
ಬೆಂಗಳೂರು (ಜೂ.18): ಮಾಜಿ ಸಂಸದರೂ ಆಗಿರುವ ಸಹೋದರ ಡಿ.ಕೆ.ಸುರೇಶ್ ಅವರು ಜಾರಿ ನಿರ್ದೇಶನಾಲಯ (ಇ.ಡಿ.)ದ ತನಿಖೆಗೆ ಸಹಕಾರ ನೀಡುತ್ತಾರೆ. ನಮ್ಮ ಸಹೋದರಿ ಎಂದು ಹೇಳಿಕೊಂಡಿರುವ ಮಹಿಳೆಯ ವಿರುದ್ಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
‘ಐಶ್ವರ್ಯಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್ ಅವರಿಗೆ ಇ.ಡಿ. ಸಮನ್ಸ್ ನೀಡಿದೆಯಲ್ಲಾ’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ‘ಸುರೇಶ್ ಇ.ಡಿ. ತನಿಖೆಗೆ ಸಹಕಾರ ನೀಡಲಿದ್ದು, ಹೇಳಿಕೆ ಸಲ್ಲಿಸಲಿದ್ದಾರೆ. ನಮ್ಮ ಹೆಸರನ್ನು ಅಪರಿಚಿತರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಈಗಾಗಲೇ ಸುರೇಶ್ ಪೊಲೀಸರಿಗೆ ದೂರು ನೀಡಿದ್ದಾರೆ’ ಎಂದು ವಿವರಿಸಿದರು.
ಜಾತಿ ಗಣತಿಗೆ ರಾಹುಲ್ ಗಾಂಧಿ ಐಡಿಯಾ ಕಾಪಿ: ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿ ಅವರನ್ನು ಕಾಪಿ ಮಾಡುತ್ತಿದ್ದಾರೆ. ಅವರೇನು ಮಾಡುತ್ತಾರೋ ಮಾಡಲಿ. ನಮ್ಮದು ಅಭ್ಯಂತರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಗೆ ಮುಂದಾಗುವ ಮೂಲಕ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿ ಅವರನ್ನು ಕಾಪಿ ಮಾಡುತ್ತಿದ್ದಾರೆ ಎಂದರು.
ದುರ್ಬಲ ವರ್ಗದವರಿಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬಲು ನಾವು ಮರುಸಮೀಕ್ಷೆ ಮಾಡುತ್ತಿದ್ದೇವೆ. ನಿಯಮಾನುಸಾರ ಮರುಸಮೀಕ್ಷೆ ಕೈಗೊಳ್ಳಲು ನಮ್ಮ ಸರ್ಕಾರ ಮುಂದಾಗಿದೆ. ಕಾಂತರಾಜು ಆಯೋಗದ ವರದಿ ಜಾರಿಯಾಗಿದ್ದರೆ ಹಿಂದುಳಿದ ವರ್ಗಕ್ಕೆ ಶಕ್ತಿ ಬರುತ್ತಿತ್ತು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ವಿಮಾನ ದುರಂತ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ: ಅಹಮದಾಬಾದ್ ವಿಮಾನ ದುರಂತದ ಕುರಿತು ನಾವು ಯಾವುದೇ ರಾಜಕೀಯ ಮಾಡುವುದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದೇನಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ವಿಮಾನ ಅಪಘಾತದಂಥ ದುರ್ಘಟನೆ ದೇಶದಲ್ಲಿ ಮಾತ್ರವಲ್ಲ, ಪ್ರಪಂಚದಲ್ಲಿ ಎಲ್ಲೂ ಸಂಭವಿಸಬಾರದು. ವಿಮಾನ ಅಪಘಾತಕ್ಕೀಡಾದ ಸ್ಥಳ ನೋಡಿದರೆ ಅಘಾತವಾಗುತ್ತದೆ. ವಿಮಾನ 500 ಮೀಟರ್ ಮುಂದೆ ಹೋಗಿ ಅಪ್ಪಳಿಸಿದ್ದರೆ ಸಾವಿರಾರು ಮಂದಿ ಸಾವಿಗೀಡಾಗುತ್ತಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಾವು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೆವು. ವಿಮಾನ ಅಪಘಾತದಿಂದ ಗಾಯಗೊಂಡಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನೂ ಮಾತನಾಡಿಸಿ, ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.