
ಮೈಸೂರು (ನ.11): ದೆಹಲಿಯಲ್ಲಿ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿ.ಪಂ.ಸಭಾಂಗಣದಲ್ಲಿ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು-ಬೆಂಗಳೂರು ಪೊಲೀಸರ ಜೊತೆ ಮಾತನಾಡಿದ್ದೇನೆ. ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು. ಸ್ಫೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಸ್ಫೋಟದ ವಿಚಾರದಲ್ಲಿ ಭದ್ರತಾ ವೈಫಲ್ಯವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬೆಳಗ್ಗೆಯಿಂದಲೂ ಕೆಡಿಪಿ ಸಭೆಯಲ್ಲಿದ್ದೆ. ಏನಾಗಿದೆ ಎಂದು ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದರು.
ಸತತ 9 ಗಂಟೆ ಕೆಡಿಪಿ ಸಭೆ ನಡೆಸಿದ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಯನ್ನು ಸುಮಾರು 9 ಗಂಟೆ ಕಾಲ ನಡೆಸಿದರು. ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಸಭೆಯು ಮಧ್ಯಾಹ್ನ 12ಕ್ಕೆ ಆರಂಭವಾಗಿ, ರಾತ್ರಿ 9.15ರ ವೇಳೆಗೆ ಅಂತ್ಯವಾಯಿತು. ಮಧ್ಯೆ ಊಟದ ವಿರಾಮ ನೀಡಲಾಗಿತ್ತು. ಪ್ರತಿ ಇಲಾಖೆಗಳ ಯೋಜನೆಗಳ ಪ್ರಗತಿ ವರದಿಯನ್ನು ಅಧಿಕಾರಿಗಳಿಂದ ಪಡೆದ ಮುಖ್ಯಮಂತ್ರಿಗಳು, ಸರಿಯಾಗಿ ಕೆಲಸ ಮಾಡದ ಹಾಗೂ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಮ್ಮ ಎಂದಿನ ಶೈಲಿಯಲ್ಲಿ ಮಧ್ಯ ಮಧ್ಯೆ ಹಾಸ್ಯ ಮಾಡುತ್ತಾ, ಗಂಭೀರ ವಿಚಾರಗಳು ಬಂದಾಗ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.
ಅಧಿಕಾರಿಗಳು ಸುಸ್ತೋ ಸುಸ್ತು: ಮುಖ್ಯಮಂತ್ರಿಗಳ ಕೆಡಿಪಿ ಸಭೆಗೆ ಹಾಜರಾಗಿದ್ದ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಬೆಳಗ್ಗೆಯಿಂದ ರಾತ್ರಿಯವರೆಗೆ ಜಿಪಂ ಸಭಾಂಗಣದಲ್ಲಿ ಉಳಿದ್ದರು. ಪ್ರತಿ ಇಲಾಖೆಗಳ ಪ್ರಗತಿ ಪರಿಶೀಲಿಸುವ ವೇಳೆ ಆ ಇಲಾಖೆಗೆ ಸಂಬಂಧಿಸಿದ ಬೇರೆ ಇಲಾಖೆಯ ಅಧಿಕಾರಿಗಳ ಸಮನ್ವಯ ಬಗ್ಗೆಯೂ ಸಿಎಂ ಪ್ರಶ್ನಿಸುತ್ತಿದ್ದರು. ಹೀಗಾಗಿ, ಅಧಿಕಾರಿಗಳು ಯಾರು ಸಭಾಂಗಣದಿಂದ ಹೊರಗೆ ಹೋಗಲಿಲ್ಲ. ಹೀಗಾಗಿ, ಅಧಿಕಾರಿಗಳಂತೂ ಸುಸ್ತಾಗಿದ್ದು ಸಹ ಕಂಡು ಬಂತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಅನಿಲ್ ಚಿಕ್ಕಮಾದು, ಟಿ.ಎಸ್. ಶ್ರೀವತ್ಸ, ಕೆ. ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಡಿ. ರವಿಶಂಕರ್, ಡಾ.ಡಿ. ತಿಮ್ಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ. ಶಿವಕುಮಾರ್ ಮೊದಲಾದವರು ಇದ್ದರು.
ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ಅವುಗಳನ್ನು ರದ್ದು ಮಾಡಲು ಕ್ರಮ ಕೈಗೊಳ್ಳಬೇಕು. ಕೆಪಿಟಿಸಿಎಲ್ ಬಾಕಿ ಇರುವ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಎಲ್ಲಾ ಯೋಜನೆಗಳ ಕಾರ್ಯಾದೇಶವನ್ನು ನವೆಂಬರ್ ಅಂತ್ಯದೊಳಗೆ ನೀಡಬೇಕು ಎಂದು ಸಿಎಂ ಸೂಚಿಸಿದರು. ರಸ್ತೆ ಗುಂಡಿಗಳಿದ್ದಲ್ಲಿ ಅವುಗಳನ್ನು ಗುರುತಿಸಿ ಅದನ್ನು ದುರಸ್ಥಿ ಮಾಡಲು ಲೋಕೋಪಯೋಗಿ ಇಲಾಖೆ ಕ್ರಮ ವಹಿಸಬೇಕು. ಮೈಸೂರು ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಆರಂಭಿಸಲು ಕ್ರಮ ವಹಿಸಬೇಕು ಎಂದರು.
ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗಿರುವುದು ಅತ್ಯಂತ ಗಂಭೀರವಾದ ಸಂಗತಿ. ಈ ಬಗ್ಗೆ ಗಮನಹರಿಸಿ ಶಿಕ್ಷೆ ಪ್ರಮಾಣ ಹೆಚ್ಚಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆಗಳ್ಳತನ ಪ್ರಕರಣ ತಡೆಯಲು ಬೀಟ್ ಪೊಲೀಸಿಂಗ್ ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಬೆಳೆಯುತ್ತಿರವ ನಗರದಲ್ಲಿ ಕಸದ ಪ್ರಮಾಣವೂ ಹೆಚ್ಚುತ್ತಿದ್ದು, ಇವುಗಳ ವೈಜ್ಞಾನಿಕ ವಿಲೇವಾರಿಗೆ ಮತ್ತು ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.