ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ

Kannadaprabha News   | Kannada Prabha
Published : Nov 03, 2025, 07:09 AM IST
dk shivakumar

ಸಾರಾಂಶ

ಬಿಹಾರ ಚುನಾವಣೆ ಮತದಾನಕ್ಕೆ ರಾಜ್ಯದಿಂದ ತೆರಳುವ ಅಲ್ಲಿನ ಮತದಾರರಿಗೆ ಮೂರು ದಿನ ರಜೆ ನೀಡುವಂತೆ ಸಂಸ್ಥೆ, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್ ಸಂಸ್ಥೆಗೆ ಸೂಚಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು : ಬಿಹಾರ ಚುನಾವಣೆ ಮತದಾನಕ್ಕೆ ರಾಜ್ಯದಿಂದ ತೆರಳುವ ಅಲ್ಲಿನ ಮತದಾರರಿಗೆ ಮೂರು ದಿನ ರಜೆ ನೀಡುವಂತೆ ಸಂಸ್ಥೆ, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್ ಸಂಸ್ಥೆಗೆ ಸೂಚಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಭಾನುವಾರ ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್‌ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಬಿಹಾರದ ಅಭಿವೃದ್ಧಿಗಾಗಿ ಮಹಾಗಟಬಂಧನ್‌ಗೆ ಮತ ನೀಡಿ ಹಾಗೂ ಸಂಬಂಧಿಕರಿಗೂ ಮತ ನೀಡುವಂತೆ ತಿಳಿಸಿ ಎಂದರು.

ನನಗೆ ದೊಡ್ಡ ಸ್ಥಾನ ಸಿಗಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಗಟ ಬಂಧನ್ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿತೀಶ್ ಕುಮಾರ್ ರಾಜಕೀಯದ ಕೊನೆಗಾಲದಲ್ಲಿದ್ದು, ಅವರ ಕೈಯಲ್ಲಿ ಬಿಹಾರವಿಲ್ಲ. ಬಿಹಾರದ‌ ಅಭಿವೃದ್ಧಿಗೆ ಲಾಲೂಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡುವಂತೆ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಈ ಕಾರಣಕ್ಕೆ ಅವರಿಗೆ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.

ನಿವೇಶನ ಕೊಡ್ತೇನೆ:

ಬಿಹಾರದವರು ಇಲ್ಲದಿದ್ದರೆ ಬೆಂಗಳೂರಿನಲ್ಲಿ ಅತ್ಯುತ್ತಮ ‌ಕಟ್ಟಡಗಳನ್ನು ನಿರ್ಮಾಣ ಮಾಡಲು ಸಾಧ್ಯವಿರುತ್ತಿರಲಿಲ್ಲ. ಕರ್ನಾಟಕ ಬಿಹಾರ ಸಂಘದ ಸಮುದಾಯ ಭವನಕ್ಕೆ ನಿವೇಶನ ನೀಡಲಾಗುವುದು. ಇನ್ನೊಂದು ತಿಂಗಳಲ್ಲಿ ಬೇರೆ ರಾಜ್ಯದ ಸಂಘಟನೆಗಳಿಗೆ ನಿವೇಶನ ಮೀಸಲಿಡುವ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ನಿವೇಶನಕ್ಕೆ ಅರ್ಜಿ ಸಲ್ಲಿಸಬೇಕು. ಸಂಘದ ಪದಾಧಿಕಾರಿಗಳು ಮುಂದಿನ ವಾರದಲ್ಲಿ ಬಂದು ಭೇಟಿ ಮಾಡಿ ಎಂದು ಸೂಚಿಸಿದರು.

ಕರ್ನಾಟಕದ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ. ನಮ್ಮ ಮಾದರಿಯನ್ನು ನೋಡಿ ಟೀಕೆ ಮಾಡಿದವರೇ ಈಗ ಕರ್ನಾಟಕ ಮಾದರಿ ಅನುಸರಿಸುತ್ತಿದ್ದಾರೆ. ಬಿಹಾರದಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ‌ಘೋಷಣೆ ಮಾಡಲಾಗಿದೆ. ಕೊರೋನಾ ವೇಳೆ ಎರಡರಷ್ಟು ಬಸ್ ದರ ಏರಿಕೆ ಮಾಡಿ ಊರಿಗೆ ಮರಳುವವರಿಗೆ ತೊಂದರೆ ನೀಡಲಾಗಿತ್ತು. ಆಗ ಹೋರಾಟ ಮಾಡಿ ಕಾರ್ಮಿಕರನ್ನು ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು ಎಂದು ಸ್ಮರಿಸಿದರು.

ನಾವು ಬಿಹಾರಿಗಳಲ್ಲ, ಕನ್ನಡದ ಬಿಹಾರಿಗಳು

ಡಿ.ಕೆ.ಶಿವಕುಮಾರ್ ಅವರು ಕನ್ನಡದ ಭಾಷಣವನ್ನು ‌ಬಿಹಾರಿ ಭಾಷೆಗೆ ತರ್ಜುಮೆ ಮಾಡಲು ಹೋದಾಗ, ನಾವು ಬಿಹಾರಿಗಳಲ್ಲ, ಕನ್ನಡದ ಬಿಹಾರಿಗಳು. ನ.1 ರಂದು ರಾಜ್ಯೋತ್ಸವ ‌ಆಚರಿಸಿದ್ದೇವೆ ಎಂದು ಸಭಿಕರು ಹೇಳಿದರು. ಆಗ ಡಿ.ಕೆ.ಶಿವಕುಮಾರ್, ಕನ್ನಡ ಕಲಿತಿರುವುದು ನೋಡಿದರೆ ಸಂತಸವಾಗುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ