
ಬೆಂಗಳೂರು (ಅ.15): ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ದನಿ ಎತ್ತಿದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆದರಿಕೆ ಕರೆ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸದಸ್ಯತ್ವ ಅಸಿಂಧುಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಕುರಿತು ಮಾತನಾಡಿದ ಅವರು, ಆದೇಶ ಓದಿಲ್ಲ. ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆ ನೀಡಿ ಮರು ಮತ ಎಣಿಕೆಗೆ ಆದೇಶಿಸಿದೆ ಎಂದು ಈಗಷ್ಟೇ ನಮ್ಮ ಪಿಎ ಹೇಳಿದ್ದಾಗಿ ತಿಳಿಸಿದರು.
ನೋಡಿ ಹೈಕಮಾಂಡ್ ಈಸ್ ಹೈಕಮಾಂಡ್. ಹೈಕಮಾಂಡ್ ಜೊತೆ ಶಾಸಕರ ನಿರ್ಧಾರವೂ ಬೇಕಾಗುತ್ತೆ ಎಂದು ಹೇಳಿದರು. ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಅವರು ತಿಳಿಸಿದರು. ಡಿನ್ನರ್ ಪಾರ್ಟಿಗೆ, ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ಕೊಡ್ತಾ ಇರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ತಮಗೆ ಹಾಗೂ ಬಿಜೆಪಿಯವ್ರಿಗೆ ಅದು ಸ್ಪೆಷಲ್ ಎಂದು ನಕ್ಕು ಸುಮ್ಮನಾದ ಸಿಎಂ, ನವೆಂಬರ್ ಕ್ರಾಂತಿ ವಿಚಾರ ಪ್ರಸ್ತಾಪಿಸಿ ಯಾವ ಕ್ರಾಂತಿನೂ ಇಲ್ಲ, ಭ್ರಾಂತಿನೂ ಇಲ್ಲ ಎಂದು ಹೇಳಿದರು.
ಆರ್ಎಸ್ಎಸ್ನವರ ಕಾರ್ಯಕ್ರಮಕ್ಕೆ ಸರ್ಕಾರಿ ಜಾಗ ಬಳಸಿಕೊಳ್ಳದಿರುವಂತೆ, ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರದ ಬಗ್ಗೆ ಪ್ರಸ್ತಾಪಿಸಿ, ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚೀಫ್ ಸೆಕ್ರೇಟರಿಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ. ಆ ರೀತಿ ಕ್ರಮ ಕೈಗೊಳ್ಳಿ ಎಂದು ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು. ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ಕೊಡಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಅವರನ್ನು ತೆಗೆದು ಹಾಕಿಲ್ಲ. ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆ ವೇಳೆ ಅವಕಾಶ ಕೊಡೋಣ ಎಂದ ಅವಕು. ಕೃಷ್ಣಾ ಮೇಲ್ದಂಡೆ ಯೋಜನೆಗೆ ದುಡ್ಡು ತೆಗೆದಿಡುವ ವಿಚಾರಕ್ಕೆ ಯುಕೆಪಿಗೆ ದುಡ್ಡು ಕೊಡಲು ಶುರು ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಚೆನ್ನಾಗಿದೆ. ಚೇತರಿಕೆ ಆಗ್ತಿದೆ. ಸತ್ಯನಾರಾಯಣ ಎಂಬ ವೈದ್ಯರಿಗೆ ಕೇಳಿದೆ. ಎರಡ್ಮೂರು ದಿನಗಳಲ್ಲಿ ಚೇತರಿಕೆ ಆಗ್ತಾರೆ ಎಂದು ಹೇಳಿದ್ದಾರೆ ಎಂದರು.ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ನಂತೆ ಮತ್ತಿಕರೆಯ ಜೆ.ಪಿ.ಪಾರ್ಕ್ನಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನ ಅವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯ ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.