
ಬಾಗಲಕೋಟೆ (ಮಾ.31): ನಾವು 2023ರ ಚುನಾವಣೆ ವೇಳೆ ಒಟ್ಟು 165 ಭರವಸೆ ಕೊಟ್ಟಿದ್ದೇವು. ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ₹72 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಪ್ರಧಾನಿ ನರೇಂದ್ರ ಮೋದಿಯವರು ಸಾಲಮನ್ನಾ ಮಾಡಿದ್ದಾರಾ? ಅವರಿಗೆ ಯಾಕೆ ಮತ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಾಗಲಕೋಟೆ ತಾಲೂಕಿನ ಸುತಗುಂಡಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಭರ್ಜರಿ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರೆ ಯಾರೂ ಕಿವಿಗೊಡಬೇಡಿ. ಈ ಭಾಗದಲ್ಲಿ ಎಚ್.ವೈ.ಮೇಟಿ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಸ್ಥಾನಕ್ಕೆ ಉಮೇಶ ಮೇಟಿ ಅವರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.
ಕೊರೋನಾದಿಂದ ಕಂಗೆಟ್ಟಿದ್ದ ರಾಜ್ಯದ ಜನರನ್ನು ಐದು ಗ್ಯಾರಂಟಿಗಳ ಮೂಲಕ ಮೇಲೆತ್ತುವ ಕೆಲಸ ಮಾಡಿದ್ದೇವೆ. ಏಳು ಕೋಟಿ ಜನರಲ್ಲಿ ಮೂರೂವರೆ ಕೋಟಿಯಷ್ಟು ಮಹಿಳೆಯರಿದ್ದು, ಅವರನ್ನು ಸ್ವಾವಲಂಬಿಯಾಗಿ ಮಾಡಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯ ಲಾಭ ಒಂದು ಕೋಟಿ ಇಪ್ಪತ್ತಾರು ಲಕ್ಷ ಮಹಿಳೆಯರಿಗೆ ತಲುಪುತ್ತಿದೆ. ಈವರೆಗೆ ಜನರಿಗೆ ಒಂದು ಲಕ್ಷ ನಲವತ್ತು ಸಾವಿರ ಕೋಟಿ ರುಪಾಯಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೀಡಿದ್ದೇವೆ ಎಂದು ಪ್ರತಿಪಾದಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಡ್ಯಾಂ ಎತ್ತರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸಿದರೆ ನಾವು ಎರಡೇ ವರ್ಷದಲ್ಲಿ ಡ್ಯಾಂ ಎತ್ತರಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಯುಕೆಪಿಗೆ ಸಂಬಂಧಿಸಿದ ಯಾವ ಕೆಲಸವನ್ನು ಮಾಡಿಲ್ಲ. ಹದಿಮೂರು ವರ್ಷ ಕಳೆದರೂ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸುತ್ತಿಲ್ಲ. ಯಾವ ಮುಖ ಹೊತ್ತು ಈ ಭಾಗದಲ್ಲಿ ಮತ ಕೇಳಲು ಬಿಜೆಪಿಯರು ಬರುತ್ತಾರೆ ಎಂದು ಸಿಎಂ ಪ್ರಶ್ನಿಸಿದರು.
ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸದೇ ಡ್ಯಾಂ ಎತ್ತರಿಸಲು ಸಾಧ್ಯವಿಲ್ಲ. ಅವರು ನೋಟಿಫಿಕೇಶನ್ ಹೊರಡಿಸಿದರೆ, ನಾವು ಮುಂದಿನ ಕೆಲಸ ಮಾಡುತ್ತೇವೆ. ಎರಡು ವರ್ಷದಲ್ಲಿ ಪೂರ್ಣ ಯೋಜನೆ ಮುಗಿಸುತ್ತೇವೆ ಎಂದು ಸಿಎಂ ಭರವಸೆ ನೀಡಿದರು. ಬಿಜೆಪಿಯವರು ಪ್ರಚಾರಕ್ಕೆ ಬಂದಾಗ ನೋಟಿಫಿಕೇಶನ್ ಯಾಕೆ ಹೊರಡಿಸಿಲ್ಲ?, ಅದನ್ನು ಹೊರಡಿಸಿ ನಮ್ಮೂರಿಗೆ ಬನ್ನಿ ಎಂದು ಮತದಾರರು ಕೇಳಲಿ. ಆಗಲಾದರೂ ಬಿಜೆಪಿಯವರಿಗೆ ಬುದ್ಧಿ ಬರುತ್ತದೆ ಎಂದು ಅವರು ಕಿಡಿಕಾರಿದರು.
ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭರ್ಜರಿ ಪ್ರಚಾರ ನಡೆಸಿದರು. ತಾಲೂಕಿನ ಸುತಗುಂಡಾರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಆರತಿ ಬೆಳಗಿ ಸಾಂಪ್ರದಾಯಿಕ ಸ್ವಾಗತ ಕೋರಿದರು. ಈ ವೇಳೆ, ಸಿಎಂ ಸಮ್ಮುಖದಲ್ಲಿ ಅನೇಕ ಜನರು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.