ಮಾಧ್ಯಮಗಳ ಮುಂದೆ ಮಾತನಾಡಿದಂತೆ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Published : Nov 29, 2024, 01:44 PM IST
ಮಾಧ್ಯಮಗಳ ಮುಂದೆ ಮಾತನಾಡಿದಂತೆ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಚರ್ಚೆ ಮಾಡಿದಂತೆ ರಾಜಕೀಯ ನಡೆಯುವುದಿಲ್ಲ ಎಂದು ಹೇಳಿದರು.

ದೆಹಲಿ (ನ.29): ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, 'ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ' ಎಂದು ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ. ಇನ್ನು ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, 'ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, 'ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ. ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಸಂಪುಟ ವಿಸ್ತರಣೆ ಸಂದರ್ಭ ಒದಗಿ ಬಂದಿಲ್ಲ: ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ. ಇನ್ನು ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಕೇಳಿದಾಗ, 'ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ. ಗುರುವಾರದಂದು  ಕೇಂದ್ರ ಅರಣ್ಯ ಸಚಿವರಾದ ಭೂಪೇಂದರ್ ಯಾದವ್  ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ - ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು ಎಂದರು.

ರಾಂಚಿಯಲ್ಲಿ ನಡೆದ ಹೇಮಂತ್ ಸೋರೆನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ