
ಮಂಡ್ಯ(ಅ.06): ಮುಂಬರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ನಡೆಸಲುದ್ದೇಶಿರುವ ಬಸ್ಯಾತ್ರೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ಶಿವಪುರದಲ್ಲಿ ಬುಧವಾರ ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ಮಾಸಾಂತ್ಯದಲ್ಲಿ ನಡೆಯಲಿದೆ ಎಂದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್ಯಾತ್ರೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ನಾನು 2 ತಂಡಗಳಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತೇವೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಯಾತ್ರೆ ಬಗ್ಗೆ ಅವರ ಒಪ್ಪಿಗೆ ಪಡೆಯಲಾಗುವುದು ಎಂದರು.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆ, ಖರ್ಗೆ ವಿರುದ್ಧ ಸ್ಪರ್ಧಿಸಿದ ತರೂರ್ ಮೇಲೆ ಹೆಚ್ಚಿದ ಒತ್ತಡ
ಇದೇ ವೇಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಪಕ್ಷದ ಬಗ್ಗೆ ಜನರಲ್ಲಿ ದಿನೇ ದಿನೆ ಒಲವು ಹೆಚ್ಚಾಗುತ್ತಿದೆ ಎಂದರು.
ಖರ್ಗೆ ಗೆಲುವಿಗೆ ಶ್ರಮ:
ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅದರ ಪ್ರಕ್ರಿಯೆ ಮುಗಿದ ನಂತರ ನಾನೂ ಒಳಗೊಂಡಂತೆ ಕಾಂಗ್ರೆಸ್ ಮುಖಂಡರು ಅವರ ಪರ ಪ್ರಚಾರ ನಡೆಸುತ್ತೇವೆ. ಖರ್ಗೆ ನಮ್ಮ ರಾಜ್ಯದವರೇ ಆದ ಕಾರಣ ಅವರ ಗೆಲುವಿಗೆ ನಮ್ಮ ಎಲ್ಲ ಮುಖಂಡರು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.