಚಿವರಿಗೆ ಈ ಬಾರಿ ಕೊಕ್ ನೀಡುವ ಸಾಧ್ಯತೆಯಿದೆ. ಒಟ್ಟಾರೆಯಾಗಿ, ಇಂದಿನ ದೆಹಲಿ ಸಭೆಯು ರಾಜ್ಯ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಮತ್ತು ಯಾರ ಕುರ್ಚಿ ಅಲುಗಾಡಲಿದೆ ಎಂಬ ಕುತೂಹಲಕ್ಕೆ ತೆರೆ ಎಳೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.