ಫೆ.10ರೊಳಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ?

Published : Jan 26, 2023, 04:15 AM IST
ಫೆ.10ರೊಳಗೆ ಕಾಂಗ್ರೆಸ್‌ ಮೊದಲ ಪಟ್ಟಿ ಪ್ರಕಟ?

ಸಾರಾಂಶ

ಬಹುತೇಕ ಹಾಲಿ ಶಾಸಕರು, 2-3 ದಳ ಶಾಸಕರಿಗೆ ಟಿಕೆಟ್‌, ಫೆ.2ಕ್ಕೆ ಸಭೆ, ಬಳಿಕ ಹೈಕಮಾಂಡ್‌ ಒಪ್ಪಿಗೆ ಪಡೆದು ಪಟ್ಟಿ ಟಿಕೆಟ್‌ ಸಾಧ್ಯತೆ. 

ಬೆಂಗಳೂರು(ಜ.26):  ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಬಹುತೇಕ ಫೆ.10ರ ವೇಳೆಗೆ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮೂರ್ನಾಲ್ಕು ಮಂದಿಯನ್ನು ಹೊರತುಪಡಿಸಿ ಬಹುತೇಕ ಎಲ್ಲ ಹಾಲಿ ಶಾಸಕರು, ಜೆಡಿಎಸ್‌ನಿಂದ ಇನ್ನೂ ಕಾಂಗ್ರೆಸ್‌ ಸೇರದ 2-3 ಮಂದಿ ಶಾಸಕರು ಹಾಗೂ ಅತ್ಯಂತ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೆ.10ರೊಳಗೆ ಪ್ರಕಟಿಸಲು ಕಾಂಗ್ರೆಸ್‌ ಕಸರತ್ತು ನಡೆಸಿದೆ.

ಈ ಹಿನ್ನೆಲೆಯಲ್ಲಿ ಫೆ.2ರಂದು ಪ್ರದೇಶ ಚುನಾವಣಾ ಸಮಿತಿಯ ಸಭೆಯನ್ನು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ಸಮಿತಿಯ 30 ಸದಸ್ಯರು ಚರ್ಚಿಸಿ 100ಕ್ಕೂ ಹೆಚ್ಚು ಮಂದಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿಆಖೈರುಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿ ಫೆ.10ರೊಳಗೆ ಎಐಸಿಸಿ ಮೂಲಕವೇ ಪ್ರಕಟವಾಗುವಂತೆ ಮಾಡುವ ಉದ್ದೇಶವನ್ನು ರಾಜ್ಯ ನಾಯಕರು ಹೊಂದಿದ್ದಾರೆ ಎಂದು ಮೂಲಗಳು ಹೇಳಿವೆ.

ರಮೇಶ್‌ ಜಾರಕಿಹೊಳಿ ಜೆಡಿಎಸ್‌ಗೆ ಬೇಡ: ಎಚ್‌.ಡಿ.ಕುಮಾರಸ್ವಾಮಿ

ಮೂಲಗಳ ಪ್ರಕಾರ, ವಯಸ್ಸಾಗಿದೆ ಎಂಬ ಕಾರಣಕ್ಕಾಗಿ ಟಿಕೆಟ್‌ ಒಲ್ಲೆ ಎನ್ನುತ್ತಿರುವ ಪಾವಗಡದ ಹಾಲಿ ಶಾಸಕ ವೆಂಕಟರಮಣಪ್ಪ, ಅಫಜಲ್‌ಪುರದ ಎಂ.ವೈ.ಪಾಟೀಲ್‌ ಅವರು ತಮ್ಮ ಪುತ್ರರಿಗೆ ಟಿಕೆಟ್‌ ಕೇಳಿದ್ದಾರೆ. ಆದರೆ, ಎಲ್ಲರಿಗಿಂತ ವಯಸ್ಸಿನಲ್ಲಿ ಹಿರಿಯರಾದರೂ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಅವರ ಪುತ್ರ ಮಲ್ಲಿಕಾರ್ಜುನ್‌ ದಾವಣಗೆರೆ ಉತ್ತರ ಕ್ಷೇತ್ರಗಳ ಟಿಕೆಟ್‌ಗೆ ಆಕಾಂಕ್ಷಿಯಾಗಿದ್ದು, ಈ ಇಬ್ಬರ ಹೆಸರು ಪಟ್ಟಿಸೇರಲಿದೆ ಎನ್ನಲಾಗಿದೆ. ಇನ್ನು, ರಾಯಚೂರಿನ ಡಿ.ಎಸ್‌.ಹುಲಿಗೇರಿ ಅವರನ್ನು ಹೊರತುಪಡಿಸಿ ಉಳಿದ ಬಹುತೇಕ ಎಲ್ಲ ಹಾಲಿ ಶಾಸಕರಿಗೂ ಟಿಕೆಟ್‌ ದೊರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕುತೂಹಲಕಾರಿ ಸಂಗತಿಯೆಂದರೆ, ಇನ್ನೂ ಕಾಂಗ್ರೆಸ್‌ ಪಕ್ಷ ಸೇರದಿರುವ ಜೆಡಿಎಸ್‌ನ ಶಾಸಕರಾದ ಗುಬ್ಬಿಯ ವಾಸು, ಅರಸೀಕೆರೆಯ ಶಿವಲಿಂಗೇಗೌಡ ಅವರ ಹೆಸರು ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಪಕ್ಷೇತರರಾದ ಶರತ್‌ ಬಚ್ಚೇಗೌಡ ಅವರಿಗೆ ಹೊಸಕೋಟೆ ಕ್ಷೇತ್ರದ ಟಿಕೆಟ್‌ ದೊರೆಯುವುದು ಖಚಿತ ಎನ್ನಲಾಗಿದೆ. ಮತ್ತೊಬ್ಬ ಪಕ್ಷೇತರ ನಾಗೇಶ್‌ ಅವರಿಗೂ ಪಕ್ಷದ ಟಿಕೆಟ್‌ ದೊರೆಯುವುದು ಖಚಿತವಾದರೂ ಕ್ಷೇತ್ರದ ಬಗ್ಗೆ ಗೊಂದಲ ಬಗೆಹರಿಯಬೇಕಿದೆ ಎಂದು ಮೂಲಗಳು ಹೇಳುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ