
ಬೆಂಗಳೂರು/ದೆಹಲಿ (ಮೇ 29): ಕರ್ನಾಟಕ ರಾಜಕೀಯದ ಕುತೂಹಲ ಈಗ ರಾಷ್ಟ್ರ ರಾಜಧಾನಿ ದೆಹಲಿಯತ್ತ ನೆಟ್ಟಿದೆ. ರಾಜ್ಯ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟಕ್ಕೆ ತಲುಪಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ತಮ್ಮದೇ ಆದ ವಿಶೇಷ ಪಟ್ಟಿಯೊಂದಿಗೆ ದೆಹಲಿಗೆ ಹಾರಿದ್ದಾರೆ. ಆದರೆ, ಈ ಪಯಣದ ನಡುವೆ ಒಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ.
ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳುವ ವಿಮಾನದಲ್ಲಿ ಕುಳಿತೇ ತಮ್ಮ ಆಪ್ತ ಸಚಿವರ ಪಟ್ಟಿಯನ್ನು ಸಿದ್ಧಪಡಿಸುತ್ತಿರುವ ಎಕ್ಸ್ಕ್ಲೂಸಿವ್ ಮಾಹಿತಿ ಲಭ್ಯವಾಗಿವೆ. ಆದರೆ, ಡಿಕೆಶಿ ಅವರು ವಿಮಾನದ ಪ್ರಯಾಣದ ಸಮಯವನ್ನೂ ವ್ಯರ್ಥ ಮಾಡದೆ, ಅತ್ಯಂತ ಗೌಪ್ಯವಾಗಿ ಸಚಿವರಾಗುವವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈ ಪೋಟೋ ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮುಂದಿನ ಸರ್ಕಾರದಲ್ಲಿ ತಮ್ಮ ಪ್ರಭಾವ ಮತ್ತು ಹಿಡಿತ ಸಾಧಿಸಲು ಡಿ.ಕೆ. ಶಿವಕುಮಾರ್ ಅವರು ತಮ್ಮ ಪರಮಾಪ್ತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಯಾಬಿನೆಟ್ನಲ್ಲಿ ಯಾರ್ಯಾರು ಇರಬೇಕು, ಯಾರಿಗೆ ಯಾವ ಖಾತೆ ನೀಡಿದರೆ ಸೂಕ್ತ ಎಂಬ ಬಗ್ಗೆ ಡಿಕೆಶಿ ಈಗಾಗಲೇ ಒಂದು ಸ್ಪಷ್ಟ ನೀಲನಕ್ಷೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹಳೆ ಮೈಸೂರು ಭಾಗದ ನಾಯಕರು ಹಾಗೂ ಕನಕಪುರ ಬಂಡೆಯ ನೆರಳಲ್ಲಿ ಬೆಳೆದ ನಿಷ್ಠಾವಂತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ ಎಂಬ ಮಾಹಿತಿಯಿದೆ.
ದೆಹಲಿಗೆ ತಲುಪಿರುವ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದಾರೆ. ತಾವು ಸಿದ್ಧಪಡಿಸಿರುವ ಈ 'ಸ್ಪೆಷಲ್ ಲಿಸ್ಟ್' ಅನ್ನು ಹೈಕಮಾಂಡ್ ಮುಂದಿಟ್ಟು ಚರ್ಚಿಸಿದ್ದಾರೆ. ಒಂದು ವೇಳೆ ಹೈಕಮಾಂಡ್ ಈ ಪಟ್ಟಿಗೆ ಹಸಿರು ನಿಶಾನೆ (Green Signal) ನೀಡಿದರೆ, ಮುಖ್ಯಮಂತ್ರಿಯವರ ಜೊತೆಜೊತೆಗೇ ಸಚಿವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮದೇ ಆದ ಸಂಭಾವ್ಯ ಸಚಿವರ ಪಟ್ಟಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಈಗಿನ ಮಿಲಿಯನ್ ಡಾಲರ್ ಪ್ರಶ್ನೆ. ದೆಹಲಿಯಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಸಭೆಯ ನಂತರವಷ್ಟೇ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಸ್ಪಷ್ಟವಾಗಲಿದೆ.
ಒಟ್ಟಾರೆಯಾಗಿ, ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿರುವ ಡಿ.ಕೆ. ಶಿವಕುಮಾರ್ ಅವರ ನಡೆ, ಅವರು ಅಧಿಕಾರ ಹಂಚಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.