
ಬಾಗಲಕೋಟೆ (ಏ.01): ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ. ಉಚ್ಚಾಟನೆ ಮಾಡಿದ ಪಾರ್ಟಿ ಪರ ಯಾಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಗೊತ್ತಿರುವ ಮಟ್ಟಿಗೆ ಶಾಸಕ ಬಸನಗೌಡ ಯತ್ನಾಳ ಬಿಜೆಪಿಗೆ ಮಾಡಲಿಕ್ಕಿಲ್ಲ. ಕಾಂಗ್ರೆಸ್ ಪರ ಪ್ರಚಾರಕ್ಕೆ ಯತ್ನಾಳಗೆ ಮನವಿ ಮಾಡ್ತೀರಾ ಎಂಬ ಪ್ರಶ್ನೆಗೆ ಇಲ್ಲವೆಂದು ಸನ್ನೆ ಮಾಡಿದರು.
ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ?: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಹೇಳಿರುವ ಚಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ? ಅವರು ನಮ್ಮ ಹೈಕಮಾಂಡ್ ಅಲ್ಲ. ನಾರಾಯಣಸ್ವಾಮಿ ಇರೋದು ಯಾವ ಪಾರ್ಟಿ? ಬಿಜೆಪಿಯಲ್ಲಿರೋ ನಾರಾಯಣಸ್ವಾಮಿ ಹೇಗೆ ಹೇಳ್ತಾರೆ? ಏನೋ ಹೇಳಬೇಕೋ ಹೇಳ್ತಾರೆ. ಅಂತ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ ಎಂದರು.
ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್ನವರು ಕೆಲಸ ಮಾಡುತ್ತಿದ್ದಾರೆ ಎಂದಿರುವ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಬಿಜೆಪಿಯವರೇ ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ ಎಂದರು. ವಂಶವಾಹಿನಿಗೆ ಕಾಂಗ್ರೆಸ್ ಮಣೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪದ್ಧತಿ ಯಾರೇ ನಿಧನರಾದರೆ ಅವರ ಮನೆತನಕ್ಕೆ ಟಿಕೆಟ್ ಕೊಡೋದು.
ಬಾಗಲಕೋಟೆಗೆ ಮೇಟಿ ಪುತ್ರ , ದಾವಣಗೆರೆ ಶಾಮನೂರರ ಮೊಮ್ಮಗನಿಗೆ ಟಿಕೆಟ್ ನೀಡಲಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳಿದರು. ಗ್ಯಾರಂಟಿ ಯೋಜನೆ ಮೂಲಕ ಮತದಾರರ ಮೇಲೆ ಕಾಂಗ್ರೆಸ್ ಧಮ್ಕಿ ಹಾಕಿದ್ದಾರೆ ಎಂಬ ಬಿಜೆಪಿಗರ ಆರೋಪಕ್ಕೆ ಉತ್ತರಿಸಿದ ಅವರು, ಧಮ್ಕಿ ಹಾಕೋದು ಕಾಂಗ್ರೆಸ್ ಸಂಸ್ಕೃತಿ ಅಲ್ಲ. ಧಮ್ಕಿ ಹಾಕೋದು ಬಿಜೆಪಿಯವರು. ಬಾಗಲಕೋಟೆ ಬಿಜೆಪಿ ಎಂಎಲ್ಎಯಾದವರು ಯಾರನ್ನಾದರೂ ತಮ್ಮ ಮನೆಗೆ ಬಿಡ್ತಾರಾ? ಅವರು ಜನಪ್ರತಿನಿಧಿಯಾದವರು ಎಂದು ಪರೋಕ್ಷವಾಗಿ ವೀರಣ್ಣ ಚರಂತಿಮಠ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.