
ಬೆಂಗಳೂರು (ಏ.08): ದಿನದಿಂದ ದಿನಕ್ಕೆ ಲೋಕಸಭೆ ಚುನಾವಣೆ ಕಾವು ಪಡೆಯುತ್ತಿರುವ ನಡುವೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಅವರು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ ನಂಜುಂಡಿ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿ ಕೆಲಹೊತ್ತು ಸೌಹಾರ್ದಯುತವಾಗಿ ಚರ್ಚೆ ನಡೆಸಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿಪಕ್ಷಗಳ ಮುಖಂಡರು, ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವುದು ಸೇರಿದಂತೆ ಅನೇಕ ತಂತ್ರಗಾರಿಕೆಗಳನ್ನು ಶಿವಕುಮಾರ್ ಮಾಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರಾದ ನಂಜುಂಡಿ ಅವರನ್ನು ಭೇಟಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಜಾತಿ ಗಣತಿ ವರದಿಯನ್ನು ಸ್ವೀಕರಿಸಬೇಕು ಎಂದು ನಂಜುಂಡಿಯವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ರಾಜ್ಯ ಸರ್ಕಾರ ವರದಿ ಸ್ವೀಕರಿಸಿದಾಗ ಅದನ್ನು ಸ್ವಾಗತಿಸಿದ್ದರು. ಮತ್ತೊಂದೆಡೆ ನಂಜುಂಡಿ ಅವರ ವಿಧಾನ ಪರಿಷತ್ ಅವಧಿ ಜೂನ್ ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಅವರ ಜೊತೆಗಿನ ಭೇಟಿಯು ಹಲವು ಊಹಾಪೋಹಗಳಿಗೆ ಎಡೆಮಾಡಿದೆ.
52 ಲಕ್ಷಕ್ಕೆ ಏರಿಕೆಯಾದ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ: ಜೂ.1ರಿಂದ ದಂಡ ಪ್ರಯೋಗ?
ಕಾಂಗ್ರೆಸ್ ಪಕ್ಷದಲ್ಲಿದ್ದ ನಂಜುಂಡಿಯವರು ವಿಧಾನಸಭೆ ಚುನಾವಣೆಗೆ ಸ್ಪರ್ಧೆಗೆ ಅವಕಾಶ ನೀಡಿಲ್ಲ, ವಿಧಾನ ಪರಿಷತ್ ಸ್ಥಾನ ನೀಡಲಿಲ್ಲವೆಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಯಡಿಯೂರಪ್ಪ ಅವರ ಬೆಂಬಲದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ, ಇತ್ತೀಚಿನ ಹಲವು ತಿಂಗಳುಗಳಿಂದ ನಂಜುಂಡಿ ಅವರು ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ನಿರೀಕ್ಷಿತ ಮಟ್ಟದ ಸಹಾಯ ಮಾಡಲಿಲ್ಲ ಮತ್ತು ತಮ್ಮ ನಾಯಕತ್ವವನ್ನು ಸರಿಯಾಗಿ ಗುರುತಿಸಲಿಲ್ಲ ಎಂಬ ಬೇಸರವೂ ಅವರಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.