
ಬೆಂಗಳೂರು (ಸೆ.9): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಸೆಪ್ಟೆಂಬರ್ 10ರ ಗುರುವಾರ ಯಶಸ್ವಿ ಶತದಿನಗಳನ್ನು ಪೂರೈಸುತ್ತಿದೆ. ಈ ಸೆಂಚುರಿ ಸಂಭ್ರಮದ ದಿನದಂದು ರೈತರು, ಯುವಜನರು ಸೇರಿದಂತೆ ವಿವಿಧ ವರ್ಗದವರಿಗೆ ಕೆಲವು ಭರ್ಜರಿ ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ.
ಈ ಹೊಸ ಘೋಷಣೆಗಳೇನು ಎನ್ನುವುದನ್ನು ಸರ್ಕಾರದ ಶತದಿನಗಳ ಸಂಭ್ರಮದ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ.
ಸರ್ಕಾರಕ್ಕೆ 100 ದಿನಗಳು ತುಂಬುವ ದಿನವನ್ನು ವಿಶೇಷವಾಗಿ ಆಚರಿಸಲು ಸರ್ಕಾರದ ಮಟ್ಟದಲ್ಲಿ ಭರದ ಸಿದ್ಧತೆ ಆರಂಭವಾಗಿದೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ವೇಳೆ, ಸುಮಾರು 80 ಜನ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂವಾದ ನಡೆಸಲಿದ್ದಾರೆ.
ಇದೇ ವೇಳೆ, ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ಕೆಲವು ಆದ್ಯತೆಯ ಕ್ಷೇತ್ರಗಳಿಗೆ ನಾಲ್ಕೈದು ಭರ್ಜರಿ ಹೊಸ ಘೋಷಣೆ ಮಾಡುವ ನಿರೀಕ್ಷೆ ಇದೆ. ಈ ಬಾರಿ ಮುಂಗಾರು ಅಭಾವದಿಂದ ರಾಜ್ಯದ 101 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 40ರಿಂದ 50 ತಾಲೂಕುಗಳನ್ನು ಈ ಪಟ್ಟಿಗೆ ಸೇರಿಸಲು ಅಧ್ಯಯನ ನಡೆಸಿದೆ. ವಿವಿಧ ಜಿಲ್ಲೆಗಳಲ್ಲಿ ಸ್ವತಃ ಬರ ಅಧ್ಯಯನ ನಡೆಸಿ ಬಂದಿರುವ ಮುಖ್ಯಮಂತ್ರಿ ಅವರು, ಬರದಿಂದ ಆತಂಕಗೊಂಡಿರುವ ಅನ್ನದಾತನ ಅಭ್ಯುದಯಕ್ಕೆ ಭರವಸೆ ತುಂಬುವ ಕೊಡುಗೆ ನೀಡಲು ಮುಂದಾಗಿದ್ದಾರೆ.
ತಮ್ಮದೇ ಫ್ಲಾಗ್ಶಿಪ್ ಕಾರ್ಯಕ್ರಮ:
ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುಂದುವರೆಸುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದ ಸರ್ಕಾರ ಎನ್ನುವುದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫ್ಲಾಗ್ಶಿಪ್ ಆಗಿತ್ತು. ಅವರ ನಂತರ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ‘ಮನೆ ಬಾಗಿಲಿಗೆ ನಮ್ಮ ಸರ್ಕಾರ’ ಫ್ಲಾಗ್ಶಿಪ್ನಲ್ಲಿ ಯೋಜನೆಗಳನ್ನು ಘೋಷಿಸಲು ಸಜ್ಜಾಗಿದ್ದಾರೆ. ಬಿಡದಿ ಟೌನ್ಶಿಪ್ ವಿವಾದದ ಹಿನ್ನೆಲೆಯಲ್ಲಿ ತಮ್ಮ ಬಗ್ಗೆ ಮೂಡಿರುವ ಅಭಿಪ್ರಾಯ ತಪ್ಪು. ಇದೂ ಕೂಡ ಮಣ್ಣಿನ ಮಗನ ಸರಕಾರ ಎಂದು ಮನದಟ್ಟು ಮಾಡಿಕೊಡಲು ಬಯಸಿದ್ದಾರೆ. ಆಡಳಿತದಲ್ಲಿ ತಮ್ಮ ವ್ಯಕ್ತಿತ್ವ ಹಾಗೂ ಹೆಜ್ಜೆ ಗುರುತು ದಾಖಲಿಸಲು ಹೊಸ ಕಾರ್ಯಕ್ರಮಗಳನ್ನು ನೀಡುವ ಉತ್ಸಾಹದಲ್ಲಿ ಸಿಎಂ ಅವರಿದ್ದಾರೆ. ಇಡೀ ರಾಜ್ಯವನ್ನು ಬರಗಾಲ ಆವರಿಸಿರುವ ಸದ್ಯದ ಸಂದರ್ಭದಲ್ಲಿ ರೈತ ಸಮುದಾಯಕ್ಕೆ ನೆಮ್ಮದಿ ನೀಡುವ ಚಿಂತನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸೆ.10ರಂದು ನನ್ನ ಸರ್ಕಾರ 100 ದಿನಗಳನ್ನು ಪೂರೈಸುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂಬುದರ ಬಗ್ಗೆ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಘೋಷಿಸಿದ್ದೇನೆ. ಇವುಗಳ ಜೊತೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಘೋಷಿಸಲು ಸಿದ್ಧತೆ ಮಾಡಿಕೊಂಡಿದ್ದೇನೆ.
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.