ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ: ಸಿದ್ದರಾಮಯ್ಯ

Published : Oct 19, 2023, 06:03 AM IST
ಕನ್ನಡ ಬಳಕೆ ಅನಿವಾರ್ಯವೆಂಬ ವಾತಾವರಣ ಸೃಷ್ಟಿಸಿ: ಸಿದ್ದರಾಮಯ್ಯ

ಸಾರಾಂಶ

ಕನ್ನಡ ಆಡಳಿತ ಭಾಷೆ ಎಂದು ಘೋಷಿಸಿದ್ದರೂ ಈಗಲೂ ಅನೇಕ ಸಚಿವರು, ಅಧಿಕಾರಿಗಳು ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಬರೆಯುತ್ತಿರುವುದನ್ನು, ಕಡತ ಮಂಡಿಸುವುದನ್ನು ಕೈ ಬಿಟ್ಟು, ಕನ್ನಡವನ್ನು ಬಳಕೆ ಮಾಡಬೇಕು.

ಬೆಂಗಳೂರು (ಅ.19): ಕನ್ನಡ ಆಡಳಿತ ಭಾಷೆ ಎಂದು ಘೋಷಿಸಿದ್ದರೂ ಈಗಲೂ ಅನೇಕ ಸಚಿವರು, ಅಧಿಕಾರಿಗಳು ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಬರೆಯುತ್ತಿರುವುದನ್ನು, ಕಡತ ಮಂಡಿಸುವುದನ್ನು ಕೈ ಬಿಟ್ಟು, ಕನ್ನಡವನ್ನು ಬಳಕೆ ಮಾಡಬೇಕು, ಜತೆಗೆ ರಾಜ್ಯದಲ್ಲಿ ಕನ್ನಡ ಬಳಸುವುದು ಅನಿವಾರ್ಯ ಎಂಬಂತಹ ಕನ್ನಡದ ವಾತಾವರಣವನ್ನು ಎಲ್ಲರೂ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಬರುವ ನವೆಂಬರ್‌ ಒಂದರಿಂದ ಒಂದು ವರ್ಷಗಳ ಕಾಲ ಆಚರಿಸಲಿರುವ ‘ಕರ್ನಾಟಕ ಸಂಭ್ರಮ-50’ ಲಾಂಛನ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ಭಾಷೆ ಕಲಿಯದಿದ್ದರೆ ಬದುಕು ನಡೆಸುವುದು ಸುಲಭವಲ್ಲ, ಆದರೆ ಕರ್ನಾಟಕದಲ್ಲಿ ಬೇರೆ ಭಾಷಿಕರು ಕನ್ನಡ ಕಲಿಯದಿದ್ದರೂ ಇಲ್ಲಿ ಜೀವನ ನಡೆಸುತ್ತಾರೆ. ಹಾಗಾಗಿ ಕರುನಾಡಿನಲ್ಲಿ ಕನ್ನಡ ಬಳಕೆ ಮಾತನಾಡುವುದು ಅನಿವಾರ್ಯ ಎಂಬಂತಹ ವಾತಾವರಣವನ್ನು ನಾವೆಲ್ಲ ಸೃಷ್ಟಿಸಬೇಕು ಎಂದರು. ಬೇರೆ ಭಾಷಿಕರು ತಮ್ಮ ಭಾಷೆಯಲ್ಲೇ ಮಾತನಾಡುತ್ತಾರೆ, ಕನ್ನಡವನ್ನು ಕಲಿಯಲು ಮುಂದಾಗುವುದೇ ಇಲ್ಲ. ಆದರೆ ನಾವು ಅವರಿಗೆ ಕನ್ನಡ ಕಲಿಸುವ ಬದಲು ಅವರ ಭಾಷೆಯಲ್ಲೇ ಮಾತನಾಡುತ್ತಿದ್ದೇವೆ. ಇದಕ್ಕೆ ನಮ್ಮಲ್ಲಿರುವ ಅತಿಯಾದ ಉದಾರತೆ ಸಹ ಕಾರಣವಾಗಿದೆ. 

ಪಂಚರಾಜ್ಯ ಚುನಾವಣೆಗಾಗಿ ಹೈಕಮಾಂಡ್‌ ನಯಾಪೈಸೆ ಕೇಳಿಲ್ಲ: ಸಿದ್ದರಾಮಯ್ಯ

ಅತಿಯಾದ ಉದಾರತೆ ಕನ್ನಡದ ಭಾಷಾ ಬೆಳವಣಿಗೆಗೆ, ಸಂಸ್ಕೃತಿ, ಸಂಪ್ರದಾಯ ದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದ ಕೆಲವು ಭಾಗಗಳಿಗೆ ಹೋದರೆ ನಾವು ಎಲ್ಲಿದ್ದೇವೆ ಎಂಬ ಭಾವನೆ ಬರುತ್ತದೆ. ಕನ್ನಡ ಭಾಷೆಯನ್ನು ಬಳಸುವುದೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿ 50 ವರ್ಷವಾಗಿದೆ. ಕಳೆದ ವರ್ಷದಿಂದ ಈ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ ಹಿಂದಿನ ಸರ್ಕಾರ ಆಚರಿಸದ ಕಾರಣ ಈ ವರ್ಷದ ನವೆಂಬರ್‌ 1ರಿಂದ ಮುಂದಿನ 1 ವರ್ಷ ಕಾಲ ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, 50 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ಎಂಬ ಹೆಸರನ್ನು ಕೊಟ್ಟು ಹೋಗಿದ್ದಾರೆ. ಅವರನ್ನು ಸ್ಮರಿಸಿಕೊಂಡು ಈ ಕಾರ್ಯಕ್ರಮವನ್ನು ವರ್ಷವಿಡೀ ಆಚರಿಸಲು ಉದ್ದೇಶಿಸಲಾಗಿದೆ ಎಂದರು. ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಸಂದರ್ಭದಲ್ಲಿ ಹಂಪಿಯ ವಿರುಪಾಕ್ಷ ದೇವಸ್ಥಾನದಿಂದ ಗದಗನ ವೀರ ನಾರಾಯಣಸ್ವಾಮಿ ದೇವಸ್ಥಾನದವರೆಗೆ ಕನ್ನಡ ಜ್ಯೋತಿ ಯಾತ್ರೆ ಆಯೋಜಿಸಲಾಗಿತ್ತು. ಈಗ ಅದೇ ರೀತಿ 50 ವರ್ಷಗಳ ಸಂಭ್ರಮದ ಅಂಗವಾಗಿ ನ.1ರಂದು ಯಾತ್ರೆ ನಡೆಸಲಾಗುವುದು ಎಂದು ಹೇಳಿದರು.

ಕಾನೂನು ಪದವಿಗೆ ಸೇರದಿದ್ದರೆ ನಾನು ಕುರಿ ಕಾಯುತ್ತ ಇರಬೇಕಿತ್ತು: ಸಿದ್ದರಾಮಯ್ಯ

ಲಾಂಛನ ಕಲಾವಿದ ರವಿರಾಜಗೆ 25 ಸಾವಿರ ರು. ಬಹುಮಾನ: 50 ವರ್ಷಗಳ ಕರ್ನಾಟಕ ಸಂಭ್ರಮದ ಲಾಂಛನ ರಚಿಸಿದ ಕಲಾವಿದ ರವಿರಾಜ ಜಿ. ಹುಲಗೂರು ಅವರಿಗೆ 25 ಸಾವಿರ ರು. ಗಳ ಬಹುಮಾನವನ್ನು ಮುಖ್ಯಮಂತ್ರಿಗಳು ನೀಡಿ ಗೌರವಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಲಾವಿದನಿಗೆ ನೀಡುತ್ತಿರುವ ಪ್ರೋತ್ಸಾಹದ ಬಹುಮಾನ ಕಡಿಮೆಯಾಗಿದ್ದು, ಬಿಬಿಎಂಪಿಯಿಂದ ಒಂದು ಲಕ್ಷ ರು. ನೀಡುವುದಾಗಿ ಪ್ರಕಟಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಪರಿಷತ್‌ ಸದಸ್ಯ ನಾಗರಾಜ ಯಾದವ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್‌. ಮಂಜುಳಾ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!