
ಬೆಂಗಳೂರು(ನ.30): ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ ನಡೆಸಿದ್ದಾರೆ.
ಶಾಸಕರಾದ ತನ್ನೀರ್ ಸೇಠ್, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಪುಟ್ಟರಂಗಶೆಟ್ಟಿ, ರಾಜು ಕಾಗೆ ಸೇರಿ ಕಾಂಗ್ರೆಸ್ನ ಹಿರಿಯ ನಾಯಕರು ಶುಕ್ರವಾರ ಬಹಿರಂಗವಾಗಿಯೇ ತಮ್ಮ ಆಸೆಯನ್ನು ಪ್ರಸ್ತುತಪಡಿಸಿದ್ದು, ವಿವಿಧ ಕೋಟಾದಡಿ ಸಚಿವರನ್ನಾಗಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಶಾಸಕ ತನ್ನೀರ್ ಸೇಠ್ ಅವರು, ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಶಕ್ತನಾಗಿ ದ್ದೇನೆ. 7 ಸಚಿವ ಸ್ಥಾನ ಬದಲಿಸುವ ಸಾಧ್ಯತೆ ಇದ್ದು, 20 ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಸಚಿವ ಜಮೀರ್ ಅವರನ್ನು ತೆಗೆದು ನನಗೆ ಕೊಡ್ತಾರೆ ಅಂದುಕೊಂಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ನಾನು ಯಾವುದೇ ವ್ಯಕ್ತಿ ಪೂಜೆ ಮಾಡಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸ್ತೇನೆ, ಇಲ್ಲವಾದರೆ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸೀನಿಯಾರಿಟಿ ಅಡಿ ಕೊಡಲಿ:
ಶಾಸಕ ಎಚ್. ಸಿ.ಬಾಲಕೃಷ್ಣ ಅವರು ರಾಮನಗರದಲ್ಲಿ ಮಾತನಾಡಿ, ಡಿಸಿಎಂ ಹುದ್ದೆ ಬಿಟ್ಟು ಸೀನಿಯರ್ಕೋಟಾದಲ್ಲಿ ರಾಮನಗರ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೊಡಬೇಕು. ನಾನು ಸೀನಿಯರ್ ಇರುವುದ ರಿಂದ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಯೋಗೇಶ್ವರ್ ಕೂಡ ನನ್ನ ಪರವಾಗಿದ್ದಾರೆ. ರೋಡಲ್ಲಿ ನಿಂತುಕೊಂಡು ಕೇಳಲು ಆಗಲ್ಲ. ಎಲ್ಲಿ ಕೇಳಬೇಕು ಅಲ್ಲಿ ಕೇಳಿದ್ದೇವೆ. ಪರಿಗಣಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಸಿಎಂ ಮನಸ್ಸಿನಲ್ಲಿದ್ದೇನೆ:
ಎಂಎಸ್ಐಎಲ್ ನಿಗಮದ ಅಧ್ಯಕ್ಷ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದಲ್ಲಿ ಮಾತನಾಡಿ, ನಾನು ಸಿಎಂ ಸಿದ ರಾಮಯ್ಯ, ಅವರ ಮನಸ್ಸಿನಲ್ಲಿದ್ದು, ಸಚಿವ ಸ್ಥಾನ ಕೊಟ್ಟೆ ಕೊಡ್ತಾರೆ. ಕಳೆದ ಬಾರಿಯೇ ಸಚಿವ ಸ್ಥಾನ ಕೊಡಬೇಕೆಂದು ತೀರ್ಮಾನವಾಗಿತ್ತು ಕಾರಣಾಂತರದಿಂದ ತಪ್ಪಿತ್ತು. ಆಗ ಸಿದ್ದರಾಮಯ್ಯ ಅವರು ನೀಡಿದ ಉಪಸಭಾಪತಿ ಆಫರ್ ನಿರಾಕರಿಸಿದ್ದೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.
ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ:
ಚಿಕ್ಕೋಡಿಯಲ್ಲಿ ಮಾತನಾಡಿದ ಶಾಸಕ ರಾಜು ಕಾಗೆ ಅವರು, ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ. ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿದರೂ ನನಗೆ ಸಂತೋಷವಿದೆ ಎಂದು ಹೇಳಿದ್ದಾರೆ.
ಪಕ್ಷದ ತೀರ್ಮಾನಕ್ಕೆ ಬದ್ಧ:
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆದ್ದ ಶಾಸಕ ಸಿ.ಪಿ. ಯೋಗೇಶ್ವರ್ ಮಾತನಾಡಿ, ನಾನು ಸಚಿವ ಸ್ಥಾನಕ್ಕೆ ಒತ್ತಾಯ ಮಾಡಲ್ಲ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾನು ಬದ್ಧನಾಗಿರುವೆ. ನಮ್ಮ ಜಿಲ್ಲೆಯಲ್ಲಿ ಬಾಲಕೃಷ್ಣ ಸೀನಿಯರ್ ಇದ್ದಾರೆ. ಯಾರಿಗೆ ಕೊಟ್ಟರೂ ಕೆಲಸ ಮಾಡುತ್ತೇವೆ. ಪಕ್ಷ ಯಾವ ಜವಾಬ್ದಾರಿ ಕೊಟ್ಟೂ ನಿರ್ವಹಿಸುತ್ತೇನೆ ಎಂದರು.
ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ:
ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಕಿತ್ತೂರಲ್ಲಿ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಾಗಿದ್ದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಪಕ್ಷದಲ್ಲಿ ಸಮರ್ಥರಿಗೆ ಸ್ತಾನಮಾನ ಸಿಗುವ ನಿರೀಕ್ಷೆ ಇದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಇಬ್ಬರು-ಮೂವರ ಹೆಸರು ಅಂತಿಮ ಹಂತದಲ್ಲಿವೆ. ಡಿಸಿಎಂ ಸ್ಥಾನಕ್ಕೆ ಹೆಚ್ಚಿನ ಒತ್ತಡವಿದ್ದು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲಿದ್ದಾರೆಂದು ತಿಳಿದು ಬಂದಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.