Bengaluru: ಸಿಲಿಕಾನ್ ಸಿಟಿಯ 300 ಕಡೆ ಕಾಂಗ್ರೆಸ್‌ ಪ್ರತಿಭಟನೆ: ಭ್ರಷ್ಟಾಚಾರದ ವಿರುದ್ಧ ಮೌನ ಧರಣಿ

By Kannadaprabha NewsFirst Published Jan 23, 2023, 12:31 PM IST
Highlights

‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್‌ ಪಕ್ಷದಿಂದ ಸೋಮವಾರ ಬೆಳಗ್ಗೆ 10 ಗಂಟೆಯಿಂದ ರಿಂದ 12 ಗಂಟೆವರೆಗೆ ನಗರದ 300ಕ್ಕೂ ಹೆಚ್ಚು ಕಡೆ ‘ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ’ ಎಂಬ ಹೆಸರಿನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡಿದೆ. 

ಬೆಂಗಳೂರು (ಜ.23): ‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್‌ ಪಕ್ಷದಿಂದ ಸೋಮವಾರ ಬೆಳಗ್ಗೆ 10 ಗಂಟೆಯಿಂದ ರಿಂದ 12 ಗಂಟೆವರೆಗೆ ನಗರದ 300ಕ್ಕೂ ಹೆಚ್ಚು ಕಡೆ ‘ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ’ ಎಂಬ ಹೆಸರಿನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ 51 ಮೆಟ್ರೋ ನಿಲ್ದಾಣ, 26 ಮೇಲ್ಸೇತುವೆ, 200 ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಮೌನ ಪ್ರತಿಭಟನೆ ನಡೆಸಲಿದ್ದು, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿದೆ. ಈ ವೇಳೆ ಗಲಾಟೆ ಮಾಡುವುದಿಲ್ಲ, ಜನರ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

ಇನ್ನು ಕಾಂಗ್ರೆಸ್‌ ಪ್ರತಿಭಟನೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಈಗಾಗಲೇ ಹೈಕೋರ್ಟ್‌ ಆದೇಶದ ಮೇರೆಗೆ ಸ್ವಾತಂತ್ರ್ಯ ಉದ್ಯಾನದಲ್ಲೇ ಪ್ರತಿಭಟನೆ ನಡೆಸ ಬೇಕು. ಹೀಗಾಗಿ ಪೊಲೀಸರಿಂದ ಯಾವುದೇ ಅನುಮತಿ ನೀಡಿಲ್ಲ. ಜತೆಗೆ ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿರುವ ಪೊಲೀಸ್‌ ಆಯುಕ್ತರು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್ತ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಎನ್‌.ಎ.ಹ್ಯಾರಿಸ್‌, ರಾಜ್ಯದಲ್ಲಿ 40% ಕಮಿಷನ್‌ ಹಾಗೂ ಲಂಚಾವತಾರ ಹೆಚ್ಚಾಗಿದೆ. 

ರಾಜ್ಯದ ಸಿರಿಧಾನ್ಯ ಯೋಜನೆಗೆ ಕೇಂದ್ರದ ಶಹಬ್ಬಾಸ್‌: ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮೆಚ್ಚುಗೆ

ಈ ಬಗ್ಗೆ ಸರ್ಕಾರ, ಸಚಿವರು ಉತ್ತರಿಸುತ್ತಿಲ್ಲ. ಭ್ರಷ್ಟಾಚಾರ ಆರೋಪ ಕೇಳಿ ಬಂದ ಮಂತ್ರಿಗಳ ಬಗ್ಗೆ ಮುಖ್ಯಮಂತ್ರಿಗಳು ಯಾ ವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸಾಬೀತಾಗಿರುವುದರಿಂದ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದರು. ಪಿಎಸ್‌ಐ, ಲೋಕೋಪಯೋಗಿ ಎಂಜಿನಿಯರ್‌ಗಳ ನೇಮಕ, ಕೆಪಿಟಿಸಿಎಲ್‌ ಸೇರಿದಂತೆ ಸಾಲು-ಸಾಲು ಭ್ರಷ್ಟಾಚಾರ ಪರ್ವತಗಳನ್ನೇ ಬಿಜೆಪಿ ನಿರ್ಮಿಸಿದೆ. ಗುತ್ತಿಗೆದಾರರ ಸಂಘ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ದೂರು ನೀಡಿದರೂ ಸ್ಪಂದಿಸದ ಪ್ರಧಾನಮಂತ್ರಿಗಳು ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ಕಳೆದ ಏಳೆಂಟು ತಿಂಗಳಿಂದ ವಿಧವಾ ವೇತನ, ಅಂಗವಿಕಲರ ಹಾಗೂ ವೃದ್ಧಾಪ್ಯ ವೇತನ ನೀಡುತ್ತಿಲ್ಲ. ಬಿಜೆಪಿ ಅವಧಿ ಇರುವುದು 100 ದಿನ ಮಾತ್ರ. ಈವರೆಗೆ ತನ್ನ ಶೇ.90 ರಷ್ಟುಭರವಸೆ ಈಡೇರಿಸಿಲ್ಲ. ಇದೀಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರದ ವಂಚನೆಯನ್ನು ಜಗಜ್ಜಾಹಿರು ಮಾಡಲು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಸುರ್ಜೆವಾಲಾ, ಸಿದ್ದು, ಡಿಕೆಶಿ ಭಾಗಿ: ಟ್ರಿನಿಟಿ ವೃತ್ತದ ಬಳಿ ನಡೆಯುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಾಸಕರು, ಪರಾಜಿತ ಅಭ್ಯರ್ಥಿಗಳು 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇದೇ ವೇಳೆ ನಮ್ಮ ಪಕ್ಷ ಘೋಷಿಸಿರುವ 200 ಯುನಿಟ್‌ ಉಚಿತ ವಿದ್ಯುತ್‌, ಪ್ರತಿ ಮನೆಯೊಡತಿಗೆ ಮಾಸಿಕ 2 ಸಾವಿರ ರು. ಸಹಾಯಧನ, ಅಕ್ಕಿ ಪ್ರಮಾಣ ಹೆಚ್ಚಳದಂತಹ ಭರವಸೆ ಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಹ್ಯಾರಿಸ್‌ ಹೇಳಿದರು.

ಗೃಹ ಇಲಾಖೆ ಕಡ್ಲೆ ಮಿಠಾಯಿ ತಿನ್ನುತ್ತಿತ್ತಾ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಪ್ರತಿಭಟನೆಗಿಲ್ಲ ಪೊಲೀಸರ ಅನುಮತಿ: ನಗರಾದ್ಯಂತ ಸೋಮವಾರ ಕಾಂಗ್ರೆಸ್‌ ಹಮ್ಮಿಕೊಳ್ಳುತ್ತಿರುವ ಪ್ರತಿಭಟನೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಹೀಗಾಗಿ ಪೊಲೀಸರು ಪ್ರತಿಭಟನೆ ನಡೆಯದಂತೆ ನಿರ್ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಪ್ರತಿಭಟನೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಈಗಾಗಲೇ ಹೈಕೋರ್ಟ್‌ ಆದೇಶದ ಮೇರೆಗೆ ಸ್ವಾತಂತ್ರ್ಯ ಉದ್ಯಾನದಲ್ಲೇ ಪ್ರತಿಭಟನೆ ನಡೆಸಬೇಕು. ಹೀಗಾಗಿ ಪೊಲೀಸರಿಂದ ಯಾವುದೇ ಅನುಮತಿ ನೀಡಿಲ್ಲ. ಜತೆಗೆ ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿರುವ ಪೊಲೀಸ್‌ ಆಯುಕ್ತರು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಪ್ರತಿಭಟನೆ ಹೆಸರಿನಲ್ಲಿ ರಸ್ತೆ ತಡೆ, ಬಂದ್‌ ಹಾಗೂ ಸಾರ್ವಜನಿಕರಿಗೆ ತೊಂದರೆಯಾದರೆ ಸ್ಥಳದಲ್ಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ. ನಗರಾದ್ಯಂತ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

click me!