ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ ಚೈತನ್ಯ ಹೆಚ್ಚಾಗಲಿದೆ: ಸಿಎಂ ಸಿದ್ದರಾಮಯ್ಯ

Published : Nov 15, 2025, 07:38 AM IST
Siddaramaiah

ಸಾರಾಂಶ

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ ಹಾಗೂ ಸಾಮಾಜಿಕ ಚೈತನ್ಯ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು (ನ.15): ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ ಹಾಗೂ ಸಾಮಾಜಿಕ ಚೈತನ್ಯ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, ಸಹಕಾರಿ ಕ್ಷೇತ್ರದ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ವಿತರಿಸಿ ಮಾತನಾಡಿದರು.

ರಾಜ್ಯದ ಗದಗ ಜಿಲ್ಲೆಯ ಕಣಗಿನಾಳ್‌ನಲ್ಲಿ ಮೊಟ್ಟ ಮೊದಲ ಸಹಕಾರ ಬ್ಯಾಂಕ್ ಸ್ಥಾಪನೆ ಆಗಿತ್ತು. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ. ಗ್ರಾಮೀಣ ಭಾರತದ ಪ್ರಗತಿಗಾಗಿ ಸಹಕಾರ ಕ್ಷೇತ್ರ ಬಹಳ ಮುಖ್ಯವಾಗಿದ್ದು, ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ವಾರ್ಷಿಕ ವಹಿವಾಟು 25 ಸಾವಿರ ಕೋಟಿ ರು.ನೊಂದಿಗೆ ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾ ಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು ಎಂದರು.

ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಮಾತನಾಡಿ, ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ನೆಹರೂ ಅವರು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆ ಮೂಲಕ, ಸಹಕಾರ ಕ್ಷೇತ್ರಕ್ಕೆ ವಿಶೇಷ ಪ್ರೋತ್ಸಾಹ ಮತ್ತು ನೆರವು ನೀಡಿದ್ದರು. ಸಹಕಾರ ಕ್ಷೇತ್ರ ಬಲಗೊಳಿಸಿದ ನೆಹರೂ ಅವರ ಸ್ಮರಣಾರ್ಥ ಅಖಿಲ ಭಾರತ ಸಹಕಾರ ಸಪ್ತಾಹ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರವು ಸಹಕಾರ ಸಂಘಗಳ ವಿಚಾರ ಪಠ್ಯಪುಸ್ತಕಗಳಿಗೆ ಸೇರ್ಪಡೆ ಮಾಡಿ ಯುವಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್‌.ಟಿ.ಸೋಮಶೇಖರ್‌, ಶಾಸಕರಾದ ಕೆ.ಷಡಕ್ಷರಿ, ಪ್ರಕಾಶ್ ಕೋಳಿವಾಡ್ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಳಿ ಅನಾವರಣ

ರಾಜ್ಯ ಸಹಕಾರ ಮಹಾಮಂಡಳದ ಆವರಣದಲ್ಲಿ ಬಿ.ಎಸ್‌.ವಿಶ್ವನಾಥ್‌ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಇದೇ ವೇಳೆ ಯುವಪೀಳಿಗೆ ಬಿ.ಎಸ್‌.ವಿಶ್ವನಾಥ್‌ ಅವರ ಆದರ್ಶಗಳನ್ನು ಪಾಲಿಸಿ, ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. 2013ರಲ್ಲಿ ಮುಖ್ಯಮಂತ್ರಿಯಾದ ನಂತರ ಪ್ರತಿ ಲೀಟರ್‌ ಹಾಲಿಗೆ 3 ರು. ಪ್ರೋತ್ಸಾಹ ಧನ ಘೋಷಿಸಿದ್ದೆ. ಬಳಿಕ ಪ್ರೋತ್ಸಾಹ ಧನವನ್ನು ಲೀಟರ್‌ಗೆ 5 ರು.ಗೆ ಹೆಚ್ಚಿಸಿದ್ದೇವೆ. ಪ್ರತೀ ದಿನ ಸರ್ಕಾರದಿಂದ 5 ಕೋಟಿ ರು. ಸಹಾಯಧನ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲ ಹಾಲು ಮಹಾ ಮಂಡಳ ತಾಯಿಬೇರು ಇದ್ದಂತೆ ಎಂದು ಹೇಳಿದರು.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆ. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು ಎಂದು ಸ್ಮರಿಸಿದರು. ಇದೇ ವೇಳೆ ಸಹಕಾರಿ ಕ್ಷೇತ್ರದ ಸಾಧಕರಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ