ಅಧಿಕಾರ ಹಸ್ತಾಂತರ 5-6 ಜನರ ನಡುವಿನ ಗುಟ್ಟಿನ ವಿಚಾರ: ಡಿ.ಕೆ.ಶಿವಕುಮಾರ್ ಮಾರ್ಮಿಕ ಹೇಳಿಕೆ

Published : Nov 26, 2025, 05:59 AM IST
DK Shivakumar

ಸಾರಾಂಶ

ನಾನು ಆತ್ಮಸಾಕ್ಷಿಯನ್ನು ನಂಬಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ಮಾತ್ರ ನಾವು ಎಂದು ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ.

ಕನಕಪುರ (ನ.26): ‘ನಾನು ಆತ್ಮಸಾಕ್ಷಿಯನ್ನು ನಂಬಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ಮಾತ್ರ ನಾವು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಮಾರ್ಮಿಕವಾಗಿ ನುಡಿದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ಅವರು ನಮ್ಮ ಪಕ್ಷದ ಆಸ್ತಿ. ಸಿದ್ದರಾಮಯ್ಯ ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆಯ ಗುರಿಯತ್ತ ಗಮನ ಹರಿಸಬೇಕು’ ಎಂದು ಹೇಳಿದರು.

ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ: ನೀವು ಸಿಎಂ ಆಗಬೇಕು ಎಂದು ನಿಮ್ಮ ಅಭಿಮಾನಿಗಳು, ಸಾರ್ವಜನಿಕರು ಪೂಜೆ ಮಾಡುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ನನಗೆ ಅಧಿಕಾರ ಸಿಗಲಿ ಎಂದು ದೇವರಿಗೆ ಈಗ ಪೂಜೆ ಮಾಡುತ್ತಿರುವುದಕ್ಕಿಂತ ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ. ಬಿಜೆಪಿ ಆಡಳಿತದ ಅವಧಿಯಲ್ಲಿ ನಾನು ತಿಹಾರ್ ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು.

ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳೂ ಬಂದರು. ಆ ವೇಳೆ, ಮಾಜಿ ಸಿಎಂ ಕುಮಾರಸ್ವಾಮಿಯ ಕೂಡ ನನ್ನ ಪರ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ, ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಜೈಲಿಂದ ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಆದರೆ, ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ತುಂಬಿದ ಆತ್ಮಸ್ಥೈರ್ಯ ನನಗೆ ಬಹಳ ವಿಶೇಷವಾದುದು ಎಂದರು.

ಹಿಂದಿನ ವಿಧಾನಸಭಾ ಚುನಾವಣೆ ವೇಳೆ ‘ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕು’ ಎಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ನಾನೂ ಕೂಡ ಮಂಡ್ಯ ಸೇರಿ ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದು ಜನರಲ್ಲಿ ಮನವಿ ಮಾಡಿದ್ದೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದು, ಅವರ ಋಣ ನನ್ನ ಹಾಗೂ ಪಕ್ಷದ ಮೇಲಿದೆ. ಅವರಿಗೆ ದ್ರೋಹ ಬಗೆಯುವ ಕೆಲಸವನ್ನು ಎಂದೂ ಮಾಡುವುದಿಲ್ಲ ಎಂದು ಹೇಳಿದರು.

ಒಂದೇ ಕಾರಲ್ಲಿ ಖರ್ಗೆ-ಡಿಕೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿದ್ದರೂ ಅವರನ್ನು ಭೇಟಿಯಾಗದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಶುಕ್ರವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸದಾಶಿವನಗರದಲ್ಲಿನ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಒಂದೂವರೆ ಗಂಟೆ ಚರ್ಚೆ ನಡೆಸಿದ್ದರು.

ಅದಾದ ನಂತರ ಭಾನುವಾರ ಡಿ.ಕೆ.ಶಿವಕುಮಾರ್‌ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿದ್ದಾರೂ ಆ ಭೇಟಿ ನಡೆದಿರಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ದೆಹಲಿಗೆ ಹೊರಟ ಸಂದರ್ಭದಲ್ಲಿ ಸದಾಶಿವನಗರದ ನಿವಾಸಕ್ಕೆ ಬಂದ ಡಿ.ಕೆ.ಶಿವಕುಮಾರ್‌ ಅವರು, ಖರ್ಗೆ ಅವರೊಂದಿಗೆ ಅವರ ಕಾರಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳಿದರು. ಈ ವೇಳೆ ಯಾವುದೇ ನಾಯಕರು ಜತೆಗಿರಲಿಲ್ಲ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲೇ ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ.ಶಿವಕುಮಾರ್‌ ಅವರ ಈ ಭೇಟಿ ಕಾಂಗ್ರೆಸ್‌ ಪಾಳಯದಲ್ಲಿ ಸಾಕಷ್ಟು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ