
ಬೆಂಗಳೂರು (ಫೆ.16): ‘ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ಗೆ ನೀಡಿರುವ ಹೇಳಿಕೆಗೆ ಸರಣಿ ಟ್ವೀಟ್ಗಳ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದ್ದಾರೆ ಎಂದೇ ಲೆಕ್ಕ ಎಂದಿದ್ದಾರೆ.
ಕೋಲಾರದಿಂದ ಸ್ಪರ್ಧೆ, ಸಿದ್ದು ಕೈಗೊಂಡ ತಪ್ಪು ನಿರ್ಧಾರ: ಸಿ.ಎಂ.ಇಬ್ರಾಹಿಂ
ಅಲ್ಲದೆ, ಅಶ್ವತ್ಥನಾರಾಯಣ್ ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ತಿಳಿಯಲು ಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ. ನನ್ನ ಹತ್ಯೆಗೆ ಅಶ್ವತ್ಥನಾರಾಯಣ್ ನೀಡಿದ ಕರೆಯಿಂದ ನನಗೆ ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೇ ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
ಹೊಡೆದು ಹಾಕಲು ನೀವು ಬಿಡುತ್ತೀರಾ?: ಇದೇ ವಿಚಾರವಾಗಿ ಬಾಗಲಕೋಟೆಯ ಕಲಾದಗಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಅಶ್ವತ್ಥ ನಾರಾಯಣ ಮನುಷ್ಯರೋ, ರಾಕ್ಷಸರೋ ನೀವೆ ತಿಳಿದುಕೊಳ್ಳಿ. ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದಿದ್ದಾರಂತೆ. ಹೊಡೆದು ಹಾಕೋಕೆ ನೀವು ಬಿಡ್ತಿರಾ?’ ಎಂದು ಜನರನ್ನು ಪ್ರಶ್ನಿಸಿದರು. ಇದೇ ವೇಳೆ ನಾನು ಟಿಪ್ಪು, ಬಸವಣ್ಣ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೇನೆ. ನಾನು ಮನುಷ್ಯತ್ವ ಇರುವವನು. ಹಿಂದುಗಳನ್ನು ಪ್ರೀತಿಸ್ತೀನಿ, ಮುಸ್ಲಿಂ, ಕ್ರೈಸ್ತ, ವಾಲ್ಮೀಕಿ ಎಲ್ಲರನ್ನೂ ಪ್ರೀತಿಸ್ತೀನಿ’ ಎಂದು ಹೇಳಿದರು.
ಸಿದ್ದರಾಮಯ್ಯನವರಲ್ಲಿ ಕ್ಷಮೆಯಾಚಿಸುವಂತೆ ಲೋಹಿತ್ ಆಗ್ರಹ: ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಹಾಗೂ ಶಾಸಕ ಸಿ.ಟಿ. ರವಿ ಅವರು ಕೂಡಲೇ ಸಿದ್ದರಾಮಯ್ಯ ಅವರ ಬಳಿ ಕ್ಷಮೆಯಾಚಿಸುವಂತೆ ಕರ್ನಾಟಕ ಪ್ರದೇಶ ಕುರುಬ ಸಮಾಜ ಯುವ ಘಟಕದ ತಾಲೂಕು ಅಧ್ಯಕ್ಷ ಪಂಚವಳ್ಳಿ ಲೋಹಿತ್ ಆಗ್ರಹಿಸಿದ್ದಾರೆ. ಕೆಲದಿನಗಳ ಹಿಂದೆ ನಡೆದ ಕಾರ್ಯಕ್ರಮ ಒಂದರಲ್ಲಿ ಬೆಂಬಲಿಗರ ಚಪ್ಪಾಳೆ ಗಿಟ್ಟಿಸುವ ಉದ್ದೇಶದಿಂದ ಮಾತಿನ ಭರಾಟೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವುದು ಖಂಡನೀಯ.
ರೈತರ ಸಂಕಷ್ಟಅರಿಯದ ರಾಯರಡ್ಡಿ: ಸಚಿವ ಹಾಲಪ್ಪ ಆಚಾರ್
ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡುವಾಗ ತಮ್ಮ ನಾಲಿಗೆಯ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರಲ್ಲಿ ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.