ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್ ಯೋಜನೆ ರದ್ದು ಅಸಾಧ್ಯ: ಆರ್.ಅಶೋಕ್‌ಗೆ ಡಿಕೆಶಿ ತಿರುಗೇಟು

Published : Sep 20, 2025, 09:14 AM IST
DK Shivakumar

ಸಾರಾಂಶ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎರಡು ಜನ್ಮ ತಾಳಿದರೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ, ಬಿಡದಿ ಟೌನ್ ಶಿಪ್ ಸೇರಿದಂತೆ ಯಾವುದೇ ಯೋಜನೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದರು.

ರಾಮನಗರ (ಸೆ.20): ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎರಡು ಜನ್ಮ ತಾಳಿದರೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ, ಬಿಡದಿ ಟೌನ್ ಶಿಪ್ ಸೇರಿದಂತೆ ಯಾವುದೇ ಯೋಜನೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 110ನೇ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಬಿಡದಿ ಟೌನ್ ಶಿಪ್ ಯೋಜನೆ ತೆಗೆದು ಹಾಕುವುದಾಗಿ ಯಾರೋ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರಂತೆ. ಮಿಸ್ಟರ್ ಅಶೋಕ್, ಅಶ್ವತ್ಥ ನಾರಾಯಣ, ಜನತಾದಳದ ನಾಯಕರೇ ಬದಲಾವಣೆ ಮಾಡಲು ನಿಮ್ಮ ಯಾರ ಹಣೆಯಲ್ಲೂ ಬರೆದಿಲ್ಲ. ಅಶೋಕಣ್ಣಾ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲು 2028ಕ್ಕೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಈ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ನೀವು ಇನ್ನು ಅಧಿಕಾರ ಮರೆತುಬಿಡಿ ಎಂದರು ವ್ಯಂಗ್ಯವಾಡಿದರು.

ಆಧಾರ್ ಕಾರ್ಡ್, ಪಿಂಚಣಿ, ಉಳುವವನೆ ಭೂಮಿಯ ಒಡೆಯ ಸೇರಿದಂತೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಒಂದೇ ಒಂದು ಯೋಜನೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಆಗಿಲ್ಲ. ನಮ್ಮ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಮರು ಜನ್ಮವೆತ್ತಿ ಬಂದರೂ ದಳ ಹಾಗೂ ಬಿಜೆಪಿಯವರು ನಿಲ್ಲಿಸಲು, ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಸವಾಲು ಹಾಕಿದರು. ನಮ್ಮನ್ನು ಟೀಕೆ ಮಾಡಿದ ವಿರೋಧ ಪಕ್ಷಗಳು ಈಗ ನಮ್ಮನ್ನೇ ಅನುಕರಣೆ ಮಾಡುತ್ತಿವೆ. ಬಿಜೆಪಿ ಆಡಳಿತವಿರುವ ಹರಿಯಾಣ, ಮಹಾರಾಷ್ಟ್ರ, ಗೋವಾ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ.

ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ನಾವು ರಾಜಕಾರಣ ಮಾಡುವವರು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಕಳೆದ ಎರಡು ವರ್ಷದಲ್ಲಿ ಸುಮಾರು ₹1 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಖಾತೆಗೆ ಹಾಕಿದ್ದೇವೆ. ಮಹಿಳೆಯರು ಸಂಸಾರವನ್ನು ತೂಗಿಸುತ್ತಾರೆ ಎಂದು ಅವರಿಗೆ ಹೆಚ್ಚು ಪ್ರಯೋಜನ ನೀಡಲಾಗಿದೆ. ಅವರು ಮಕ್ಕಳ ಭವಿಷ್ಯಕ್ಕೆ ಗ್ಯಾರಂಟಿ ಯೋಜನೆಗಳ ಹಣ ಬಳಕೆ ಮಾಡುತ್ತಾರೆ ಎಂಬುದು ನಮ್ಮ ಆಲೋಚನೆ ಎಂದರು.

ರಾಜಮನೆತನದ ಅರಸು

ದೇವರಾಜ ಅರಸು ರಾಜಮನೆತನಕ್ಕೆ ಸೇರಿದವರು. ಆದರೆ, ಬಡವರ ಪರವಾಗಿ ಕೆಲಸ ಮಾಡಿದರು. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯ ಎನ್ನದೇ ಸಕಲ ಹಿಂದುಳಿದ ಸಮುದಾಯಗಳ ಪರವಾಗಿ ನಿಂತು ಅರಸು ಅವರು ಕೆಲಸ ಮಾಡಿದವರು ಎಂದು ಡಿ.ಕೆ.ಶಿವಕುಮಾರ್ ಬಣ್ಣಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ