
ವಿಜಯಪುರ (ಫೆ.14): ನಾಥೋರಾಮ್ ಗೋಡ್ಸೆ ಮತ್ತು ಸಾವರ್ಕರ ಪೂಜೆ ಮಾಡುವವರು ನಮಗೇನು ಪಾಠ ಹೇಳಿಕೊಡುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಆರಾಧನೆ ಮಾಡುವವರಿಗೆ ಮತ ಹಾಕಬೇಡಿ ಎಂದು ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾತಿಗೆ ತಿರುಗೇಟು ನೀಡಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರನ್ನು ಕೊಂದವರನ್ನು ಪೂಜಿಸುವ ಪಕ್ಷದ ಬಗ್ಗೆ ಏನು ಮಾತನಾಡಬೇಕು? ಸಾವರ್ಕರ ಬ್ರಿಟಿಷ್ ಸರ್ಕಾರದಲ್ಲಿ ಪೆನ್ಷನ್ ತೆಗೆದುಕೊಳ್ಳುತ್ತಿದ್ದರು. ಅವರನ್ನು ಇವರು ಪೂಜಿಸುತ್ತಾರೆ. ಅವರ ಬಗ್ಗೆ ನಾವು ಮಾತನಾಡಲು ಆಗುತ್ತೆ? ಗೋಡ್ಸೆ ಪೂಜೆ ಮಾಡುವವರು ನಮಗ ಏನು ಹೇಳಿ ಕೊಡುತ್ತಾರೆ? ಸಾವರ್ಕರ ಅವರ ಪೂಜೆ ಮಾಡುವವರು ನಮಗೇನು ಪಾಠ ಹೇಳಿ ಕೊಡುತ್ತಾರೆ? ಎಂದು ಪ್ರಶ್ನಿಸಿದರು.
ಚುನಾವಣೆ ಬಳಿಕ ಸಿದ್ದರಾಮಯ್ಯ ನಿರುದ್ಯೋಗಿ: ನಳಿನ್ಕುಮಾರ್ ಕಟೀಲ್
ಬಿಜೆಪಿಯವರು ಕಿತ್ತೂರು ರಾಣಿ ಚನ್ನಮ್ಮಗೆ ಎಂದಾದರೂ ಗೌರವ ನೀಡಿದ್ದಾರಾ? ಎಂದು ಪ್ರಶ್ನಿಸಿದ ಅವರು, ಟಿಪ್ಪು ಸುಲ್ತಾನ್ ಓರ್ವ ದೇಶಪ್ರೇಮಿ ಎಂದು ನಂಬಿಕೆ ಇಟ್ಟುಕೊಂಡಿದ್ದೇವೆ. ಅವರ ಜೊತೆ ಇನ್ನೂ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೇಬಾಯಿ, ಒನಕೆ ಓಬವ್ವ, ಬೆಳವಾಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಎಲ್ಲರೂ ದೇಶಪ್ರೇಮಿ ಆಗಿದ್ದಾರೆ. ಅವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ನಾವು ಶ್ರದ್ಧೆಯಿಂದ, ಭಕ್ತಿಯಿದ ಗೌರವಿಸುತ್ತೇವೆ. ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿ ಮಾಡಿದವನು ನಾನು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ರಚಿಸಿ .262 ಕೋಟಿ ನೀಡಿದವನು ನಾನು ಎಂದರು.
ದೇಶಪ್ರೇಮಿಗಳನ್ನು ನಾವು ಗೌರವಿಸುತ್ತೇವೆ ಎಂದು ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್.ಸಿದ್ಧರಾಮಯ್ಯ, ಕಾಂಗ್ರೆಸ್ ಸಂವಿಧಾನ ಮೇಲೆ ನಂಬಿಕೆ ಇಟ್ಟುಕೊಂಡಿರೋ ಪಕ್ಷವಾಗಿದೆ. ಬಿಜೆಪಿ ಸಂವಿಧಾನಕ್ಕೆ ಗೌರವ, ನಂಬಿಕೆ ಇಲ್ಲದ ವಿರೋಧ ಪಕ್ಷವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ಕುರಿತು ಟೀಕಾಪ್ರಹಾರ ನಡೆಸಿದ ಅವರು, ಕಾಂಗ್ರೆಸ್ ಸಂವಿಧಾನ ಮೇಲೆ ನಂಬಿಕೆ ಇಟ್ಟುಕೊಂಡಿದೆ. ಬಿಜೆಪಿ ಸಂವಿಧಾನ ವಿರೋಪಕ್ಷವಾಗಿದೆ. ಇನ್ನೂ ಜೆಡಿಎಸ್ ಜಾತ್ಯತೀತ ಪಕ್ಷ. ಹೀಗಿರುವಾಗ ಹೇಗೆ ಒಂದಾಗಲು ಸಾಧ್ಯ ಎಂದು ಪ್ರಶ್ನಿಸಿದರು.
ಪಾಪ, ಎಚ್ಡಿಕೆಗೆ ವಯಸ್ಸಾಗಿದೆ ನಿವೃತ್ತಿ ಆದರೆ ಆಗಲಿ ಬಿಡಿ: ಸಿದ್ದರಾಮಯ್ಯ
ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದರು. ಇನ್ನೂ ಜೆಡಿಎಸ್ ಜಾತ್ಯಾತೀತ ಪಕ್ಷ, ಹೇಗೆ ಒಂದಾಗೋದಕ್ಕೆ ಸಾಧ್ಯ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾಂಗ್ರೆಸ್ ಮುಖಂಡರಾದ ಪ್ರೊ.ರಾಜು ಆಲಗೂರ, ಹಮೀದ ಮುಶ್ರೀಫ್, ಸೋಮನಾಥ ಕಳ್ಳಿಮನಿ, ಎಸ್.ಎಂ.ಪಾಟೀಲ ಗಣಿಹಾರ, ಸುರೇಶ ಘೋಣಸಗಿ, ಮೈಬುಬ್ ತಾಂಬೋಳಿ ಮುಂತಾದವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.