
ನವದೆಹಲಿ (ಡಿ.15): ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಸಿಎಂ ಬದಲಾವಣೆ ಕುರಿತು ವರಿಷ್ಠ ನಾಯಕರ ಜೊತೆ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದು, ‘ಶೀಘ್ರವೇ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ವರಿಷ್ಠ ನಾಯಕರು ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾನುವಾರ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ‘ವೋಟ್ ಚೋರಿ’ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಪ್ರತಿಭಟನೆ ನಂತರ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ಇಂದಿರಾ ಭವನದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಮಾತುಕತೆ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿಗತಿ, ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಹೈಕಮಾಂಡ್ ಸಮ್ಮುಖದಲ್ಲಿ ನಡೆದಿದೆ ಎನ್ನಲಾದ ಅಧಿಕಾರ ಹಸ್ತಾಂತರ ಕುರಿತ ಒಪ್ಪಂದ, ಅಧಿಕಾರ ಹಸ್ತಾಂತರ ಕುರಿತ ಸಿದ್ದರಾಮಯ್ಯ ನಿಲುವು, ಬೆಂಬಲಿಗರ ಆಕ್ರೋಶ ಸೇರಿ ರಾಜಕೀಯ ವಿದ್ಯಮಾನಗಳ ಕುರಿತು ವಿವರವಾದ ಮಾಹಿತಿ ನೀಡಿದರು ಎನ್ನಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಮಾತುಗಳನ್ನು ಆಲಿಸಿದ ಉಭಯ ನಾಯಕರು, ಅಧಿಕಾರ ಹಸ್ತಾಂತರ ಕುರಿತ ಸಮಸ್ಯೆ ಶೀಘ್ರ ಬಗೆಹರಿಸುವ ಕುರಿತು ಅಭಯ ನೀಡಿದರು ಎಂದು ಮೂಲಗಳು ತಿಳಿಸಿವೆ.
ಸಭೆ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇದೊಂದು ಉಭಯ ಕುಶಲೋಪರಿ ಭೇಟಿ. ವೋಟ್ ಚೋರಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಬಂದಿದ್ದೆ. ಸಹಜವಾಗಿ ವರಿಷ್ಠರನ್ನು ಭೇಟಿ ಮಾಡಿದ್ದೇನೆ. ‘ಎಐಸಿಸಿ ಕಚೇರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ. ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಾತುಕತೆ ವೇಳೆ ಏನೆಲ್ಲ ಚರ್ಚೆಯಾಗಿದೆ ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದರ ಅವಶ್ಯಕತೆಯೂ ಇಲ್ಲ. ಇನ್ನು, ಪ್ರತ್ಯೇಕ ಭೇಟಿ ಬಗ್ಗೆ ಆಮೇಲೆ ಹೇಳ್ತಿನಿ’ ಎಂದರು. ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಪುನರುಚ್ಚರಿಸಿದರು. ಬಳಿಕ, ಡಿ.ಕೆ.ಶಿವಕುಮಾರ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರ ಭೇಟಿಗೆ ತೆರಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.