
ಉತ್ತರ ಕನ್ನಡ (ಆ.10): ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ಘನತೆಗೆ ಕುಂದುತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರವು ಕೂಡಲೇ ಪಾರದರ್ಶಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೆಹಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ಅವರು, ಅನಾಮಿಕ ವ್ಯಕ್ತಿಯ ಹಿನ್ನೆಲೆ ಬಹಿರಂಗಪಡಿಸಲು ಆಗ್ರಹಿಸಿದರಲ್ಲದೇ ಮೊದಲು 13 ಸ್ಥಳಗಳ ಬಗ್ಗೆ ಹೇಳಿದ್ದ ಅನಾಮಿಕ ವ್ಯಕ್ತಿ ಈಗ 18 ಸ್ಥಳಗಳ ಬಗ್ಗೆ ಹೇಳುತ್ತಿದ್ದಾನೆ. ಯಾವುದೇ ಮಾಹಿತಿಯಿಲ್ಲದ ವ್ಯಕ್ತಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿ ಯಾರು? ಕಳೆದ 15 ವರ್ಷಗಳಿಂದ ಆತ ಎಲ್ಲಿದ್ದ ಮತ್ತು ಏನು ಮಾಡುತ್ತಿದ್ದ? ಅವನ ಹಿಂದಿರುವವರು ಯಾರು? ಎಲ್ಲಾ ಮಾಹಿತಿಯನ್ನು ಸರ್ಕಾರ, ಎಸ್ಐಟಿ ಬಹಿರಂಗಪಡಿಸಲಿ ಎಂದರು.
ಎಸ್ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್ಐಟಿಯನ್ನು ಬಳಸಿಕೊಳ್ತಿದೆ. ಎಸ್ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂಬ ಅನುಮಾನವೂ ವ್ಯಕ್ತಪಡಿಸಿದ ಕಾಗೇರಿ, ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯ ಎಡಪಂಥೀಯ ವಿಚಾರಧಾರೆಯವರ ನಿದ್ದೆಗೆಡಿಸಿವೆ. ಇದರಿಂದಲೇ ಅವರು ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದೂಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಈ ಷಡ್ಯಂತ್ರ ಖಂಡಿಸಬೇಕು ಎಂದು ಕಾಗೇರಿ ಕರೆ ನೀಡಿದರು.
ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ, ತನಿಖೆಯನ್ನು ಸುಖಾ ಸುಮ್ಮನೆ ಎಳೆಯುತ್ತಿದೆ. ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸತ್ ಸಂಪ್ರದಾಯ ಇರುವ ಸ್ಥಳ ಧರ್ಮಸ್ಥಳ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮಸ್ಥಳದಲ್ಲಿ ಆಚಾರ-ವಿಚಾರಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಎಸ್ಐಟಿ ಮಾಡಿದ್ದೀರಿ. ಎಷ್ಟು ವರ್ಷ ಇರಿಸಿಕೊಳ್ಳುವಿರಿ?. ಮೆಕ್ಕಾ ಮದೀನಾದಲ್ಲಿ ಈ ರೀತಿ ನಡೆದುಕೊಂಡಿದ್ದರೆ ಸುಮ್ಮನಿರ್ತಿದ್ರಾ? ಎಂದು ಕಿಡಿ ಕಾರಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಜಗದೀಶ ಶೆಟ್ಟರ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹಿಂದೂ ಧರ್ಮ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಎಡಪಂಥಿಯರು, ಕಮ್ಯುನಿಸ್ಟರು ಧರ್ಮಸ್ಥಳದ ಬಗ್ಗೆ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ದೂರಿದರು. ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಈ ವಿಚಾರ ಹಿಡಿದುಕೊಂಡು ಧರ್ಮಸ್ಥಳ, ಹೆಗ್ಗಡೆಯವರ ಹೆಸರನ್ನು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಅನಾಮಿಕ ವ್ಯಕ್ತಿ ಹಿಂದೆ ಯಾವ ಧರ್ಮದ್ರೋಹಿ, ದೇಶದ್ರೋಹಿ ಗುಂಪಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.