
ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಆ.14): ಚುನಾವಣೆ ಸಂದರ್ಭ ರಾಜ್ಯ ಕಾಂಗ್ರೆಸ್ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಬೇಕೋ ಬೇಡವೋ ಎಂಬ ವಿಷಯಗಳು ಚರ್ಚೆ ನಡೆಯುತ್ತಿರುವಾಗಲೇ ಅವುಗಳು ಯಾವುದೇ ಕಾರಣಕ್ಕೂ ನಿಲ್ಲುವುದೂ ಇಲ್ಲ ಅಥವಾ ಬದಲಾಗುವುದೂ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಬೋಸರಾಜು ಹೇಳಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಬೇಲ್ ನಮ್ಮೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ ಈಗಾಗಲೇ 56 ಸಾವಿರ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಯೋಜನೆ ಬದಲಾವಣೆಗೆ ಸಿಎಂ ಸಿದ್ದರಾಮಯ್ಯ ಅವರು ಸುತಾರಾಂ ಒಪ್ಪುವುದಿಲ್ಲ. ಯೋಜನೆಯನ್ನು ಎಲ್ಲಾ ಅನುಕೂಲಸ್ಥರಿಗೆ ಬೇಡ ಎಂದು ಕೆಲವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚಿಸಿದ್ದಾರೆ. ಹಾಗಂತ ಇದನ್ನು ಸಿಎಂ ಅವರು ಒಪ್ಪಲ್ಲ. ಇಡೀ ದೇಶದಲ್ಲಿಯೇ ಜನರಿಗಾಗಿ ಇಂತಹ ಯೋಜನೆ ಜಾರಿ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಹೀಗಾಗಿ ಯಾರು ಏನೇ ಹೇಳಿದರೂ ಯೋಜನೆ ನಿಲ್ಲುವುದಿಲ್ಲ ಎಂದು ಹೇಳಿದರು.
ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ
ರಾಜ್ಯ ಸಚಿವ ಸಂಪುಟ ಬದಲಾವಣೆ ವಿಷಯ ಜೋರಾಗಿರುವುದರ ಕುರಿತು ಪ್ರತಿಕ್ರಿಯಿಸಿದ ಭೋಸರಾಜ್ ಸಚಿವ ಸಂಪುಟ ಬದಲಾವಣೆ ವಿಷಯ ಕುರಿತು ಸಂಪುಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಅಂತಹ ವಿಷಯಗಳು ಏನಾದರೂ ಇದ್ದರೆ ಅದನ್ನು ಸಿಎಂ ಸರಿದೂಗಿಸಲಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಎಚ್ಎಂಟಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಾಪಸ್ ಸರ್ಕಾರದ ವಶಕ್ಕೆ ಪಡೆಯುತ್ತಿರುವುದು ನನ್ನ ಮೇಲಿನ ದ್ವೇಷದಿಂದ ಎಂದು ಕೇಂದ್ರ ಸಚಿವ ಎಚ್ಡಿಕೆ ಹೇಳಿರುವುದಕ್ಕೆ ಅವರು ಪ್ರತಿಕ್ರಿಯಿಸಿದ ಸಚಿವ ಬೋಸರಾಜ್ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವುದನ್ನು ತೆರವಿಗೆ ಅರಣ್ಯ ಸಚಿವರು ಸೂಚಿಸಿದ್ದಾರೆ.
ಎಲ್ಲೆಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆಯೋ ಅಲ್ಲಿ ಕ್ರಮ ಆಗುತ್ತದೆ. ಸಮಸ್ಯೆ ಬಂದರೆ ಅದನ್ನು ಸರ್ಕಾರ ನಿಭಾಯಿಸುತ್ತದೆ. ಇದು ಜನ ಸಾಮಾನ್ಯರಿಗೆ ಯಾರಿಗೂ ತೊಂದರೆ ಆಗುವುದಿಲ್ಲ ಎಂದರು. ಇದೇ ವೇಳೆ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಬೇಲ್ ನಮ್ಮೆ ಕಾರ್ಯಕ್ರಮದಲ್ಲಿ ಕೊಡಗಿನ ಇಬ್ಬರು ಶಾಸಕರು ಭತ್ತದ ಗದ್ದೆಯಲ್ಲಿ ಸಸಿ ನಾಟಿ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಸಮಾನತೆ ಕಾಣಬೇಕಾದರೆ ಒಳ ಮೀಸಲಾತಿ ಅನಿವಾರ್ಯವಾಗಿ ಜಾರಿಯಾಗಬೇಕು: ಸಚಿವ ಮುನಿಯಪ್ಪ ಮನವಿ
ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದಲ್ಲಿ ಆಯೋಜಿಸಿದ್ದ ಬೇಲ್ ನಮ್ಮೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಡಿಕೇರಿ ಶಾಸಕ ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಇಬ್ಬರು ಗದ್ದೆಯಲ್ಲಿ ಸಸಿ ನಾಟಿ ಮಾಡಿದರು. ಇದಕ್ಕೂ ಮುನ್ನಾ ಗ್ರಾಮದ ಹೆಬ್ಬಾಗಿಲ ಬಳಿಯಿಂದ ಕೊಡಗು ಉಸ್ತುವಾರಿ ಸಚಿವ ಬೋಸರಾಜ್ ಹಾಗೂ ಇಬ್ಬರು ಶಾಸಕರು ಮತ್ತು ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರನ್ನು ಕಾರ್ಯಕ್ರಮದ ಜಾಗದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ಮೆರವಣಿಗೆಯಲ್ಲಿ ಪ್ರತಿಯೊಬ್ಬರು ರಾಷ್ಟ್ರ ಧ್ವಜ ಹಿಡಿದು ಸಾಗಿದ್ದು ವಿಶೇಷವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.