
ಬೆಂಗಳೂರು (ಜ.02): ಯುವ ಜನರಲ್ಲಿ ಡ್ರಗ್ಸ್ ಹಾವಳಿ, ಅಪರಾಧ ಪ್ರಕರಣಗಳತ್ತ ಆಕರ್ಷಣೆ ಹೆಚ್ಚಾಗುತ್ತಿವೆ. ಸಮಾಜ ದ್ರೋಹದ ಕೆಲಸಗಳತ್ತ ಯುವಜನತೆ ವಾಲದಂತೆ ಕಾಪಾಡುವ ಸವಾಲು ಐಪಿಎಸ್ ಅಧಿಕಾರಿಗಳು ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಯುವ ಜನತೆ ನಮ್ಮ ಸಮಾಜದ ಆಸ್ತಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ. ಉತ್ತಮ ಬದಲಾವಣೆ, ಸುಧಾರಣೆಗೆ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದು ಹೇಳಿದರು.
ಭ್ರಷ್ಟಾಚಾರ ಹೆಚ್ಚಾಗುತ್ತಿದೆ: ಸಮಾಜದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದ್ದರೂ ಭ್ರಷ್ಟಾಚಾರದ ಪಿಡುಗು ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಚುನಾವಣಾ ವ್ಯವಸ್ಥೆಯೇ ಕೆಟ್ಟು ಹೋಗಿದೆ. ಹೀಗಾಗಿ ನಾನು ಭ್ರಷ್ಟಾಚಾರ ವ್ಯವಸ್ಥೆ ಬಗ್ಗೆ ಮಾತನಾಡಲ್ಲ. ಆದರೆ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದರು.
ಅನುಭವದಿಂದ ಕಾರ್ಯ ದಕ್ಷತೆ ಹೆಚ್ಚಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ ಕರೆ
ಪ್ರಾದೇಶಿಕ ಅಸಮತೋಲನ ನಿವಾರಿಸಬೇಕು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 35 ಸಾವಿರ ಕೋಟಿ ರು. ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎಂಬುದನ್ನು ನೀವು ಗಂಭೀರವಾಗಿ ಪರಿಗಣಿಸಿ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ಆರ್ಥಿಕ ಶಿಸ್ತು ಕಾಪಾಡಬೇಕಿದೆ: ಕಳೆದ ಸರ್ಕಾರ ಸುಮಾರು 39 ಸಾವಿರ ಕೋಟಿ ಗುತ್ತಿಗೆ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜತೆಗೆ ಕೇಂದ್ರ ಸರ್ಕಾರದಿಂದಲೂ ನಮಗೆ ಅನ್ಯಾಯ ಮುಂದುವರೆದಿದೆ. ಇದರ ನಡುವೆಯೂ ಹಣ ಸಂಗ್ರಹಿಸುವ ಇಲಾಖೆ ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಿ ಆರ್ಥಿಕ ಶಿಸ್ತು ಕಾಪಾಡಬೇಕಿದೆ ಎಂದು ಸಲಹೆ ನೀಡಿದರು.
ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ
ಜನವರಿ ಮೊದಲ ವಾರ ದೆಹಲಿಗೆ ಸಿಎಂ, ಡಿಸಿಎಂ ಭೇಟಿ: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಹೊಸ ವರ್ಷದ ಮೊದಲ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪರಿಷತ್ ಚುನಾವಣೆ ಟಿಕೆಟ್ ಲೆಕ್ಕಾಚಾರ ಜೋರಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಮಟ್ಟದ ನಾಯಕರ ಜೊತೆ ಈಗಾಗಲೇ ಒಂದು ಸುತ್ತು ಚರ್ಚೆ ನಡೆಸಿದ್ದಾರೆ. ಮುಂದಿನ ಹಂತವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡರ ಜೊತೆಗೆ ಈ ಸಂಬಂಧ ಚರ್ಚಿಸಲು ಜನವರಿ ಮೊದಲ ವಾರ ದೆಹಲಿಗೆ ತೆರಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.