ದಾವಣಗೆರೆ ಲೋಕಸಭಾ ಕ್ಷೇತ್ರ ಗೆದ್ದೇ ಗೆಲ್ತೇವೆ: ಕೋಟ ಶ್ರೀನಿವಾಸ ಪೂಜಾರಿ

By Kannadaprabha NewsFirst Published Mar 4, 2024, 11:30 PM IST
Highlights

ದೇಶಕ್ಕೆ ನರೇಂದ್ರ ಮೋದಿಯಂತಹ ಸಮರ್ಥ ನಾಯಕರ ಅವಶ್ಯವಿರುವ ಹಿನ್ನೆಲೆಯಲ್ಲಿ ಜನರ ಒಲವು ಬಿಜೆಪಿ ಕಡೆ ಇರುವುದು ಕಂಡು ಬರುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ದಾವಣಗೆರೆ (ಮಾ.04): ದಾವಣಗೆರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ರಾಜ್ಯಾದ್ಯಂತ ಪ್ರತಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ದೇಶಕ್ಕೆ ನರೇಂದ್ರ ಮೋದಿಯಂತಹ ಸಮರ್ಥ ನಾಯಕರ ಅವಶ್ಯವಿರುವ ಹಿನ್ನೆಲೆಯಲ್ಲಿ ಜನರ ಒಲವು ಬಿಜೆಪಿ ಕಡೆ ಇರುವುದು ಕಂಡು ಬರುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.  ಪ್ರತಿ ಕ್ಷೇತ್ರದಂತೆ ಈ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ನಂತರ ದಾವಣಗೆರೆ ಕ್ಷೇತ್ರವನ್ನೂ ಮತ್ತೆ ಗೆದ್ದೇ ಗೆಲ್ಲುತ್ತೇವೆಂಬ ಸಂಪೂರ್ಣ ವಿಶ್ವಾಸ ನಮಗೆ ಇದೆ ಎಂದರು. ಒಂದು ಪಕ್ಷವೆಂದ ಮೇಲೆ ಗುಡುಗು, ಮಿಂಚು ಇದ್ದೇ ಇರುತ್ತದೆ. ಮಳೆ ಬಂದ ಮೇಲೆ ಎಲ್ಲವೂ ಸರಿಯಾಗುತ್ತದೆ. ನಾವೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಪ್ರಾಮಾಣಿಕವಾಗಿ ಅದರ ವರದಿಯನ್ನು ರಾಜ್ಯ ಸಮಿತಿ ಮೂಲಕ ಕೇಂದ್ರಕ್ಕೆ ಕಳಿಸಿ ಕೊಡುತ್ತೇವೆ ಎಂದು ಹೇಳಿದರು.

ಹಲವರಿಂದ ಗೋಪ್ಯವಾಗಿ ಅಭಿಪ್ರಾಯ ಸಂಗ್ರಹ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹದ ಕುರಿತಂತೆ ಕೋರ್ ಕಮಿಟಿ ಸಭೆ ಭಾನುವಾರ ನಡೆಯಿತು. ವಿಪ ವಿಪಕ್ಷ ನಾಯಕ, ಪಕ್ಷದ ಜಿಲ್ಲಾ ವೀಕ್ಷಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯಗಳ ಸಂಗ್ರಹಿಸಲಾಯಿತು. ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಸೇರಿ ಅನೇಕರು ತಮ್ಮ ಗೋಪ್ಯವಾಗಿ ಪಕ್ಷದ ವೀಕ್ಷಕರಿಗೆ ಅಭಿಪ್ರಾಯ ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲಕುಮಾರ ನಾಯ್ಕ, ಡಿ.ಎಸ್.ಶಿವಶಂಕರ ಇತರರಿದ್ದರು.

ಪಾಕ್‌ಗೆ ಜೈಕಾರ ಸಿದ್ದರಾಮಯ್ಯ ಸರ್ಕಾರದ ಸಾಧನೆ: ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದು ಸಿದ್ದರಾಮಯ್ಯ ಅವರ ಎಂಟು ತಿಂಗಳ ಸಾಧನೆಯಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ. ರೋಡಿನಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಇಂದು ಕೆಟ್ಟ ಕೆಲಸಕ್ಕೆ ಇಳಿದಿರುವುದು ದುರಂತ ಎಂದ ಅವರು, ಸುಳ್ಳಿನ ಸರಮಾಲೆಯನ್ನು ಸೃಷ್ಟಿ ಮಾಡಿರುವ ಸಿದ್ದರಾಮಯ್ಯ ಸರಕಾರ, ಪಾಕಿಸ್ತಾನದ ಪರವಾದ ಘೋಷಣೆಯನ್ನು ಇಲ್ಲ ಎಂದು ಹೇಳಲು ಹೊರಟಿದೆ ಎಂದು ಟೀಕಿಸಿದರು.

ಮೊದಲ ಬಾರಿಗೆ ಆಪರೇಷನ್ ಕಮಲ ಜಾರಿಗೆ ತಂದಿದ್ದು ಬಿಜೆಪಿ: ಸಿಎಂ ಸಿದ್ದರಾಮಯ್ಯ

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ಶಿಕ್ಷೆ ನೀಡದ ಫಲವಾಗಿ ಮುಂದುವರಿದ ಭಾಗವಾಗಿ ಬಾಂಬ್ ಸ್ಫೋಟಕ್ಕೆ ಮುಂದಾಗಿರುವ ಘಟನೆ ನಡೆದಿದೆ ಎಂದರು. ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು.

click me!