ಸಿದ್ದು ನಾಯಕತ್ವದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ: ಸಚಿವ ಸತೀಶ್‌ ಜಾರಕಿಹೊಳಿ

By Kannadaprabha NewsFirst Published Feb 8, 2024, 8:45 AM IST
Highlights

ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ (ಫೆ.08): ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಎಲ್ಲ ಮುಖಂಡರು ಚುನಾವಣೆಗೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಚುನಾವಣೆ ಮಾಡುವುದು ನಮಗೆ ಹೊಸ ವಿಚಾರವಲ್ಲ. ಹಲವಾರು ಚುನಾವಣೆಯನ್ನು ನಾವು ಎದುರಿಸುತ್ತಿದ್ದೇವೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಂತೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಇಡೀ ರಾಜ್ಯದ ಜನತೆ ನಮ್ಮ ಜೊತೆಗಿದ್ದಾರೆ. ಆದರೂ ನಾವು ಲೋಕಸಭೆ ಚುನಾವಣೆಯಲ್ಲಿ ಕಠಿಣ ಶ್ರಮವಹಿಸಬೇಕಿದೆ. ಪಕ್ಷದ ಶಾಸಕರು ಕೂಡ ಪಕ್ಷದ ಕಾರ್ಯಕರ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

ಗ್ಯಾರಂಟಿ ಯೋಜನೆಗಳು ಯಾರಿಗೆ ತಲುಪಿಲ್ಲವೋ ಅಂತಹವರನ್ನು ಗುರುತಿಸಿ, ಅವರಿಗೆ ಯೋಜನೆ ತಲುಪುವಂತೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು. ಲೋಕಸಭಾ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ಎದುರಾಳಿಗಳು ನಮ್ಮ ಕಾರ್ಯಕರ್ತರನ್ನು ಸೆಳೆಯುವಂತಹ ಪ್ರಯತ್ನ ಮಾಡುತ್ತಾರೆ. ಆದರೆ, ಪಕ್ಷವನ್ನು ಅಧಿಕಾರಕ್ಕೆ ತಂದು ದೊಡ್ಡ ಶಕ್ತಿ ತುಂಬಿದ್ದಿರಿ. ಎದುರಾಳಿಗಳನ್ನು ನಮ್ಮತ್ತ ಸೆಳೆಯುವ ಕಾರ್ಯದಲ್ಲಿ ತೊಡಗಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ನಾವು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಹಾಗಾಗಿ, ಮುಖಂಡರು ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ವ್ಯಕ್ತಿಗಿಂತ ಪಕ್ಷ ದೊಡ್ಡದು. ಬರುವ ದಿನಗಳಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಅವಕಾಶಗಳು ಬಂದೇ ಬರುತ್ತವೆ. ಕೇಂದ್ರದ ವರಿಷ್ಠರು ನನ್ನ ಮೇಲೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಈ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕಿದೆ. ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ಜಿಲ್ಲೆಯ ಎರಡೂ ಲೋಕಸಭಾ ಚುನಾವಣೆ ಎದುರಾಗಲಿದೆ.

ಸಮಾಜದಲ್ಲಿ ಮೇಲು- ಕೀಳೆಂಬ ಭಾವನೆ ಇನ್ನೂ ದೂರಾಗಿಲ್ಲ: ಸಿದ್ದರಾಮಯ್ಯ ವಿಷಾದ

ಕಾರ್ಯಕರ್ತರು ಕಾರ್ಯಪ್ರವೃತ್ತರಾಗಿ ಹೆಚ್ಚಿನ ಬಲ ತುಂಬಬೇಕು. ಭೂತ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು. ಎಐಸಿಸಿ ಕಾರ್ಯದರ್ಶಿ ರೋಜ ಖಾನ್‌, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ, ಮಾಜಿ ಸಚಿವ ವೀರಕುಮಾರ ಪಾಟೀಲ, ಕೆಪಿಸಿಸಿ ವಕ್ತಾರ ಅಬ್ದುಲ ಮುನೀರ್‌, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಮೀಟಿ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಕ್ಷ್ಮಣ ಚಿಂಗಳೆ ಮೊದಲಾದವರು ಇದ್ದರು.

click me!