
ತುಮಕೂರು (ಮೇ.27): ಕಾಂಗ್ರೆಸ್ ಪಕ್ಷ 1952ರಿಂದ ಈವರೆಗೂ ತಂದ ಶಿಕ್ಷಣ ನೀತಿಗಳ ಫಲವಾಗಿ ಭಾರತ ಇಂದು ವಿಶ್ವದಲ್ಲಿಯೇ ಅತೀ ದೊಡ್ಡ ಮಾನವ ಸಂಪನ್ಮೂಲ ಉತ್ಪಾದನಾ ಕೇಂದ್ರವಾಗಿ ಗುರುತಿಸಿಕೊಂಡಿದೆಯೇ ಹೊರತು 2020ರಲ್ಲಿ ಬಂದ ಹೊಸ ಶಿಕ್ಷಣ ನೀತಿಯಿಂದಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರು ಹಾಗೂ ಶಿಕ್ಷಣ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಎನ್ಇಪಿ-2020ರಿಂದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದು ತಿಳಿದ ನಂತರ ರಾಜ್ಯ ಸರ್ಕಾರ ಅದನ್ನು ಬದಲಾಯಿಸಲು ಮುಂದಾಯಿತು ಎಂದರು.
ಕಾಂಗ್ರೆಸ್ ಪಕ್ಷ 1952ರಲ್ಲಿ, 1986 ರಲ್ಲಿ ಮತ್ತು 1992 ರಲ್ಲಿ ಶಿಕ್ಷಣ ನೀತಿಗಳನ್ನು ಘೋಷಿಸಿ, ದೇಶದಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಿಸಿದ ಪರಿಣಾಮ ಇಂದು ಮೆಡಿಕಲ್, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಭಾರತ ಪ್ರಗತಿ ಸಾಧಿಸಿದೆ. ವರ್ಷದಿಂದ ವರ್ಷಕ್ಕೆ ಈ ಕ್ಷೇತ್ರಗಳಲ್ಲಿ ಹೆಚ್ಚು ಬೆಳವಣಿಗೆಗಳು ಕಂಡುಬಂದಿವೆ. ಯಾರು ಏನೇ ಟೀಕೆ ಮಾಡಲಿ, ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಕಡೆಗಣಿಸಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದೆ. ಕಳೆದ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಸಹ ಶೇ.12ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು, ಎಲ್ಲಾ ಮೂಲ ಸೌಕರ್ಯಗಳ ಜೊತೆಗೆ, ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.
ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ: ಮಾಜಿ ಸಚಿವ ಎನ್.ಮಹೇಶ್
1952 ರಿಂದ ಈವರೆಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿಲ್ಲ. ಆದರೆ ಈ ಬಾರಿ ಈ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಿ.ಟಿ.ಶ್ರೀನಿವಾಸ್ ಗೆಲುವು ಸಾಧಿಸಲಿದ್ದಾರೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಶಿಕ್ಷಕರಾಗಿ, ಅಧಿಕಾರಿಯಾಗಿ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಶಿಕ್ಷಕರ ಸಮಸ್ಯೆಗಳ ಅರಿವಿದೆ. ಹಾಗಾಗಿ ಅವರು ಗೆಲ್ಲುವುದರಿಂದ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂಬ ವಿಶ್ವಾಸ ನಮ್ಮದು. 2023ರ ವಿಧಾನಸಭಾ ಚುನಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿ ಶಿಕ್ಷಕರ ಹುದ್ದೆ ತುಂಬುವ ಭರವಸೆಯನ್ನು ನೀಡಿದ್ದೇವೆ. ರಾಜ್ಯದಲ್ಲಿ ೨.೫೦ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ತುಂಬುವಾಗ ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗೆ ಹೆಚ್ಚಿನ ಅದ್ಯತೆ ನೀಡಲಾಗುವುದು. ಇದರಿಂದ ಶಿಕ್ಷಕರಿಗೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.