ಸಿಎಂ-ಡಿಸಿಎಂ ಬೇಡಿಕೆ ನಿಲ್ಲಿಸಿ, ಬಾಯಿಗೆ ಬೀಗ ಹಾಕೊಳ್ಳಿ: ಡಿಕೆಶಿ ಎಚ್ಚರಿಕೆ

By Kannadaprabha NewsFirst Published Jun 30, 2024, 6:51 AM IST
Highlights

ಸಿಎಂ ಮತ್ತು ಡಿಸಿಎಂ ಬದಲಾವಣೆ ಹಾಗೂ ಹುದ್ದೆ ಸೃಷ್ಟಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವೂ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ತಿಳಿದಿದೆ. ಇಂದು ಅವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಜೂ.30):  ‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಮುಲಾಜಿಲ್ಲದೆ ನೋಟಿಸ್‌ ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ’ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಸದಾಶಿವನಗರದ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿಎಂ ಮತ್ತು ಡಿಸಿಎಂ ಬದಲಾವಣೆ ಹಾಗೂ ಹುದ್ದೆ ಸೃಷ್ಟಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವೂ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ತಿಳಿದಿದೆ. ಇಂದು ಅವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ’ ಎಂದರು.

ಸಿದ್ದು, ಡಿಕೆಶಿ ಇಬ್ಬರೂ ಕಾಂಗ್ರೆಸ್‌ನ ಎರಡು ಕಣ್ಣು ಇದ್ದ ಹಾಗೆ‌: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಸಿಎಂ, ಡಿಸಿಎಂ ಬದಲಾವಣೆ ಚರ್ಚೆಯಾಗಿಲ್ಲ:

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಮತ್ತು ನಾನು ಪಕ್ಷದ ಹಿತದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಿಸಿದ್ದೇವೆ. ಆ ವಿಚಾರವಾಗಿ ಯಾವುದೇ ಸಚಿವರು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆಯಿಲ್ಲ. ಅಲ್ಲದೆ, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ ಬಳಿ ಯಾವುದೇ ಚರ್ಚೆಯಾಗಿಲ್ಲ’ ಎಂದು ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದರು.

ಸ್ವಾಮೀಜಿಗಳು ರಾಜಕೀಯದ ಸುದ್ದಿಗೆ ಬರಬೇಡಿ:

ಸಿಎಂ ವಿಚಾರವಾಗಿ ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಬೇಕು. ನಾನು ಸಿಎಂ ಆಗಲು ಯಾರೂ ಶಿಫಾರಸು ಮಾಡುವುದು ಬೇಡ. ನಾನು ಮಾಡಿರುವ ಕೆಲಸವನ್ನು ನೋಡಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ದಯವಿಟ್ಟು ಈ ವಿಚಾರ ಇಲ್ಲಿಗೆ ಮುಗಿಸಿಬಿಡಿ’ ಎಂದು ಡಿ.ಕೆ. ಶಿವಕುಮಾರ್‌ ಕೋರಿದರು.

ಡಿ.ಕೆ.ಶಿವಕುಮಾರ್‌ಗೆ ಸಿಎಂ ಆಗುವ ಅವಕಾಶ ಇದೆ: ಶಾಸಕ ಇಕ್ಬಾಲ್ ಹುಸೇನ್

ಈ ವೇಳೆ ಲಿಂಗಾಯತ ಸ್ವಾಮೀಜಿ ಸೇರಿದಂತೆ ಇತರರು ಸಿಎಂ ವಿಚಾರವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಶ್ನೆಗೆ ಉತ್ತರಿಸಿ, ‘ಯಾವ ಸ್ವಾಮೀಜಿಗಳೂ ಈವರೆಗೆ ಮಾತನಾಡಿರಲಿಲ್ಲ. ಇವತ್ತೇ ಸ್ವಾಮೀಜಿಗಳು ಮಾತನಾಡಿದ್ದು. ಎಲ್ಲರಿಗೂ ಕೈಮುಗಿದು ಕೇಳುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ’ ಎಂದರು.

ರಾಜಕಾರಣದ ಸುದ್ದಿಗೆ ಬರಬೇಡಿ, ಕೈಮುಗಿವೆ

ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಬೇಕು. ನಾನು ಸಿಎಂ ಆಗಲು ಯಾರೂ ಶಿಫಾರಸು ಮಾಡುವುದು ಬೇಡ. ಕೈಮುಗಿದು ಕೇಳುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

click me!