
ಬೆಂಗಳೂರು (ಏ.14): ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಹೈಕಮಾಂಡ್ ಹಿರಿಯ ಸಚಿವರು ರಾಜೀನಾಮೆ ನೀಡಬೇಕೆಂದು ತೀರ್ಮಾನ ತೆಗೆದುಕೊಂಡರೆ ಅದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಲೇ ಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸಚಿವಾಕಾಂಕ್ಷಿ ಶಾಸಕರ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಎರಡು, ಮೂರು ಬಾರಿ ಶಾಸಕರಾಗಿರುವವರಿಗೆ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇರುತ್ತದೆ. ಯಾವುದೇ ಖಾತೆಯನ್ನಾಗಲಿ ನಿಭಾಯಿಸುವ ಅನುಭವ ಸಹಜವಾಗಿರುತ್ತದೆ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಹೊಸಬರಿಗೆ ಅವಕಾಶ ಮಾಡಿಕೊಡಲು ಸಂಪುಟದಲ್ಲಿರುವ ಹಿರಿಯರೂ ರಾಜೀನಾಮೆ ನೀಡಬೇಕು ಎಂದಾದರೆ, ನಾನಾಗಲಿ, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಎಚ್.ಕೆ.ಪಾಟೀಲ್ ಸೇರಿ ಹಿರಿಯ ಸಚಿವರು ಹೈಕಮಾಂಡ್ ನಿರ್ಧಾರವನ್ನು ಒಪ್ಪದೆ ಪ್ರಶ್ನೆ ಮಾಡಲು ಅವಕಾಶ ಇಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಸಚಿವ ಸ್ಥಾನದಿಂದ ನಮ್ಮನ್ನು ಬದಲಾವಣೆ ಮಾಡಿದರೆ, ಬೇಡ ಎನ್ನಲು ಸಾಧ್ಯವಿಲ್ಲ. ಅನನುಭವಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂಬುದು ನಮಗೆ ಸಂಬಂಧ ಪಡದ ವಿಚಾರ ಎಂದರು.
ಹಿರಿಯ ಶಾಸಕರ ದೆಹಲಿ ಪ್ರವಾಸವನ್ನು ಗ್ಯಾಂಬ್ಲಿಂಗ್ ಎಂದು ಕರೆಯುವುದು ಸರಿಯಲ್ಲ. ಕೆಲವರು ಬಹಿರಂಗವಾಗಿ ಸಚಿವ ಸ್ಥಾನಕ್ಕಾಗಿ ಬೇಡಿಕೆ ಸಲ್ಲಿಸುತ್ತಿರಬಹುದು. ಅರ್ಹತೆ ಇದೆ ಎಂದು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವಕಾಶ ಸಿಕ್ಕವರಿಗೆ ಮತ್ತೆ ಸಿಗುತ್ತಿದೆ. ಹೊಸಬರಿಗೆ ಅವಕಾಶ ಬೇಕು ಎಂಬುದೂ ಸರಿ. ಪ್ರತಿ ಬಾರಿ ಸಂಪುಟ ಪುನರ್ ರಚನೆ ಮಾಡುವಾಗಲೂ ಕೆಲ ಹಿರಿಯರನ್ನು ಉಳಿಸಿಕೊಂಡು ಕಿರಿಯರಿಗೆ ಅವಕಾಶ ಕಲ್ಪಿಸುವುದು ಸಾಮಾನ್ಯ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.