
ಮಾಗಡಿ (ಮಾ.05): ನಾವು ಸುಳ್ಳು ಹೇಳಿ ಕೆಲಸ ಮಾಡುವವರಲ್ಲ, ನಿಮ್ಮ ಬಳಿ ಅತ್ತು ಕರೆದು ನಾಟಕ ಮಾಡುವವರಲ್ಲ. ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುವವನು, ಕೊಟ್ಟ ಭರವಸೆ ಈಡೇರುವ ತನಕ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ತಾಲೂಕಿನ ಚಕ್ರಭಾವಿಯಲ್ಲಿ ನಡೆದ ವೈ.ಜಿ.ಗುಡ್ಡ ಏತನೀರಾವರಿ ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಮುಂದಕ್ಕಾದರೂ ಇರುತ್ತದೆ ಎಂದು ಭಾವಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟವರ ಋಣವನ್ನ ಉಸಿರಿರುವ ತನಕ ತೀರಿಸುತ್ತೇನೆ. ಬಮುಲ್ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ್ರತಿದಿನ ಹಾಲು, ಮೊಸರು, ತುಪ್ಪ ತೆಗೆದುಕೊಳ್ಳಿ, ಹಸು ಕಟ್ಟಿ ಎಂದು ಹೇಳುವ ಕೆಲಸ ನೀಡಿದ್ದೀರಿ. ರೈತರನ್ನು ಕಾಪಾಡುವ ಕಾರ್ಯವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಹಾಗೂ ನಾವು ಮಾಡಲಿದ್ದೇವೆ ಎಂದರು.
ಮಾಗಡಿ ಜನತೆ ಅದೃಷ್ಟವಂತರು. ನನ್ನನ್ನು ಸೋಲಿಸಿಯೂ ನನ್ನಿಂದಲೂ ಕೆಲಸ ಮಾಡಿಸಿಕೊಳ್ಳುತ್ತಿದ್ದೀರಿ. ಡಿ.ಕೆ.ಶಿವಕುಮಾರ್ ಅವರಿಂದಲೂ ಕೆಲಸ ಮಾಡಿಸಿಕೊಳ್ಳುತ್ತಿದ್ದೀರಿ. ಶಾಸಕ ಬಾಲಕೃಷ್ಣ ಎಲ್ಲೆಲ್ಲಿ ಕೆಲಸ ಆಗುತ್ತದೆಯೋ ಅಲ್ಲೆಲ್ಲ ಕಥೆ ಕಟ್ಟುತ್ತಾ ಇರುತ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ ನೀರಿನ ಅಭಾವ ನೀಗಿಸುವ ಕೆಲಸವನ್ನ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ರಾಜ್ಯದಲ್ಲಿಯೇ ನಂ.1 ಮಾಡುವ ಕನಸು ಶಿವಕುಮಾರ್ ಅವರದ್ದು. ಮಾಗಡಿಯ ಅಭಿವೃದ್ಧಿ 2027- 28ಕ್ಕೆ ಅಚ್ಚರಿ ಮೂಡಿಸಲಿದೆ. ಪಟ್ಟಣದ ಒಳಗೆ ರಸ್ತೆಗಳು ಅಚ್ಚುಕಟ್ಟಾಗಿವೆ. ಜೊತೆಗೆ ಗ್ರಾಮೀಣ ಪ್ರದೇಶದ ರಸ್ತೆಗಳು ಅತ್ಯುತ್ತಮ ಸ್ಥಿತಿಯಲ್ಲಿವೆ. ಈ ಕ್ಷೇತ್ರದಲ್ಲಿ 1 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸುರೇಶ್ ತಿಳಿಸಿದರು.
ಶಾಸಕ ಬಾಲಕೃಷ್ಣ ಮಾತನಾಡಿ, ಹತ್ತು ವರ್ಷಗಳ ಹಿಂದೆಯೇ ಡಿಕೆ ಸಹೋದರರ ಜೊತೆ ಸೇರಿದ್ದರೆ ಮಾಗಡಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಆಗುತ್ತಿತ್ತು. ಆದರೆ, ನಾನು ತಪ್ಪಾದ ಜಾಗದಲ್ಲಿದ್ದು ಸಮಯ ವ್ಯರ್ಥ ಮಾಡಿದೆ. ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಡಿಕೆ ಸಹೋದರರ ಕೊಡುಗೆ ಅಪಾರ. ಎಕ್ಸ್ ಪ್ರೆಸ್ ಕೆನಾಲ್ ಗೆ ತುಮಕೂರಿನ ಜನರ ವಿರೋಧ ಲೆಕ್ಕಿಸದೆ ನೀರು ತರಲು ಶ್ರಮಿಸುತ್ತಿದ್ದಾರೆ ಎಂದರು.
ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಹೇಮಾವತಿ ನೀರಿಗೆ ಅವಕಾಶ ಕೊಡುವಂತೆ ಕೇಳಿದ್ದೆ. ಆಗ ಅವರು ಅಧಿಕಾರಿಗಳಿಂದ ಹೇಮಾವತಿ ನೀರು ಮಾಗಡಿಗೆ ಬರಲ್ಲ ಅಂತ ಹೇಳಿಸಿದ್ದರು. ಅವರು ಹೇಳಿದ್ದು ಸುಳ್ಳೆಂದು ಈಗ ನಮಗೆ ಗೊತ್ತಾಗಿದೆ. ಭಾವನಾತ್ಮಕವಾಗಿ ಮಾತನಾಡಿ, ಕಣ್ಣೀರು ಹಾಕಿದರೆ ಹೊಟ್ಟೆ ತುಂಬಲ್ಲ. ಕೆಲಸ ಮಾಡಿದರೆ ಮಾತ್ರ ಜನರಿಗೆ ಅನುಕೂಲ ಆಗುತ್ತದೆ ಎಂದು ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ಟೀಕಿಸಿದರು.
ಡಿಕೆ ಸಹೋದರರು ಕಣ್ಣೀರು ಹಾಕಲ್ಲ. ಮಾಗಡಿ ತಾಲೂಕಿನ ರೈತರಿಗೆ ಉಚಿತ ಟ್ರಾನ್ಸ್ಫಾರ್ಮರ್, ನೀರಾವರಿ ಯೋಜನೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡಿದರು. ಆದರೆ, ಚುನಾವಣೆಯಲ್ಲಿ ಮತ ಹಾಕುವಾಗ ನೀವು ಡಿ.ಕೆ.ಸುರೇಶ್ ಅವರನ್ನು ನೆನಪಿಸಿಕೊಳ್ಳಲಿಲ್ಲ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕಣ್ಣೀರು ಹಾಕಿ ಕೂಲಿ ಕೇಳಲ್ಲ ಎಂದು ಬಾಲಕೃಷ್ಣ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.