ಗ್ಯಾರಂಟಿಗೆ ಬಿಜೆಪಿ ಹೋರಾಟ: ಬಿಎಸ್‌ವೈ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ

By Kannadaprabha NewsFirst Published Jul 5, 2023, 5:24 AM IST
Highlights

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ಯಾವುದೇ ಷರತ್ತಿಲ್ಲದೆ ಅನುಷ್ಠಾನಗೊಳಿಸಬೇಕು, ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್‌ ಪಡೆಯುವ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ವಿಧಾನಮಂಡಲದ ಉಭಯ ಸದನಗಳ ಒಳಗೆ ಹಾಗೂ ವಿಧಾನಸೌಧದ ಹೊರಗೆ ಮಂಗಳವಾರ ದಿನವಿಡೀ ಪ್ರತಿಭಟನೆ ನಡೆಸಿತು.

ಬೆಂಗಳೂರು (ಜು.05): ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ಯಾವುದೇ ಷರತ್ತಿಲ್ಲದೆ ಅನುಷ್ಠಾನಗೊಳಿಸಬೇಕು, ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್‌ ಪಡೆಯುವ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ವಿಧಾನಮಂಡಲದ ಉಭಯ ಸದನಗಳ ಒಳಗೆ ಹಾಗೂ ವಿಧಾನಸೌಧದ ಹೊರಗೆ ಮಂಗಳವಾರ ದಿನವಿಡೀ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆ ಪರಿಣಾಮ ಉಭಯ ಸದನಗಳ ಕಲಾಪದ ಮೇಲೆ ಉಂಟಾಗಿ ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಚಕಮಕಿ, ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಧರಣಿ ನಡೆಸಿದರು. ಸಂಧಾನ ಮಾತುಕತೆ ಪ್ರಯತ್ನ ನಡೆದರೂ ಫಲ ನೀಡದೇ ಇದ್ದುದರಿಂದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

4 ಬಾರಿ ಕಲಾಪ ಮುಂದೂಡಿಕೆ: ಸರ್ಕಾರದ ವಿರುದ್ಧ ಘೋಷಣೆ, ವಾಗ್ವಾದ, ಮಾತಿನ ಚಕಮಕಿಗಳು ಆಡಳಿತ ಹಾಗೂ ಬಿಜೆಪಿ ಸದಸ್ಯರ ನಡುವೆ ನಿರಂತರವಾಗಿ ನಡೆದವು. ನಾಲ್ಕು ಬಾರಿ ಸದನವನ್ನು ಮುಂದೂಡಲಾಯಿತು. ಕೊನೆಗೆ ಧರಣಿ, ಘೋಷಣೆ ನಡುವೆಯೇ ಕಾಗದ ಪತ್ರಗಳ ಮಂಡನೆ, ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ ಕಲಾಪವನ್ನು ಪೀಠಾಧ್ಯಕ್ಷರು ನಡೆಸಿದರು. ಆಡಳಿತ ಪಕ್ಷದ ನಾಯಕರು, ಪೀಠಾಧ್ಯಕ್ಷರು ಸಾಕಷ್ಟುಮನವಿ ಮಾಡಿಕೊಂಡರೂ ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದೇ ಧರಣಿ ಮುಂದುವರೆಸಿದರು. ಬುಧವಾರ ಧರಣಿ ಕೈಬಿಟ್ಟು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆಯೋ ಅಥವಾ ಮತ್ತೆ ಧರಣಿ ಮುಂದುವರೆಸುತ್ತಾರೆಯೋ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದಲ್ಲಿ ಯಾವ ಅಜಿತ್‌ ಪವಾರ್‌ ಸೃಷ್ಟಿಸ್ತಾರೋ ಗೊತ್ತಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಬಿಎಸ್‌ವೈ ನೇತೃತ್ವದಲ್ಲಿ ಹೊರಗೆ ಧರಣಿ: ಅತ್ತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗ್ಗೆಯಿಂದ ಸಂಜೆವರೆಗೆ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಈಗ ತಮ್ಮ ಬೇಡಿಕೆಗೆ ಒಪ್ಪದಿದ್ದರೆ ಅಧಿವೇಶನದ ಬಳಿಕ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದರು.

ಪ್ರತಿಭಟನೆಯಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಭಗವಂತ್‌ ಖೂಬಾ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಹಲವು ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಇಡೀ ದಿನ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಇದು ಸುಳ್ಳು ಭರವಸೆ ಸರ್ಕಾರ’, ‘ಮೋದಿಯ 5 ಕೆ.ಜಿ. ಅಕ್ಕಿ ನಿಜ, ಕಾಂಗ್ರೆಸ್‌ 10 ಕೆ.ಜಿ ಅಕ್ಕಿ ಸುಳ್ಳು’ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಭಿತ್ತಿ ಫಲಕ ಪ್ರದರ್ಶಿಸಿದರು. ಕೊಟ್ಟಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ವೈಎಸ್‌ಟಿ, ವಿಎಸ್‌ಟಿ, ಎಟಿಎಂ ಸರ್ಕಾರ ಎಂದು ಪ್ರತಿಭಟನಾನಿರತರು ಘೋಷಣೆ ಕೂಗಿ ಕಿಡಿಕಾರಿದರು.

ಭ್ರಷ್ಟಾಚಾರದ ಬಗ್ಗೆ ಸುಮ್ಮನೆ ಮಾತನಾಡಿಲ್ಲ, ನನ್ನ ಬಳಿ ದಾಖಲೆಗಳಿವೆ: ಎಚ್‌ಡಿಕೆ

ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಕೆ.ಎಸ್‌.ಈಶ್ವರಪ್ಪ, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಹಾಲಪ್ಪ ಆಚಾರ್‌, ಬಿ.ಸಿ.ಪಾಟೀಲ್‌, ಕೆ.ಸಿ.ನಾರಾಯಣಗೌಡ, ಶಾಸಕರಾದ ಬಸನಗೌಡ ಪಾಟೀಲ್‌, ಬಿ.ವೈ.ವಿಜಯೇಂದ್ರ, ಮಾಜಿ ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧಾ, ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

click me!