
ಬೆಂಗಳೂರು (ಜ.04): ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಟ ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ಮುಗಿಸಬೇಕು ಎಂಬ ಕಾರಣಕ್ಕಾಗಿ ಪಕ್ಷದ ಶಾಸಕರನ್ನು ಸೆಳೆಯುವ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲವೂ ನನಗೆ ಗೊತ್ತಿದ್ದು, ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿಯಲ್ಲಿಲ್ಲ.
ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಅವರ ಪಾಪದ ಕೊಡ ತುಂಬಿದ್ದು, ದೇವರೇ ಅವರಿಗೆ ಶಿಕ್ಷಿಸುತ್ತಾನೆ ಎಂದರು. ಪಕ್ಷದ ಶಾಸಕರ ಬಗ್ಗೆ ನಮಗೆ ಆತಂಕವಿಲ್ಲ. ಕಾಂಗ್ರೆಸ್ ಮಾಡುತ್ತಿರುವ ದುಷ್ಟ ಪ್ರಯತ್ನದ ಬಗ್ಗೆ ನಮ್ಮ ಶಾಸಕರು ನನಗೆ ಹೇಳುತ್ತಿದ್ದಾರೆ. ನಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳುವುದು ಹೇಗೆನ್ನುವುದು ಗೊತ್ತಿದೆ ಎಂದು ನುಡಿದರು.
ಈ ಸರ್ಕಾರ ಸತ್ತು ಹೋಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ
ಜನ ಅಡ್ಜೆಸ್ಟ್ ಆಗ್ತಾರೆ: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರ ಸ್ವಾಮಿ, 'ಜನ ಗ್ಯಾರಂಟಿ ಸಂತೋಷದಲ್ಲಿದ್ದು, ಅಡ್ಜೆಸ್ಟ್ ಆಗುತ್ತಾರೆ' ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತ ನಾಡಿ, ರಾಜ್ಯದಲ್ಲಿದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯವಲ್ಲ. ಸರ್ಕಾರ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ.
ಜನ ಆಕ್ರೋಶ ವ್ಯಕ್ತಪಡಿಸಿದರೂ ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತುಹೋಗಿ ಪ್ರಯಾಣ ದರ ಏರಿಕೆಗೆ ಅಡ್ಡೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಸರ್ಕಾರ ಜನರ ಮೇಲೆ ಬರೆ ಎಳೆಯುವುದು ಮತ್ತು ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ. ರಾಜ್ಯದಲ್ಲಿ ಸರ್ಕಾರ ಎನ್ನುವುದು ಇದೆಯಾ ? ಇದನ್ನು ಸರ್ಕಾರಎಂದು ಕರೆಯುತ್ತಾರಾ?
ಬಸ್ ದರ ಏರಿಕೆ: ಜನರ ಜೇಬಿಗೆ ಕೈ ಹಾಕಿ ಸರ್ಕಾರದಿಂದ ದರೋಡೆ, ಕುಮಾರಸ್ವಾಮಿ ಆಕ್ರೋಶ
ಈ ಸರ್ಕಾರ ಬಂದಾಗಿನಿಂದ ಕೇವಲ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿದರೂ ಜನ ಪ್ರತಿಭಟಿಸದೆ ಹೊಂದಿಕೊಂಡರು. ಮುದ್ರಾಂಕ ಶುಲ್ಕ ಹೆಚ್ಚಳ, ಮಾರ್ಗಸೂಚಿ ದರ, ಮದ್ಯದ ದರ ಏರಿಕೆ ಮಾಡಲಾಯಿತು. ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ. ಅಲ್ಲದೆ, ನೀರಿನ ದರವೂ ಏರಿಕೆಯಾಗಲಿದೆ ಎನ್ನುವ ಮಾಹಿತಿ ಇದೆ. ಎಲ್ಲಾ ದರಗಳನ್ನು ಸರ್ಕಾರ ಹೆಚ್ಚಳ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.