ಎಲ್ಲಾ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರಿಗೆ ಏಳು ತಿಂಗಳಿಗೆ ಲಾಟರಿ ಹೊಡೆದು ಪಕ್ಷದ ಅಧ್ಯಕ್ಷರಾಗಿದ್ದಾರೆ.
ಬೆಂಗಳೂರು (ಫೆ.06): ಎಲ್ಲಾ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಅವರಿಗೆ ಏಳು ತಿಂಗಳಿಗೆ ಲಾಟರಿ ಹೊಡೆದು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ತಂದೆಯ ಆಸ್ತಿ ಪಾಲು ಸಿಕ್ಕಂತೆ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಹೀಗಾಗಿ ಅವರು ಮಾತನಾಡುತ್ತಿದ್ದಾರೆ. ನಾನು ಅವರ ಉತ್ಸಾಹಕ್ಕೆ ಧಕ್ಕೆ ತರುವುದಿಲ್ಲ’ ಎಂದು ತಿರುಗೇಟು ನೀಡಿದರು.
ಒಗ್ಗಟ್ಟಿಗಾಗಿ ಪ್ರತ್ಯೇಕ ದೇಶದ ಹೇಳಿಕೆ ನೀಡಿರಬಹುದು: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕೆಂಬ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಸುರೇಶ್ ಕುಮಾರ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ದೇಶವನ್ನು ಒಗ್ಗಟ್ಟಾಗಿಡಬೇಕು, ರಾಜ್ಯಗಳಿಗೆ ಸಮಾನವಾಗಿ ಹಣ ಹಂಚಬೇಕೆಂಬ ಉದ್ದೇಶದಿಂದ ಆ ರೀತಿಯ ಹೇಳಿಕೆ ನೀಡಿದ್ದಾರೆಂದು ಡಿ.ಕೆ.ಸುರೇಶ್ ಹೆಸರೆತ್ತದೆ ತಿಳಿಸಿದರು. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಭಾರತವನ್ನು ಒಟ್ಟುಗೂಡಿಸುವ ಕೆಲಸ ಮಾಡಿದೆ. ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಿಗೆ ಸಮಾನವಾಗಿ ಹಣ ಹಂಚಬೇಕು, ದೇಶವನ್ನು ಒಂದಾಗಿಡಬೇಕು ಎಂಬುದನ್ನು ಒತ್ತಿ ಹೇಳುವಾಗ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರಬಹುದು ಎಂದರು.
ಎಚ್ಡಿಕೆ ಬಿಜೆಪಿ ವಕ್ತಾರ: ಕೇಸರಿ ಶಾಲು ಹಾಕಿಕೊಳ್ಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಕ್ತಾರರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು. ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸ್ಥಿತಿ ನೋಡಿದರೆ ನನಗೂ ಭಯವಾಗುತ್ತದೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಿದ್ದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ ಮುನಿಸ್ವಾಮಿ
ದೇವೇಗೌಡರ ಸಿದ್ಧಾಂತವನ್ನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗುವಂತೆ ಪರಿಸ್ಥಿತಿ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದು ಹೇಳಿದರು. ಇದೇ ವೇಳೆ ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು, ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಉತ್ತರಿಸಿ, ಅವರು, ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ ಕಾದುಕುಳಿತಿದ್ದೆ ಎಂದು ತಿರುಗೇಟು ನೀಡಿದರು.