
ಬೆಂಗಳೂರು, (ಜೂನ್.10): ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಅಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಜೆಪಿ ಭವನದ ಪ್ರಧಾನ ಕಚೇರಿ ಇಂದು(ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ರಾಜ್ಯ ಸರ್ಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆ ಸೇರಿದಂತೆ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಯುವಜನತಾದಳ ಸಂಘಟನೆಗೆ ಸಜ್ಜಾಗುತ್ತಿದೆ. ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಇದರಿಂದ ನಮ್ಮ ಪಕ್ಷದ ಅಡಿಪಾಯ ಭದ್ರವಾಗಿದೆ ಎಂಬುದು ಗೊತ್ತಾಗುತ್ತಿದೆ. ಇದರೊಂದಿಗೆ ನಾವು ಒಂದಿಷ್ಟು ಬದಲಾವಣೆ ಮಾಡಬೇಕಾಗುತ್ತದೆ. ಎಲ್ಲಾ ಜಾತಿ, ಸಮುದಾಯದವರು ಸೇರಿ ಪಕ್ಷ ಸಂಘಟನೆ ಮಾಡಬೇಕು. ಹಿರಿಯ ನಾಯಕರು ಸಲಹೆಗಳನ್ನು ನೀಡಿದ್ದಾರೆ. ಅವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಯುವ ಜನತಾದಳ ಕಟ್ಟುವ ಕೆಲಸ ಮಾಡುತ್ತೇವೆ ಎಂದರು.
ಸಿದ್ದರಾಮಯ್ಯಗೆ ತಿರಗೇಟು ಕೊಡಲು ಎಚ್ಡಿಕೆಗೆ ಸಿಕ್ತು ಅಸ್ತ್ರ!
ಪ್ರತಿ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕಾಗುತ್ತದೆ. ಇಂದು 30 ಜಿಲ್ಲೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಹಲವಾರು ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡಿದ್ದೇವೆ. ಯುವ ನಾಯಕ ಶರಣಗೌಡರು ಕೂಡ ಸಂಘಟನೆ ವಿಚಾರವಾಗಿ ಮಾತಾಡಿದ್ದಾರೆ. ನಾವು ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಕುಮಾರಸ್ವಾಮಿ ಅವರು ಶೇಕಡಾ 30ರಷ್ಟು ಸೀಟುಗಳನ್ನು ಯುವಕರಿಗೆ ಕೊಡಬೇಕು ಎಂದು ಹೇಳಿದ್ದಾರೆ ಎಂದರು.
ಕೋಮುವಾದಿಗಳಿಗೆ ಕಾಂಗ್ರೆಸ್ ಬೆಂಬಲ
ಜಾತ್ಯಾತೀತ ತತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೋಮುವಾದಿಗಳಿಗೆ ಬೆಂಬಲ ನೀಡಿದೆ. ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಕೇಂದ್ರದ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದರು. ಆದರೆ, ರಾಜ್ಯ ನಾಯಕರ ಬಳಿ ಕೇಂದ್ರದ ನಾಯಕರಿಗೂ ಕಿಮ್ಮತ್ತು ಇಲ್ಲ ಎಂಬುದು ಗೊತ್ತಾಗಿದೆ. ಕಾಂಗ್ರೆಸ್ ಯಾರ ಟೀಂ ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು.
ಇನ್ನೂ ಜನತಾದಳ ಪಕ್ಷದಲ್ಲಿ ಅಸಮಧಾನಿತರು ಇದ್ದಾರೆ ಎನ್ನುತ್ತಿದ್ದರು. ಆದರೆ, ಶ್ರೀನಿವಾಸ ಗೌಡ ಅವರನ್ನು ಬಿಟ್ಟು ಉಳಿದ ಎಲ್ಲರೂ ಪಕ್ಷದ ಜೊತೆಗೆ ಇದ್ದಾರೆ. ಜಿ.ಟಿ.ದೇವೇಗೌಡರು, ರಾಮಸ್ವಾಮಿ, ಶಿವಲಿಂಗೇಗೌಡರು ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮೊದಲು ನಡೆದ ಜೆಡಿಎಸ್ ಯುವ ಪದಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಯುವ ಜನತಾ ದಳ ಸಂಘಟನೆ ದೃಷ್ಟಿಯಿಂದ ಕೆಲ ಮಹತ್ವದ ಸಲಹೆಗಳನ್ನು ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಕಾರ್ಯಾಧ್ಯಕ್ಷ ಎನ್ ಎಂ ನಬಿ, ನಗರ ಜೆಡಿಎಸ್ ಅಧ್ಯಕ್ಷ ಆರ್ ಪ್ರಕಾಶ, ಶರಣು ಗೌಡ ಪಾಟೀಲ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.