ಹಾವೇರಿಯಲ್ಲಿ ನಾಳೆ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ; ಸಲೀಂ ಅಹ್ಮದ್

By Kannadaprabha NewsFirst Published Jan 18, 2023, 8:07 AM IST
Highlights

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜ. 19ರಂದು ಬೆಳಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ತಿಳಿಸಿದರು.

ಹಾವೇರಿ (ಜ.18) : ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜ. 19ರಂದು ಬೆಳಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲ, ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ, ಎಂ.ಬಿ. ಪಾಟೀಲ, ಎಚ್‌.ಕೆ.ಪಾಟೀಲ, ಕೆ.ಎಚ್‌. ಮುನಿಯಪ್ಪ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಭ್ರಷ್ಟಾಚಾರ, ದ್ವೇಷ ರಾಜಕಾರಣಗಳ ಆರೋಪ ಪಟ್ಟಿಯನ್ನು ಜನರ ಮುಂದಿಡುತ್ತೇವೆ ಎಂದು ಹೇಳಿದರು.

'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಜಾಧ್ವನಿ ಯಾತ್ರೆ'

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮಾತು ತಪ್ಪಿದೆ. 8 ವರ್ಷಗಳ ಕಾಲ ಸುಳ್ಳು ಹೇಳುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಸಂಚರಿಸಿ ಜನಜಾಗೃತಿ ಮೂಡಿಸುತ್ತೇವೆ. 22 ಜಿಲ್ಲೆಗಳಲ್ಲಿ ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಯಾತ್ರೆ ಸಂಚರಿಸಲಿದೆ. ಫೆ. 3ರ ಬಳಿಕ ಇಬ್ಬರೂ ಪ್ರತ್ಯೇಕ ತಂಡಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ ನಾಲ್ಕು ವರ್ಷ ಕವಿದಿದ್ದ ಕತ್ತಲೆ ಹೋಗಲಾಡಿಸಲು ಕಾಂಗ್ರೆಸ್‌ನಿಂದ ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮಿ ಎಂಬ ಎರಡು ಚುನಾವಣಾ ಭರವಸೆಗಳನ್ನು ನೀಡಿದ್ದೇವೆ. ನಾವು ಹೇಳಿದ್ದನ್ನು ಮಾಡುತ್ತೇವೆ. ರಾಜ್ಯದ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸರ್ಕಾರದ ಆಯುಷ್ಯ ಇನ್ನು 90 ದಿನಗಳು ಮಾತ್ರ. ನಾಲ್ಕು ವರ್ಷ ಜನರಿಗೆ ಏನೂ ಮಾಡದೇ ಬಿಜೆಪಿಯವರು ಬಜೆಟ್‌ ನಂತರ ರಥಯಾತ್ರೆ ಮಾಡುತ್ತಾರಂತೆ. ಅಧಿಕಾರ ಇದ್ದಾಗ ಬಿಜೆಪಿಯವರು ಯುವಕರ ದಾರಿ ತಪ್ಪಿಸಿದ್ದು ಬಿಟ್ಟರೆ ಬೇರೆನೂ ಸಾಧನೆ ಮಾಡಿಲ್ಲ. ಆದರೆ, ಈಗ ಏನು ಸುಳ್ಳು ಹೇಳಿದರೂ ಜನ ಬಿಜೆಪಿಯನ್ನು ನಂಬುವ ಸ್ಥಿತಿಯಲ್ಲಿಲ್ಲ. ಅದಕ್ಕಾಗಿ ಬಿಜೆಪಿಯವರು ಈಗಾಗಲೇ ಕಂಗಾಲಾಗಿದ್ದಾರೆ. 2024ರಲ್ಲೂ ಮೋದಿ ವಿರುದ್ಧ ಯುವಕರು ಕೆಲಸ ಮಾಡಲಿದ್ದಾರೆ ಎಂದು ಹೇಳಿದರು. 

ಕಾಂಗ್ರೆಸ್‌ ಪ್ರಜಾಧ್ವನಿ ಬಸ್‌ ಯಾತ್ರೆ ಇಂದು ಪುನಾರಂಭ: ಹೊಸಪೇಟೆ, ಕೊಪ್ಪಳದಲ್ಲಿ ಬೃಹತ್‌ ಸಮಾವೇಶ

ಟಿಕೆಟ್‌ ಘೋಷಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊನೆಯ ಹಂತದಲ್ಲಿ ಪರಿಶೀಲನೆ ನಡೆದಿದೆ. ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳಿಗೆ ಮೌಖಿಕ ಪ್ರಚಾರ ಆರಂಭಿಸುವ ಕುರಿತು ಮೌಖಿಕ ಸೂಚನೆಯನ್ನೂ ನೀಡಲಾಗುವುದು. ಅಂತಿಮ ಹಂತದ ಚರ್ಚೆ ಬಳಿಕ ಟಿಕೆಟ್‌ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಪ್ರಮುಖರಾದ ಬಾಲರಾಜ್‌, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಸಂಜೀವಕುಮಾರ ನೀರಲಗಿ, ಡಾ. ಆರ್‌.ಎಂ. ಕುಬೇರಪ್ಪ, ಪ್ರಕಾಶಗೌಡ ಪಾಟೀಲ, ಈರಪ್ಪ ಲಮಾಣಿ, ಶಿವಕುಮಾರ ತಾವರಗಿ ಇತರರು ಇದ್ದರು..

click me!